ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಗಾಂಗ ದಾನ ಹಾಗೂ ನೇತ್ರದಾನದ ಕುರಿತು ಅರಿವು ಮೂಡಿಸುವ ಸಲುವಾಗಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು 3 ಕಿಲೋ ಮೀಟರ್ ವಾಕಥಾನ್ ನಡೆಸಿದರು.
ಜಯಚಾಮರಾಜೇಂದ್ರ ವೃತ್ತದ ಬಳಿ ಇರುವ ನೆಲದಾಂಜನೇಯಸ್ವಾಮಿ ದೇವಾಲಯದ ಮುಂಭಾಗ ವಾಕಥಾನ್ಗೆ ಲಯನ್ಸ್ ಜಿಲ್ಲಾ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಹಾಗೂ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಚಾಲನೆ ನೀಡಿದರು.
ಟಿ.ಸಿದ್ದಲಿಂಗಯ್ಯ ವೃತ್ತ, ಕೊಂಗಾಡಿಯಪ್ಪ ಬಸ್ ನಿಲ್ದಾಣ, ಸೌಂದರ್ಯಮಹಲ್ ವೃತ್ತ, ಚೌಕ, ಮುಕ್ತಾಂಬಿಕಾ ರಸ್ತೆ, ಎಚ್.ಮುಗುವಾಳಪ್ಪ ವೃತ್ತ, ಶಾಂತಿನಗರ ಮೂಲಕ ಆರ್.ಎಲ್.ಜಾಲಪ್ಪ ವಿದ್ಯಾ ಸಂಸ್ಥೆ ಕ್ಯಾಂಪಸ್ಗೆ ವಾಕಥಾನ್ ನಡೆಸಲಾಯಿತು. ವಿದ್ಯಾರ್ಥಿಗಳು ಅಂಗಾಂಗ ದಾನ, ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಂದೇಶಗಳನ್ನು ಹೊತ್ತ ಬಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಿದರು.
ಇಲ್ಲಿನ ಶ್ರೀದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರ್.ಎಲ್.ಜಾಲಪ್ಪ ಮೆಡಿಕಲ್ ಕಾಲೇಜಿನ ನೇತ್ರತಜ್ಞ ಡಾ.ನರೇಂದ್ರ ಮಾತನಾಡಿ, 18 ವರ್ಷ ಮೀರಿದ ಯಾವುದೇ ವ್ಯಕ್ತಿ ನೇತ್ರದಾನಕ್ಕೆ ನೊಂದಣಿ ಮಾಡಬಹುದು. ಡಾ.ರಾಜ್ಕುಮಾರ್, ಪುನಿತ್ರಾಜ್ಕುಮಾರ್, ಜಾಲಪ್ಪ ಸೇರಿದಂತೆ ಅನೇಕ ಮಹನೀಯರು ನೇತ್ರದಾನ ಮಾಡುವ ಮಾಡುವ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಇಂತಹ ಗಣ್ಯರ ನಡೆ ಇತರರಿಗೂ ಮಾದರಿಯಾಗಿದ್ದು, ಮರಣಾನಂತರ ಕಣ್ಣುಗಳನ್ನು ದಾನ ಮಾಡುವ ಜನರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದರು.
ಕಣ್ಣಿನ ದಾನದ ಬಗ್ಗೆ ಹಲವು ಮೂಢನಂಬಿಕೆಗಳು ಜನರಲ್ಲಿದ್ದು, ಅವುಗಳಿಂದ ಮುಕ್ತವಾಗುವುದು ಅಗತ್ಯ. ತಪ್ಪುಗ್ರಹಿಕೆಯನ್ನು ದೂರಮಾಡಿ, ವೈಜ್ಞಾನಿಕ ಸತ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು. ಒಬ್ಬ ವ್ಯಕ್ತಿಯ ಕಣ್ಣುಗಳು ನಾಲ್ವರಿಗೆ ದೃಷ್ಟಿ ನೀಡಲು ನೆರವಾಗುತ್ತವೆ ಎಂದು ತಿಳಿಸಿದರು.
ಲಯನ್ಸ್ ಜಿಲ್ಲೆ 317ಎಫ್ನ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಮಾತನಾಡಿ, ಮಾನವೀಯ ನೆಲೆಗಟ್ಟಿನ ಉದ್ದೇಶವೊಂದರ ಸಾಫಲ್ಯಕ್ಕೆ ನೂರಾರು ಜನರು ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ವಿಚಾರ ಎಂದರು.
ಎಸ್ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ನೇತ್ರದಾನದಲ್ಲಿ ದೊಡ್ಡಬಳ್ಳಾಪುರ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈವರೆಗೆ ಸುಮಾರು ಎರಡೂವರೆ ಸಾವಿರ ಕಣ್ಣುಗಳನ್ನು ದಾನ ಮಾಡಿರುವ ಅನನ್ಯ ಕಾರ್ಯವನ್ನು ಈ ತಾಲೂಕು ಮಾಡಿದ್ದು, ಈ ಬಗ್ಗೆ ಮತ್ತಷ್ಟು ಜಾಗೃತಿ ಉಂಟಾಗಬೇಕು ಎಂದರು.
ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ನ ಅಧ್ಯಕ್ಷ ಜೆ.ಆರ್.ರಾಕೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಜಿಲ್ಲಾ ಗ್ರಾಮೀಣ ಡಯಾಬಿಟಿಕ್ ಸಂಯೋಜಕ ಎಲ್.ಎನ್.ಪ್ರದೀಪ್ಕುಮಾರ್, ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಆರ್ಎಲ್ಜೆಐಟಿ ಪ್ರಾಂಶುಪಾಲ ಡಾ.ವಿಜಯ್ಕಾರ್ತಿಕ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಇದೇ ವೇಳೆ ನೇತ್ರದಾನ ನೊಂದಣಿ ಕಾರ್ಯ ನಡೆಯಿತು. ಹಲವರು ತಮ್ಮ ಮರಣಾ ನಂತರ ಕಣ್ಣುಗಳನ್ನು ದಾನ ಮಾಡುವುದಾಗಿ ನೊಂದಣಿ ಮಾಡಿದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…