ಅಕಾಲಿಕ ಮತ್ತು ಆಲಿಕಲ್ಲು ಮಳೆ: 3,196 ಹೆಕ್ಟೇರ್ ಕೃಷಿ ಬೆಳೆ, 3697.96 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ- ಶೀಘ್ರವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ನೀಡಲಾಗುವುದು- ಸಚಿವ ಪ್ರಿಯಾಂಕ್ ಖರ್ಗೆ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು..

ಇತ್ತೀಚಿನ ವರ್ಷಗಳಲ್ಲಿ ಪ್ರತಿ ವರ್ಷವೂ ಅತಿವೃಷ್ಟಿ, ಇಲ್ಲವೇ ಅನಾವೃಷ್ಟಿಯಂತಹ ಒಂದಿಲ್ಲೊಂದು ಪ್ರಾಕೃತಿಕ ವಿಕೋಪಗಳನ್ನು ರಾಜ್ಯ ಎದುರಿಸುತ್ತಿದೆ. ಇದಲ್ಲದೆ ಬೇಸಿಗೆಯ ತೀವ್ರತೆ, ಬಿಸಿಲಿನ ತಾಪಮಾನ ಪ್ರತಿ ವರ್ಷವೂ ಏರುಗತಿಯಲ್ಲಿದೆ. ಪ್ರಾಕೃತಿಕ ಸವಾಲುಗಳನ್ನು ಎದುರಿಸುವುದನ್ನು ಸರ್ಕಾರವು ಆದ್ಯತೆಯಾಗಿ ಪರಿಗಣಿಸಬೇಕಿರುವುದು ಅನಿವಾರ್ಯ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಪೂರ್ವ ಮುಂಗಾರಿನಲ್ಲಿ 17 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ, 5 ಜಿಲ್ಲೆಗಳಲ್ಲಿ ಅಧಿಕ ಮಳೆ, 6 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದ್ದರೆ, 3 ಜಿಲ್ಲೆಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಪ್ರಸ್ತುತ ಜಿಲ್ಲಾ ಪಂಚಾಯತಿಗಳ ವ್ಯಾಪ್ತಿಯಲ್ಲಿನ 1,655 ಸಣ್ಣ ನೀರಾವರಿ ಕೆರೆ ಕಟ್ಟೆಗಳಲ್ಲಿ ಸರಾಸರಿ 44% ನಷ್ಟು ನೀರು ಲಭ್ಯವಿದೆ. ಈ ಸಾಲಿನ ಬೇಸಿಗೆಯಲ್ಲಿ 207 ತಾಲೂಕುಗಳ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಪೈಕಿ 60 ತಾಲೂಕುಗಳು ಈಗಾಗಲೇ ನೀರಿನ ಕೊರತೆ ಎದುರಿಸುತ್ತಿವೆ‌ ಎಂದರು.

ಬೇಸಿಗೆಯಲ್ಲಿ 2,258 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ. 212 ಗ್ರಾಮ ಪಂಚಾಯತಿಗಳು ಈಗಾಗಲೇ ಅಭಾವ ಎದುರಿಸುತ್ತಿವೆ. 4 ಗ್ರಾಮಗಳಲ್ಲಿ ಸರ್ಕಾರದ ಟ್ಯಾಂಕರ್‌ಗಳಲ್ಲಿ ನೀರು ಒದಗಿಸುತ್ತಿದ್ದು, 56 ಗ್ರಾಮಗಳಲ್ಲಿ ಖಾಸಗಿ ಟ್ಯಾಂಕರ್‌ಗಳನ್ನು ಬಳಕೆ ಮಾಡಲಾಗುತ್ತಿದೆ ಹಾಗೂ 246 ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ಮುಖಾಂತರ ನೀರಿನ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ನೀರಿನ ಕೊರತೆಯನ್ನು ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆಯನ್ನು ಎದುರಿಸಲು ನಿರ್ಧರಿಸಲಾಗಿರುವ ಮುನ್ನೆಚ್ಚರಿಕಾ ಕ್ರಮಗಳು

◆ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸಾಪ್ತಾಹಿಕ ಮಳೆಯ ಮೇಲ್ವಿಚಾರಣೆ.

◆ ಜಿಲ್ಲಾವಾರು ಬೆಳೆ ಆಕಸ್ಮಿಕ ಯೋಜನೆಗಳನ್ನು ಮತ್ತು ಬರ ನಿರೋಧಕ ಬಿತ್ತನೆ ಬೀಜದ ತಳಿಗಳನ್ನು ಅಭಿವೃದ್ಧಿಪಡಿಸುವುದು.

◆ ಜಲಾಶಯದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಆದ್ಯತೆಯ ಮೇರೆಗೆ ಕಾಯ್ದಿರಿಸುವುದು.

◆ ನರೇಗಾ ಯೋಜನೆಯಡಿ ಜಲ ಸಂರಕ್ಷಣಾ ಕಾಮಗಾರಿಗಳಿಗೆ ಆದ್ಯತೆ ನೀಡುವುದು.

◆ ಮೇವು ಲಭ್ಯತೆ ಬಗ್ಗೆ ನಿರಂತರ ಮೇಲ್ವಿಚಾರಣೆ ನಡೆಸುವುದು ಮತ್ತು ಮೇವಿನ ಕೊರತೆ ನೀಗಿಸಲು ಯೋಜನೆಗಳನ್ನು ಸಿದ್ಧಪಡಿಸುವುದು.

2026ರ ಮಾರ್ಚ್ 15ರಿಂದ 23ನೇ ತಾರೀಖಿನವರೆಗೆ ಸಿಡಿಲು ಮತ್ತು ಗೋಡೆ ಕುಸಿತದಿಂದ ರಾಜ್ಯದಲ್ಲಿ 6 ಜನರು ಬಲಿಯಾಗಿದ್ದು, ₹30 ಲಕ್ಷ ಪರಿಹಾರ ಪಾವತಿಸಲಾಗಿದೆ. 16 ದೊಡ್ಡ ಜಾನುವಾರುಗಳು ಮತ್ತು 116 ಸಣ್ಣ ಜಾನುವಾರುಗಳು ಬಲಿಯಾಗಿದ್ದು, ಅವುಗಳ ಮಾಲೀಕರಿಗೆ ₹10 ಲಕ್ಷ ಪರಿಹಾರ ಒದಗಿಸಲಾಗಿದೆ ಎಂದರು.

ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಿಂದಾಗಿ ಪ್ರಾಥಮಿಕ ವರದಿ ಪ್ರಕಾರ 3,196 ಹೆಕ್ಟೇರ್ ಕೃಷಿ ಬೆಳೆ, 3697.96 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿರುವುದು ಕಂಡುಬಂದಿದೆ. ಶೀಘ್ರವೇ ಬೆಳೆ ಹಾನಿ ಸಮೀಕ್ಷೆ ನಡೆಸಿ, ಪರಿಹಾರ ಒದಗಿಸಲು ನಿರ್ದೇಶಿಸಲಾಗಿದೆ ಎಂದು ತಿಳಿಸಿದರು..

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

52 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

58 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

7 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago