ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಜಾರಿ- ಕಾರ್ಮಿಕ ಸಚಿವ ಸಂತೋಷ್ ಲಾಡ್

ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನ ಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ *ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ* ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 91 ಅಸಂಘಟಿತ ವಲಯಗಳನ್ನು ಗುರ್ತಿಸಲಾಗಿದ್ದು ಕಾರ್ಮಿಕ ಇಲಾಖೆಯ ಮಂಡಳಿಗಳ ಮೂಲಕ ಹಲವು ಸೌಲಭ್ಯ ಒದಗಿಸುತ್ತಿದ್ದೇವೆ. ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ, ಅಪಘಾತ ಮದುವೆ ಸಹಾಯಧನ, ತಾಯಿ ಮಗು ಸಹಾಯ ಹಸ್ತ ಮುಂತಾದ ಸೌಲಭ್ಯಗಳು ನೀಡಲಾಗುತ್ತಿದೆ.

ಕರ್ನಾಟಕ ರಾಜ್ಯ ಅಸಂಘಟಿತ ಸಾಮಾಜಿಕ ಭದ್ರತಾ ಮಂಡಳಿಯಡಿ 23 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರಿಗೆ ಉಚಿತವಾಗಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಅಸಂಘಟಿತ ವಲಯದ ಗಿಗ್ ಕಾರ್ಮಿಕರು, ಸಿನಿಮಾ ಮತ್ತು ಸಾಂಸ್ಕೃತಿಕ ಕಾರ್ಯಕರ್ತರು, ಪತ್ರಿಕಾ ವಿತರಕ ಕಾರ್ಮಿಕರು ಹಾಗೂ ಖಾಸಗಿ ವಾಣಿಜ್ಯ ಸಾರಿಗೆ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ.

*ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ*

ಕರ್ನಾಟಕ ಸರ್ಕಾರವು ರಾಜ್ಯದ ಗಿಗ್ ಕಾರ್ಮಿಕರಿಗಾಗಿ (ಸ್ವತಂತ್ರ ಉದ್ಯೋಗಿ) ವಿಶೇಷ ವಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆನ್ಲೈನ್ ಮೂಲಕ ಸರಕು ಸೇವೆ ಒದಗಿಸುವು ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಫ್ಲಿಪ್‌ಕಾರ್ಟ್, ಬಿಗ್‌ಬಾಸ್ಕೆಟ್ ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಡೆಲಿವರಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಹಲವು ಪ್ರಯೋಜನಗಳನ್ನು ನೀಡುತ್ತಿದೆ.

ಅಪಘಾತಾದಲ್ಲಿ ಆಕಸ್ಮಿಕವಾಗಿ ಸತ್ತಿರುವವರಿಗೆ ಮೊದಲು ಅವರಿಗೆ 2ಲಕ್ಷ ನೀಡಲಾಗಿತ್ತಿತ್ತು, ಈಗ 5 ಲಕ್ಷ ಕೊಡುತ್ತಿದ್ದೇವೆ. ಇದರ ಉದ್ದೇಶ ಅವರ ಕುಟುಂಬಕ್ಕೆ ಆರ್ಥಿಕವಾಗಿ ಅವರ ಜೀವನ ನಡೆಸಲು ಆಸರೆಯಾಗಬೇಕು ಎನ್ನುವುದು ನಮ್ಮ ಆಶಯ, ಆದ್ದರಿಂದ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

*ಆಶಾದೀಪ ಯೋಜನೆ*

ರಾಜ್ಯ ಸರ್ಕಾರವು, ಖಾಸಗಿ ವಲಯದ ಕೈಗಾರಿಕೆ, ಕಾರ್ಖಾನೆಗಳಲ್ಲಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಹೆಚ್ಚು ಹೆಚ್ಚು ನೇಮಕಾತಿ ಮಾಡಿಕೊಳ್ಳಲು ಮಾಲೀಕರನ್ನು/ ಉದ್ಯೋಗದಾತರನ್ನು ಉತ್ತೇಜಿಸುವ ದೃಷ್ಠಿಯಿಂದ ಹಾಗೂ ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಪಡೆಯಲು ಅನುಕೂಲವಾಗುವಂತೆ “ಆಶಾದೀಪ ಯೋಜನೆ ಜಾರಿಗೊಳಿಸಲಾಗಿದೆ.

ಈ ಯೋಜನೆಯಡಿ ಮಾಲೀಕರು ಪಾವತಿಸುವ ಇ.ಎಸ್.ಐ. ಮತ್ತು ಇ.ಪಿ.ಎಫ್. ವಂತಿಕೆ ಮರುಪಾವತಿ ಮಾಡಲಾಗುವುದು. ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳ ಶಿಷ್ಯವೇತನ (Stipend) ಮರುಪಾವತಿ ಮಾಡಲಾಗುವುದು. ಕೌಶಲ್ಯಾಭಿವೃದ್ಧಿ ಇಲಾಖೆಯ ಮುಖಾಂತರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗಳನ್ನು ಏರ್ಪಡಿಸಿ, ಸ್ವಾವಲಂಭಿಗಳಾಗಲು ಉತ್ತೇಜನ ನೀಡಲಾಗುತ್ತದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಇಎಸ್ಐ ಆಸ್ಪತ್ರೆ ಕಟ್ಟಡ ನಿರ್ಮಾಣಗೊಂಡಿದ್ದು ಅದಕ್ಕೆ ಬೇಕಾದ ಸೌಲಭ್ಯಗಳು ಮತ್ತು ಉಪಕರಣಗಳು ಸರಬರಾಜು ಮಾಡಬೇಕಿದೆ. ಹಾಗಾಗಿ ನಾವು ಕೇಂದ್ರ ಸರ್ಕಾರದ ಸಚಿವರೊಂದಿಗೆ ಇದರ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ವಸತಿ ಸಮುಚ್ಚಯಗಳನ್ನು ಉದ್ಘಾಟಿಸಿ ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ವಿಶೇಷ ಸೌಲಭ್ಯಗಳನ್ನು ನಮ್ಮ ಸರ್ಕಾರ ನೀಡುತ್ತಿದ್ದ ಕಾರ್ಮಿಕರ ಸಚಿವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಯಾದ್ಯಂತ ಕೈಗಾರಿಕೆಗಳು ಬೃಹದಾಕಾರವಾಗಿ ಬಳೆಯುತ್ತಿವೆ. ಹಲವಾರು ಕುಟುಂಬಗಳು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ ಸಿಗಬೇಕು. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಒಂದು ತರಬೇತಿ ಕೇಂದ್ರ ಸ್ಥಾಪಿಸಿದರೆ ಉತ್ತಮ. ಇದರಿಂದ ಹಲವು ಅಭ್ಯರ್ಥಿಗಳು ಕೌಶಲ್ಯಾಭಿವೃದ್ಧಿ ತರಬೇತಿ ಪಡೆದು ಉದ್ಯೋಗ ಪಡೆಯುವಂತಾಗುತ್ತದೆ. ಇದರ ಬಗ್ಗೆ ಸರ್ಕಾರದ ಹಂತದಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದರು.

ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ದೊಡ್ಡಬಳ್ಳಾಪುರದಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ, 25 ಸಾವಿರಕ್ಕೂ ಹೆಚ್ಚಿನ ಮಗ್ಗಗಳು ಇವೆ. 3 ಲಕ್ಷಕ್ಕು ಅಧಿಕ ಕಾರ್ಮಿಕರು ವಲಸೆ ಬಂದು ದೊಡ್ಡಬಳ್ಳಾಪುರದಲ್ಲಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಕಾರ್ಮಿಕರಿಗೆ ಭದ್ರತೆ ಸಿಗುವಂತೆ ಮಾಡಬೇಕು ಜೊತೆಗೆ ಸರ್ಕಾರ ನಿಗದಿ ಮಾಡಿರುವ ಸ್ಥಳೀಯ ಮಟ್ಟದ ಕಾರ್ಮಿಕರಿಗೆ ಉದ್ಯೋಗದಲ್ಲಿ 70% ಅವಕಾಶ ಕಲ್ಪಿಸಿರುವುದು ನಿರುದ್ಯೋಗ ನಿವಾರಣೆಗೆ ಹೆಚ್ಚು ಅನುಕೂಲವಾಗಿದೆ. ಅತೀ ಶೀಘ್ರವಾಗಿ ಇ.ಎಸ್.ಐ ಆಸ್ಪತ್ರೆ ಉದ್ಘಾಟನೆಯಾಗಬೇಕು ಜೊತೆಗೆ ಕಾರ್ಮಿಕ ಮಕ್ಕಳಿಗೆ ವಸತಿ ಶಾಲೆಯನ್ನು ನೀಡುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಭಾರತಿ, ಸದಸ್ಯರಾದ ರಮೇಶ್, ಜಾನಿ, ಬಸಪ್ಪ, ಶ್ರೀಯಾನ್ಸ್, ವಿಜಯಕುಮಾರ್, ಕಾರ್ಮಿಕರ ಇಲಾಖೆ ಆಯುಕ್ತರಾದ ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಉಪವಿಭಾಗಾಧಿಕಾರಿ ದುರ್ಗ ಶ್ರೀ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಮಾಜಿ ಶಾಸಕರಾದ ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿಶ್ವನಾಥ ಸೇರಿದಂತೆ ಅಧಿಕಾರಿಗಳು, ಕಾರ್ಮಿಕರು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

23 minutes ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

11 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

15 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

16 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

19 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

2 days ago