ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್, ಅಕ್ಷಯ ಲಿಯೋ ಕ್ಲಬ್ ಹಾಗೂ ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಹಯೋಗದಲ್ಲಿ ಅಂಗಾಂಗ ದಾನ ಹಾಗೂ ನೇತ್ರದಾನದ ಕುರಿತು ಅರಿವು ಮೂಡಿಸುವ ಸಲುವಾಗಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು 3 ಕಿಲೋ ಮೀಟರ್ ವಾಕಥಾನ್ ನಡೆಸಿದರು.
ಜಯಚಾಮರಾಜೇಂದ್ರ ವೃತ್ತದ ಬಳಿ ಇರುವ ನೆಲದಾಂಜನೇಯಸ್ವಾಮಿ ದೇವಾಲಯದ ಮುಂಭಾಗ ವಾಕಥಾನ್ಗೆ ಲಯನ್ಸ್ ಜಿಲ್ಲಾ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಹಾಗೂ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಚಾಲನೆ ನೀಡಿದರು.
ಟಿ.ಸಿದ್ದಲಿಂಗಯ್ಯ ವೃತ್ತ, ಕೊಂಗಾಡಿಯಪ್ಪ ಬಸ್ ನಿಲ್ದಾಣ, ಸೌಂದರ್ಯಮಹಲ್ ವೃತ್ತ, ಚೌಕ, ಮುಕ್ತಾಂಬಿಕಾ ರಸ್ತೆ, ಎಚ್.ಮುಗುವಾಳಪ್ಪ ವೃತ್ತ, ಶಾಂತಿನಗರ ಮೂಲಕ ಆರ್.ಎಲ್.ಜಾಲಪ್ಪ ವಿದ್ಯಾ ಸಂಸ್ಥೆ ಕ್ಯಾಂಪಸ್ಗೆ ವಾಕಥಾನ್ ನಡೆಸಲಾಯಿತು. ವಿದ್ಯಾರ್ಥಿಗಳು ಅಂಗಾಂಗ ದಾನ, ನೇತ್ರದಾನದ ಬಗ್ಗೆ ಅರಿವು ಮೂಡಿಸುವ ಸಂದೇಶಗಳನ್ನು ಹೊತ್ತ ಬಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ಸಂದೇಶ ರವಾನಿಸಿದರು.
ಇಲ್ಲಿನ ಶ್ರೀದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಆರ್.ಎಲ್.ಜಾಲಪ್ಪ ಮೆಡಿಕಲ್ ಕಾಲೇಜಿನ ನೇತ್ರತಜ್ಞ ಡಾ.ನರೇಂದ್ರ ಮಾತನಾಡಿ, 18 ವರ್ಷ ಮೀರಿದ ಯಾವುದೇ ವ್ಯಕ್ತಿ ನೇತ್ರದಾನಕ್ಕೆ ನೊಂದಣಿ ಮಾಡಬಹುದು. ಡಾ.ರಾಜ್ಕುಮಾರ್, ಪುನಿತ್ರಾಜ್ಕುಮಾರ್, ಜಾಲಪ್ಪ ಸೇರಿದಂತೆ ಅನೇಕ ಮಹನೀಯರು ನೇತ್ರದಾನ ಮಾಡುವ ಮಾಡುವ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಇಂತಹ ಗಣ್ಯರ ನಡೆ ಇತರರಿಗೂ ಮಾದರಿಯಾಗಿದ್ದು, ಮರಣಾನಂತರ ಕಣ್ಣುಗಳನ್ನು ದಾನ ಮಾಡುವ ಜನರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ ಎಂದರು.
ಕಣ್ಣಿನ ದಾನದ ಬಗ್ಗೆ ಹಲವು ಮೂಢನಂಬಿಕೆಗಳು ಜನರಲ್ಲಿದ್ದು, ಅವುಗಳಿಂದ ಮುಕ್ತವಾಗುವುದು ಅಗತ್ಯ. ತಪ್ಪುಗ್ರಹಿಕೆಯನ್ನು ದೂರಮಾಡಿ, ವೈಜ್ಞಾನಿಕ ಸತ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು. ಒಬ್ಬ ವ್ಯಕ್ತಿಯ ಕಣ್ಣುಗಳು ನಾಲ್ವರಿಗೆ ದೃಷ್ಟಿ ನೀಡಲು ನೆರವಾಗುತ್ತವೆ ಎಂದು ತಿಳಿಸಿದರು.
ಲಯನ್ಸ್ ಜಿಲ್ಲೆ 317ಎಫ್ನ ದೃಷ್ಟಿ ವಿಭಾಗದ ಸಂಯೋಜಕ ವಿಜಯಕುಮಾರ್ ಮಾತನಾಡಿ, ಮಾನವೀಯ ನೆಲೆಗಟ್ಟಿನ ಉದ್ದೇಶವೊಂದರ ಸಾಫಲ್ಯಕ್ಕೆ ನೂರಾರು ಜನರು ಕೈಜೋಡಿಸಿರುವುದು ಅತ್ಯಂತ ಶ್ಲಾಘನೀಯ ವಿಚಾರ ಎಂದರು.
ಎಸ್ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ನೇತ್ರದಾನದಲ್ಲಿ ದೊಡ್ಡಬಳ್ಳಾಪುರ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈವರೆಗೆ ಸುಮಾರು ಎರಡೂವರೆ ಸಾವಿರ ಕಣ್ಣುಗಳನ್ನು ದಾನ ಮಾಡಿರುವ ಅನನ್ಯ ಕಾರ್ಯವನ್ನು ಈ ತಾಲೂಕು ಮಾಡಿದ್ದು, ಈ ಬಗ್ಗೆ ಮತ್ತಷ್ಟು ಜಾಗೃತಿ ಉಂಟಾಗಬೇಕು ಎಂದರು.
ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ನ ಅಧ್ಯಕ್ಷ ಜೆ.ಆರ್.ರಾಕೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಇಟಿ ಸಂಯೋಜಕ ಎಂ.ಆರ್.ಶ್ರೀನಿವಾಸ್, ಜಿಲ್ಲಾ ಗ್ರಾಮೀಣ ಡಯಾಬಿಟಿಕ್ ಸಂಯೋಜಕ ಎಲ್.ಎನ್.ಪ್ರದೀಪ್ಕುಮಾರ್, ಉಪಾಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್, ಆರ್ಎಲ್ಜೆಐಟಿ ಪ್ರಾಂಶುಪಾಲ ಡಾ.ವಿಜಯ್ಕಾರ್ತಿಕ್, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಇದೇ ವೇಳೆ ನೇತ್ರದಾನ ನೊಂದಣಿ ಕಾರ್ಯ ನಡೆಯಿತು. ಹಲವರು ತಮ್ಮ ಮರಣಾ ನಂತರ ಕಣ್ಣುಗಳನ್ನು ದಾನ ಮಾಡುವುದಾಗಿ ನೊಂದಣಿ ಮಾಡಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…