ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ ಹೊರವಲಯದಲ್ಲಿರುವ ಡಾ. ಆನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಹಾಗೂ ಶಿಬಿರ ಕೇಂದ್ರದಲ್ಲಿ ಅಗ್ನಿ ಅವಘಡದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ ನಡೆಯಿತು.
ಸೆಪ್ಟೆಂಬರ್ 1ರಿಂದ 7ರವರೆಗೆ ಏಳು ದಿನಗಳ ಕಾಲ ನಡೆಯುತ್ತಿರುವ ತರಬೇತಿ ಶಿಬಿರದಲ್ಲಿ ಬೆಂಗಳೂರು ನಗರ ಹಾಗೂ ರಾಯಚೂರು ವಿಭಾಗದ ರೋವರ್ಸ್ ಮತ್ತು ರೇಂಜರ್ಸ್ಗಳಿಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ವತಿಯಿಂದ ವಿವಿಧ ರೀತಿಯ ಅವಘಡಗಳು ಹಾಗೂ ವಿಪತ್ತುಗಳ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು.
ದೊಡ್ಡಬಳ್ಳಾಪುರ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ರಮೇಶ್ ಮಾತನಾಡಿ, ನೈಸರ್ಗಿಕ ಅಥವಾ ಮಾನವ ನಿರ್ಮಿತ ಅವಘಡಗಳು ಸಂಭವಿಸಿದಾಗ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳು, ಸಾರ್ವಜನಿಕರ ಸುರಕ್ಷತೆ ಹಾಗೂ ಅಗ್ನಿ ಅವಘಡದ ಸಂದರ್ಭದಲ್ಲಿ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ತರಬೇತಿ ನೀಡಲಾಗುತ್ತಿದೆ ಎಂದರು.
ಯುವ ಆಪ್ತಮಿತ್ರ ತರಬೇತಿಯ ರಾಜ್ಯ ಸಂಯೋಜಕಿ ಲತಾ ಮಂಜುನಾಥ್ ಮಾತನಾಡಿ, ವಿಪತ್ತುಗಳು ಸಂಭವಿಸಿದ ಸಂದರ್ಭದಲ್ಲಿ ರೋವರ್ಸ್ ಮತ್ತು ರೇಂಜರ್ಸ್ಗಳು ಪ್ರಥಮ ಪ್ರತಿಸ್ಪಂದಕರಾಗಿ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ತರಬೇತಿಯಲ್ಲಿ ತಿಳಿಸಿಕೊಡಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ಸಂಭವಿಸುವ ಅಗ್ನಿ ಅವಘಡ, ರಸ್ತೆ ಅಪಘಾತ, ನೆರೆ ಹಾಗೂ ಪ್ರವಾಹದಂತಹ ತುರ್ತು ಪರಿಸ್ಥಿತಿಗಳಲ್ಲಿ ಹೇಗೆ ಪ್ರತಿಕ್ರಿಯಿಸಬೇಕು, ಪರಿಸ್ಥಿತಿ ಗಂಭೀರವಾದಾಗ ಅಗ್ನಿಶಾಮಕ ದಳ ಮತ್ತು ಆಂಬುಲೆನ್ಸ್ ಸಿಬ್ಬಂದಿಯೊಂದಿಗೆ ಯಾವ ರೀತಿಯಲ್ಲಿ ಸಮನ್ವಯ ಸಾಧಿಸಬೇಕು ಎಂಬುದರ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ ಎಂದರು.
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆಯ ತುರ್ತು ಸೇವೆಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂಬುದನ್ನು ಅಣಕು ಪ್ರದರ್ಶನದ ಮೂಲಕ ಶಿಬಿರಾರ್ಥಿಗಳಿಗೆ ವಿವರಿಸಲಾಯಿತು.
ಯುವ ಆಪ್ತಮಿತ್ರ ತರಬೇತಿ ಶಿಬಿರದ ಯಶಸ್ಸಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಘಟಕದ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅವರ ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ ಎಂದು ಲತಾ ಮಂಜುನಾಥ್ ತಿಳಿಸಿದರು.
ಅಪಘಾತದ ದೃಶ್ಯ ಸೆರೆಹಿಡಿಯುವುದಕ್ಕಿಂತ ಜೀವ ಉಳಿಸಿ
ರಸ್ತೆಯಲ್ಲಿ ಅಪಘಾತ ಸಂಭವಿಸಿದಾಗ ಗಾಯಾಳು ಸಾವು–ಬದುಕಿನ ನಡುವೆ ಹೋರಾಡುತ್ತಿರುವ ಸಂದರ್ಭದಲ್ಲಿ ಫೋಟೋ, ವಿಡಿಯೋ ಮಾಡುವ ಬದಲು ಅವರಿಗೆ ತಕ್ಷಣ ಪ್ರಥಮ ಚಿಕಿತ್ಸೆ ಒದಗಿಸಬೇಕು. ಸಮೀಪದ ಆಂಬುಲೆನ್ಸ್ಗೆ ಕರೆ ಮಾಡಿ ಚಿಕಿತ್ಸೆ ದೊರಕುವಂತೆ ಮಾಡಿ ಜೀವ ಉಳಿಸುವ ಕಾರ್ಯಕ್ಕೆ ಮುಂದಾಗಬೇಕು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಕಿ ಎಷ್ಟು ವೀಕ್ಷಣೆ ಅಥವಾ ಲೈಕ್ ಬಂದಿದೆ ಎಂಬುದಕ್ಕಿಂತ, ಸಾವು–ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಯ ಪ್ರಾಣ ಉಳಿಸುವುದೇ ನಿಜವಾದ ಮಾನವೀಯತೆಯ ಮೌಲ್ಯ ಎಂದು ಲತಾ ಮಂಜುನಾಥ್ ಹೇಳಿದರು.
ಅಣಕು ಪ್ರದರ್ಶನದಲ್ಲಿ ಅಗ್ನಿಶಾಮಕ ದಳ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸಹಕಾರ ನೀಡಿದರು. ಅಗ್ನಿಶಾಮಕ ಸಿಬ್ಬಂದಿಗಳಾದ ಅನಿಲ್ ಕುಮಾರ್, ಪ್ರಕಾಶ್ ಆರ್.ಪಿ., ಕಾರ್ತಿಕ್ ಬಿ.ಬಿ., ಲಕ್ಷ್ಮಣ್ ಡಿ.ಬಿ., ಕುಮಾರಸ್ವಾಮಿ, ರಾಜ್ಯ ತರಬೇತಿ ಕೇಂದ್ರದ ವಾರ್ಡನ್ ಚಂದ್ರು ಪಿ., ಯುವ ಆಪ್ತಮಿತ್ರ ಸಹಾಯಕರಾದ ವೆಂಕಟೇಶ್, ವಿನಯ್ ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…