ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸುವ ಮೂಲಕ 9 ವರ್ಷದ ಅವಧಿಯನ್ನು ಪೂರ್ಣಗೊಳಿಸಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ 9 ವರ್ಷದ ಆಡಳಿತದಲ್ಲಿ ಹಲವಾರು ಕಾರ್ಯಕ್ರಮಗಳು, ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನಪರ ಆಡಳಿತವನ್ನು ನೀಡಿದೆ.
ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಡಿ ಭಾರತೀಯ ಸೇನೆ ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಸೇನೆಯಾಗಿದೆ. ಅಂತಾರಾಷ್ಟ್ರೀಯ ಸಂಬಂಧಗಳು ವೃದ್ಧಿಸಿವೆ. ಹತ್ತಾರು ಸಂಕಷ್ಟದ ಸಮಯದಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿದೆ.
ಮಹಾಮಾರಿ ಕೊವಿಡ್ ಕಾಲದಲ್ಲಿಯೂ ವಿಶ್ವದಲ್ಲಿಯೆ ಅತ್ಯಂತ ಹೆಚ್ಚು ಯಶಸ್ವಿಯಾಗಿ ಎದುರಿಸಲಾಗಿದೆ. ಕ್ರಾಂತಿಯ ರೀತಿಯಲ್ಲಿ ಕೊರೊನಾವನ್ನು ಸದೆಬಡಿಯಲಾಗಿದೆ. ಹಲವು ವರ್ಷಗಳ ಬಳಿಕ ಜಲಜೀವನ್ ಯೋಜನೆ ಮುಖಾಂತರ ಪ್ರತಿ ಮನೆ ಮನೆಗೆ ನೀರಿನ ಸೌಲಭ್ಯ ನೀಡಲಾಗಿದೆ. ಎನ್ಇಪಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆ ಮಾಡಿದೆ ಎಂದರು.
ಈ ವೇಳೆ ಜಿಲ್ಲಾ ವಕ್ತಾರೆ ಪುಷ್ಪಶಿವಶಂಕರ್, ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಜಿಲ್ಲಾ ಕಾರ್ಯದರ್ಶಿ ಗೋಪಿನಾಥ್, ನಗರಸಭಾ ಸದಸ್ಯ ವೆಂಕಟೇಶ್, ಡಾ. ನಾರಾಯಣ್ ಇದ್ದರು.