ಅಗಲಿದ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ

ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ಚಂದ್ರಗಿರಿ ತೀರದಲ್ಲಿ ಪುಸ್ತಕವನ್ನು ಬರೆದಿದ್ದಾರೆ. ಇವರು ತಮ್ಮ ಬರಹಗಳಲ್ಲಿ ಮುಸ್ಲಿಂನ ಕೆಲವು ಅರ್ಥಹೀನ ಸಂಪ್ರದಾಯಗಳನ್ನು ಕಟುವಾಗಿ ಟೀಕಿಸುತ್ತಿದ್ದರು ಎಂದು ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ ಹಾಗೂ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಸಹಯೋಗದಲ್ಲಿ ಹಿರಿಯ ಸಾಹಿತಿ ನಾಡೋಜ ಸಾರಾ ಅಬೂಬಕ್ಕರ್‌ ಅವರಿಗೆ ನುಡಿ ನಮನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾರಾ ಅಬೂಬಕ್ಕರ್ ಹಲವಾರು ಕೃತಿಗಳನ್ನು ರಚಿಸಿದ್ದಾರೆ ಅವುಗಳಲ್ಲಿ ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ಪ್ರವಾಹ-ಸುಳಿ, ತಳ ಒಡೆದ ದೋಣಿ, ಪಂಜರ ಪ್ರಮುಖವು, ಕಥಾ ಸಂಕಲನಗಳಾದ ಚಪ್ಪಲಿಗಳು, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ಖೆಡ್ಡ ಸಹ ಜನರ ಹೃದಯ ಗೆದ್ದಿವೆ ಎನ್ನಬಹುದು.

ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌
ಮಹಿಳಾ ಸಮಾನತೆ, ಮಹಿಳಾ ಸಬಲೀಕರಣದ ಚಿಂತನೆ ಹೊಂದಿದ್ದರು, ಹೆಣ್ಣು ಮಕ್ಕಳಿಗೆ ಶಿಕ್ಷಣ ದೊರಕಬೇಕೆಂದು ಸಾರಾ ಅಬೂಬಕ್ಕರ್ ನಿರಂತರವಾಗಿ ಪ್ರತಿಪಾದಿಸುತ್ತಿದ್ದರು.

ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಅವರು ಶಿವರಾಮ ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ಓದಿನಲ್ಲಿ ಮಗ್ನರಾಗಿದ್ದರು. ಮನೋವಿಜ್ಞಾನದ ಬಗ್ಗೆ ತ್ರಿವೇಣಿಯವರು ಬರೆದ ಕಾದಂಬರಿಗಳು ಸಾರಾ ಅವರಲ್ಲಿ ಆಕರ್ಷಣೆ ಹುಟ್ಟಿಸಿದವು.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ.ಕ್ಯೂ.ಎ.ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ, ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಾರಾಯಣಸ್ವಾಮಿ, ನಂದನ, ಕಚೇರಿಯ ಅಧೀಕ್ಷಕರಾದ ಶ್ರೀನಿವಾಸ್, ಗ್ರಂಥಪಾಲಕರಾದ ಪ್ರೇಮ, ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *