ಮಕ್ಕಳಿಗೆ, ವಿದ್ಯಾರ್ಥಿಗಳಿಗೆ, ಯುವಕರಿಗೆ ನಾವು ಕುಟುಂಬದಲ್ಲಿ, ಶಾಲೆಗಳಲ್ಲಿ, ಸಮಾಜದಲ್ಲಿ ಕಲಿಸುತ್ತಿರುವುದಾದರೂ ಏನು, ಹೇಳಿ ಕೊಡುತ್ತಿರುವ ಮೌಲ್ಯಗಳಾದರೂ ಏನು…
ರನ್ಯಾ ಎಂಬ ವಿದ್ಯಾವಂತ, ಶ್ರೀಮಂತ ಸಿನಿಮಾ ನಟಿಯೊಬ್ಬಳು ಎಷ್ಟೆಲ್ಲಾ ಅಕ್ಷರ ಜ್ಞಾನ, ಸಾಮಾನ್ಯ ಜ್ಞಾನ ಎಲ್ಲವೂ ಇದ್ದರು ಚಿನ್ನ ಸಾಗಾಣಿಕೆಯ ದಂಧೆಯಲ್ಲಿ ಭಾಗಿಯಾಗುತ್ತಾಳೆ ಎಂದರೆ ಆಕೆ ಓದಿದ ವಿದ್ಯೆಗೆ ಯಾವ ಬೆಲೆ, ಆಕೆಯ ಮಲತಂದೆ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರು
ಆಕೆಗೆ ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಆ ಕಳ್ಳ ಸಾಗಾಣಿಕೆಗೆ ಸಹಾಯ ಮಾಡುತ್ತಾರೆ ಎಂದರೆ ಆತನ ಐಪಿಎಸ್ ಓದಿಗೆ ಬೆಲೆ ಏನು, ಕೆಲವು ವರ್ಷಗಳ ಹಿಂದೆ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಇದೇ ರೀತಿಯ ಎಡಿಜಿಪಿ ದರ್ಜೆಯ ಅಧಿಕಾರಿಯೊಬ್ಬರು ಪ್ರಶ್ನೆ ಪತ್ರಿಕೆಗಳ ಸೋರಿಕೆ ಹಗರಣದಲ್ಲಿ ಸಿಲುಕಿ ಜೈಲು ಶಿಕ್ಷೆ ಅನುಭವಿಸಿದಾಗ, ಆತ ಓದಿದ್ದ ಐಪಿಎಸ್ ಗೆ ಬೆಲೆ ಏನು, ಸ್ವಾತಿ ಎಂಬ ಹೆಣ್ಣು ಮಗಳನ್ನು ಪ್ರೀತಿಯ ಕಾರಣಕ್ಕಾಗಿ ಕೊಲೆ ಮಾಡಿದ ಒಬ್ಬ ಹುಡುಗ ಮತ್ತು ಅವನ ಜೊತೆ ಕೊಲೆಗೆ ಸಹಕರಿಸಿದ ಇಬ್ಬರು ಹುಡುಗರು ಪಡೆದ ಪದವಿಗೆ ಬೆಲೆ ಏನು, ಮೊನ್ನೆ ಸುಮಾರು 100 ಕೋಟಿಯಷ್ಟು ಮಾದಕ ವಸ್ತುಗಳನ್ನು ಕಳ್ಳ ಸಾಗಾಣಿಕೆ ಮಾಡುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಅಪರಾಧಿಗಳೆಲ್ಲಾ ಬಹುತೇಕ ವಿದ್ಯಾವಂತರೆ,…
ಇತ್ತೀಚಿನ ದಿನಗಳಲ್ಲಿ ಮತ್ತೆ ಕೇಳಿ ಬರುತ್ತಿರುವ ಹನಿ ಟ್ರ್ಯಾಪ್ ಎಂಬ ದಂಧೆಯಲ್ಲಿ ಬಲೆ ಬೀಸುವವರು, ಬಲಗೆ ಸಿಲುಕಿಕೊಳ್ಳುತ್ತಿರುವವರು ಎಲ್ಲರೂ ವಿದ್ಯಾವಂತರೆ, ಲೋಕಾಯುಕ್ತರು ಸುಮ್ಮನೆ ಕಣ್ಣು ಮುಚ್ಚಿ ದಾಳಿ ಮಾಡಿದರೂ ಸಾಕು, ಅಪಾರ ಪ್ರಮಾಣದ ಅಸ್ತಿಪಾಸ್ತಿ ಪತ್ತೆಯಾಗುವ ಎಲ್ಲಾ ಅಧಿಕಾರಿಗಳು ಬಹುತೇಕ ಅತ್ಯಧಿಕ ಅಂಕಗಳನ್ನು ಪಡೆದ ಹುದ್ದೆ ಗಿಟ್ಟಿಸಿಕೊಂಡ ಅಧಿಕಾರಿಗಳೇ ಆಗಿರುತ್ತಾರೆ.
ಹಾಗಾದರೆ ಅವರು ಓದಿದ್ದಕ್ಕೆ ಬೆಲೆ ಏನು….
ಭೂ ಮಾಫಿಯಾವೇ ಇರಲಿ, ಶಿಕ್ಷಣದ ಮಾಫಿಯಾನೇ ಇರಲಿ, ವೈದ್ಯಕೀಯ ಮಾಫಿಯಾನೇ ಇರಲಿ, ಕಳ್ಳ ಸಾಗಾಣಿಕೆ ಮಾಫಿಯಾನೇ ಇರಲಿ ಎಲ್ಲರೂ ಬಹುತೇಕ ವಿದ್ಯಾವಂತರೇ ಆಗಿರುತ್ತಾರೆ. ಹಾಗಾದರೆ ನಾವು ಕೊಟ್ಟ ವಿದ್ಯೆ ಅವರಲ್ಲಿ ಏನನ್ನು ಕಲಿಸುತ್ತಿದೆ….
ಕೆಲವು ವರ್ಷಗಳ ಹಿಂದೆ ಅನೇಕ ಡಾಕ್ಟರ್ ಗಳೇ ಕಿಡ್ನಿ ಕದಿಯುವ ದಂಧೆಯಲ್ಲಿ ಭಾಗಿಯಾಗಿದ್ದರು ಎಂಬ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು. ಇಂತಹ ಕಠಿಣ ಪರಿಸ್ಥಿತಿಯ ದಿನಗಳಲ್ಲಿ ನಾವು ಮಕ್ಕಳಿಗೆ ಏನನ್ನು ಕಲಿಸುತ್ತಿದ್ದೇವೆ ಎಂಬುದು ಅರ್ಥವಾಗುತ್ತಿಲ್ಲ. ಎಬಿಸಿಡಿ, ಒನ್ ಟು ತ್ರಿ, ಅಂ ಆ ಇ ಈ ಎಲ್ಲವೂ ಉದ್ಯೋಗದ ಸರಕುಗಳೇ, ಹಾಗಾದರೆ ಅದನ್ನು ಶಿಕ್ಷಣ ಎಂದು ಏಕೆ ಕರೆಯಬೇಕು. ಶಿಕ್ಷಣ ಎಂಬುದು ಮಾನವೀಯತೆಯ ಬೆಳವಣಿಗೆಯ ಮತ್ತು ಸಮಾಜದ ಕ್ರಮಬದ್ಧ ಮುಂದುವರಿಕೆಯ ಭಾಗವೇ ಹೊರತು ಅದು ಹೊಟ್ಟೆಪಾಡಿನ ಸರಕಲ್ಲ…
ಶಿಕ್ಷಣದಿಂದ ಲಾಭವಾಗುವುದಕ್ಕಿಂತ ಹೆಚ್ಚಾಗಿ ನಷ್ಟವಾಗುತ್ತಿರುವುದು ಇನ್ನಷ್ಟು ಆತಂಕಕಾರಿಯಾಗಿದೆ. ಏನು ಅರಿಯದವರು ಹತ್ತು ತಪ್ಪು ಮಾಡಿದರೆ, ಎಲ್ಲಾ ಅರಿತವರು ನೂರು ತಪ್ಪು ಮಾಡುವ ಹಂತಕ್ಕೆ ಸಮಾಜ ಬಂದಿದೆ ಎಂಬುದು ನಿಜಕ್ಕೂ ದುರ್ದೈವ…..
ಶಿಶುವಿಹಾರದಿಂದ ವಿಶ್ವವಿದ್ಯಾಲಯದವರೆಗೆ,
ಅ ಇಂದ ಖಗೋಳದವರೆಗೆ,
ಭೂಮಿಯಿಂದ ತಿನ್ನುವವರೆಗೆ,
ಹಣದಿಂದ ಆರೋಗ್ಯದವರೆಗೆ,
ಅಜ್ಜನಿಂದ ಮೊಮ್ಮಗಳವರೆಗೆ,
ನೀರಿನಿಂದ ವಿದ್ಯುತ್ ವರೆಗೆ,
ಪ್ರೀತಿಯ ಅನಂತತೆಯಿಂದ ತ್ಯಾಗದ ಸನ್ಯಾಸತ್ವದವರೆಗೆ….
ಎಲ್ಲವನ್ನೂ ಕಲಿಸುವುದು ಶಿಕ್ಷಣ ಮತ್ತು ಶಿಕ್ಷಕರು. ಆಧುನಿಕ ಕಾಲದಲ್ಲಿ ಜ್ಞಾನದ ಮೂಲವೇ ಶಿಕ್ಷಣ ಮತ್ತು ಶಿಕ್ಷಕರು…..
ಶಿಕ್ಷಣ ಪದ್ದತಿಯ ನೀತಿ ಮತ್ತು ಉದ್ದೇಶ………..
ಶಿಕ್ಷಣ…
ಜ್ಞಾನಾರ್ಜನೆಗಾಗಿಯೇ,
ಉದ್ಯೋಗಕ್ಕಾಗಿಯೇ,
ಬದುಕಿಗಾಗಿಯೇ,
ಸಾಧನೆಗಾಗಿಯೇ,
ಪೋಷಕರ ಒತ್ತಾಯಕ್ಕಾಗಿಯೇ,
ಸರ್ಕಾರದ ಕಡ್ಡಾಯಕ್ಕಾಗಿಯೇ,
ವ್ಯವಹಾರಕ್ಕಾಗಿಯೇ,
ಅಥವಾ ವ್ಯವಸ್ಥೆಯ ಸಹಜ ಸ್ವಾಭಾವಿಕ ಕ್ರಿಯೆಯೇ ಎಂಬ ಪ್ರಶ್ನೆಗಳ ಜೊತೆಗೆ,…….
ಗುರುಕುಲ ವ್ಯವಸ್ಥೆ ಸರಿಯೇ,
ಮೆಕಾಲೆ ಪದ್ದತಿ ಸರಿಯೇ,
ಸರ್ಕಾರಿ ಅಥವಾ ಖಾಸಗಿ ಶಿಕ್ಷಣ ವ್ಯವಸ್ಥೆ ಸರಿಯೇ,
ಉದ್ಯೋಗ ಖಾತ್ರಿ ಶಿಕ್ಷಣ ಸರಿಯೇ,
ಪ್ರಾಣಿ ಪಕ್ಷಿಗಳಂತೆ ಪ್ರಾಕೃತಿಕ ಶಿಕ್ಷಣ ಸರಿಯೇ,
ಕೃತಕ ಜ್ಞಾನಾರ್ಜನೆಯ ಪದ್ದತಿ ಸರಿಯೇ,………
ಎಂಬ ಗೊಂದಲಗಳ ನಡುವೆ,
ವಿದ್ಯಾರ್ಥಿಗಳ ಸಾಮರ್ಥ್ಯ ಮತ್ತು ವ್ಯಕ್ತಿತ್ವ ಬೆಳೆಸುವ ಕ್ರಮಗಳಲ್ಲಿ……..
ನೆನಪಿನ ಶಕ್ತಿ ಮುಖ್ಯವೇ,
ಮಾನವೀಯ ಮೌಲ್ಯಗಳು ಮುಖ್ಯವೇ,
ಶ್ರದ್ಧೆ ಮತ್ತು ಸ್ಪಂದನೆ ಮುಖ್ಯವೇ,
ದೈಹಿಕ ಸಾಮರ್ಥ್ಯ ಮುಖ್ಯವೇ,
ಮಾನಸಿಕ ದೃಢತೆ ಮುಖ್ಯವೇ,
ಅಕ್ಷರ ಜ್ಞಾನ ಮುಖ್ಯವೇ,
ಲಲಿತ ಕಲೆಗಳ ಅಭಿವ್ಯಕ್ತಿ ಮುಖ್ಯವೇ,
ದುಡಿದು ತಿನ್ನುವ ಕಾಯಕದ ಸಾಮರ್ಥ್ಯ ಮುಖ್ಯವೇ,
ಅಥವಾ ಈ ಎಲ್ಲಾ ಒಟ್ಟು ವ್ಯಕ್ತಿತ್ವ ಮುಖ್ಯವೇ…….
ಮುಂತಾದ ಅನೇಕ ಪ್ರಶ್ನೆಗಳು ಕಾಡುತ್ತವೆ.
ಒಟ್ಟು ಭಾರತೀಯ ಸಮಾಜದಲ್ಲಿ ಇದಕ್ಕೆ ಒಂದೇ ರೀತಿಯ ಉತ್ತರ ಸಿಗುವುದಿಲ್ಲ. ಎಲ್ಲವೂ ಮುಖ್ಯ ಎನ್ನುವುದಾದರೆ ಎಲ್ಲವನ್ನೂ ಶಿಕ್ಷಣದಲ್ಲಿ ಅಳವಡಿಸಿ ಕಲಿಸಲು ಸಾಧ್ಯವಿಲ್ಲ. ಹಾಗೆಯೇ ಎಲ್ಲವನ್ನೂ ಬೇರೆ ಬೇರೆ ವೈಯಕ್ತಿಕ ಆಸಕ್ತಿಗಳ ಆಧಾರದ ಮೇಲೆ ಕಲಿಸುವಷ್ಟು ವಿಭಿನ್ನತೆಯೂ ಇಂದಿನ ವೇಗದ ಆಧುನಿಕ ಯುಗದಲ್ಲಿ ಅಸಾಧ್ಯ……
ಏಕರೂಪದ ಶಿಕ್ಷಣಕ್ಕೆ ಒತ್ತಾಯ ಒಂದು ಕಡೆ,
ಮಾತೃಭಾಷೆ ಮತ್ತು ಇತರ ಭಾಷೆಗಳ ಆಯ್ಕೆಯ ಗೊಂದಲ ಮತ್ತೊಂದು ಕಡೆ,
ಮಕ್ಕಳ ಮೇಲೆ ಶಿಕ್ಷಣ ಹೊರೆಯಾಗುತ್ತಿದೆ ಎಂಬ ಭಾವನೆ ಇನ್ನೊಂದು ಕಡೆ,
ಶಿಕ್ಷಣ ವ್ಯಾಪಾರವಾಗುತ್ತಿದೆ ಎಂದು ಮಗದೊಂದು ಕಡೆ,
ಮಕ್ಕಳ ಶಿಕ್ಷಣ ಗುಣಮಟ್ಟ ಕುಸಿಯುತ್ತಿದೆ ಎಂಬ ಅಳಲು ಕೆಲವು ಕಡೆ,……..
ವಿದ್ಯಾರ್ಥಿಗಳ ಸಾಮರ್ಥ್ಯ ವಾರ್ಷಿಕ ಪರೀಕ್ಷೆಯ 3 ಗಂಟೆಗಳ ನೆನಪಿನ ಶಕ್ತಿಯ ಆಧಾರದ ಮೇಲೆ ಅಂಕಗಳು ನಿರ್ಧರಿಸುವುದೇ ಅವೈಜ್ಞಾನಿಕ ಎಂಬ ಅಳಲು ಹಲವರಿಂದ,
ಈ ಶಿಕ್ಷಣ ಕ್ರಮದಿಂದ ಹೆಚ್ಚು ಅಂಕ ಪಡೆದವರು ನೌಕರಿಗೂ, ಕಡಿಮೆ ಅಂಕ ಪಡೆದವರು ರಾಜಕೀಯಕ್ಕೂ ಬಂದು ಇಡೀ ವ್ಯವಸ್ಥೆ ಆಧೋಗತಿಗೆ ಇಳಿದಿದೆ ಎಂಬ ಆರೋಪ,
ಮಕ್ಕಳು ಅಂಕ ಹೆಚ್ಚು ಪಡೆದರೂ ಸಾಮಾನ್ಯ ಜ್ಞಾನದಲ್ಲಿ ತುಂಬಾ ಹಿಂದುಳಿದಿದ್ದಾರೆ ಎಂಬ ಗೊಣಗಾಟ ಒಂದು ಕಡೆ……..
ಇದನ್ನೆಲ್ಲಾ ಯೋಚಿಸುವಾಗ ಶಿಕ್ಷಣದ ಸುಧಾರಣೆ ಎಲ್ಲಿಂದ ಪ್ರಾರಂಭಿಸುವುದು ಎಂಬುದೇ ದೊಡ್ಡ ಸಮಸ್ಯೆಯಾಗಿದೆ.
ದೇಶದ ಬಹುತೇಕ ಸಮಸ್ಯೆಗಳಿಗೆ ಶಿಕ್ಷಣದಲ್ಲಿ ಉತ್ತರವಿದೆ ಎಂಬ ಅಭಿಪ್ರಾಯ ಇರುವಾಗ ಅದನ್ನೊಂದು ಉದ್ಯಮವಾಗಿ ಬೆಳೆಸುತ್ತಿದ್ದೇವೆ. ಅಲ್ಲಿಗೆ ಶಿಕ್ಷಣದ ನೈತಿಕ ಅಧಃಪತನ ಶತಸಿದ್ದ……….
ಅತಿಹೆಚ್ಚು ಅಂಕ ಪಡೆದವರ ಸಾಮಾನ್ಯ ಜ್ಞಾನದ ಪೆದ್ದುತನ, ಅನುತ್ತೀರ್ಣರಾದವರ ನಿರಾಸೆ ಮತ್ತು ಆತ್ಮಹತ್ಯೆಗಳ ಪ್ರಯತ್ನ, ಸಮಾಜದ ದೃಷ್ಟಿಕೋನ, ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರ ಎಲ್ಲವೂ ಒಂದಕ್ಕೊಂದು ಸೇರಿ ಶಿಕ್ಷಣದ ನಿಜವಾದ ಅರ್ಥವೇ ಮಾಯವಾಗಿದೆ.
ಮಕ್ಕಳ ವಯಸ್ಸು ಮತ್ತು ಆಸಕ್ತಿಗೆ ಅನುಗುಣವಾಗಿ,
ಸಾಮಾಜಿಕ ಶಿಕ್ಷಣ,
ಪ್ರಾಕೃತಿಕ ಶಿಕ್ಷಣ,
ಉದ್ಯೋಗವಕಾಶದ ಶಿಕ್ಷಣ,
ವೃತ್ತಿ ಶಿಕ್ಷಣ,
ಪರಿಸರ ಶಿಕ್ಷಣ,
ನೈತಿಕ ಶಿಕ್ಷಣ,
ಮಾನವೀಯ ಮೌಲ್ಯಗಳ ಶಿಕ್ಷಣ,
ಸಮಾನತೆಯ ಶಿಕ್ಷಣ,
ಮಿಲಿಟರಿ ಶಿಕ್ಷಣ,
ಮಾನಸಿಕ ದೃಢತೆಯ ಶಿಕ್ಷಣ,
ದೇಶ ಪ್ರೇಮದ ಶಿಕ್ಷಣ,
ಸಂವಿಧಾನದ ಕರ್ತವ್ಯ – ಹಕ್ಕುಗಳು ಮತ್ತು ಜವಾಬ್ದಾರಿಯ ಶಿಕ್ಷಣ,
ತಾಂತ್ರಿಕ ಶಿಕ್ಷಣ,
ಲೈಂಗಿಕ ಶಿಕ್ಷಣ,
ಕೌಟುಂಬಿಕ ಶಿಕ್ಷಣ,
ಆಸಕ್ತಿಗೆ ಅನುಗುಣವಾಗಿ ಕಲೆ ಕ್ರೀಡೆ ಸಂಗೀತ ವಿಜ್ಞಾನ ಆಧ್ಯಾತ್ಮ ರಾಜಕೀಯ ಸಮಾಜ ಸೇವೆ ವಾಣಿಜ್ಯ ಮುಂತಾದ ಎಲ್ಲಾ ಕ್ಷೇತ್ರಗಳ ಶಿಕ್ಷಣವನ್ನೂ ವಿವಿಧ ಹಂತಗಳಲ್ಲಿ ಕಲಿಸಬೇಕಿದೆ.
ಈಗಾಗಲೇ ಈ ರೀತಿಯ ಕೆಲವು ಶಿಕ್ಷಣಗಳು ಇದ್ದರೂ ಅಂಕಗಳು ಮತ್ತು ಉದ್ಯೋಗಕ್ಕೆ ನೇರ ಸಂಪರ್ಕ ಕಲ್ಪಿಸಿರುವುದರಿಂದ ಅವು ಹೆಚ್ಚು ಪರಿಣಾಮಕಾರಿಯಾಗಿಲ್ಲ.
ವಿಷಯ ಜ್ಞಾನದ ಜೊತೆಗೆ ವಿದ್ಯಾರ್ಥಿಗಳ ಒಟ್ಟು ವ್ಯಕ್ತಿತ್ವ ರೂಪಿಸಲು ಮತ್ತು ಅದರ ಆಧಾರದ ಮೇಲೆ ಅವರ ಸಾಮರ್ಥ್ಯ ಅಳೆಯುವ ವ್ಯವಸ್ಥೆ ರೂಪಿಸಬೇಕು.
ಮೌಖಿಕ ಮತ್ತು ಪ್ರಾಯೋಗಿಕ ಎರಡಕ್ಕೂ ಹೆಚ್ಚಿನ ಮಹತ್ವ ನೀಡಬೇಕು.
ಮೂಲಭೂತವಾಗಿ ಶಿಕ್ಷಕರ ಗುಣಮಟ್ಟವನ್ನು ಹೆಚ್ಚಿಸಬೇಕು. ಏಕೆಂದರೆ ಕಲಿಸುವವರೇ ಸರಿ ಇಲ್ಲದಿದ್ದರೆ ಕಲಿಯುವವರು ಹಾದಿ ತಪ್ಪುವುದು ಸಹಜ. ಅಕ್ಷರ ಮತ್ತು ಅಂಕಿ ಸಂಖ್ಯೆಗಳು ಹಾಗು ಅಂಕಗಳು ಮಾತ್ರ ಶಿಕ್ಷಣವಲ್ಲ ಎಂಬ ಅಭಿಪ್ರಾಯ ಮೂಡಿಸಬೇಕು.
ಪ್ರತಿ ಮಗುವಿಗೂ ನಾನು ಪ್ರಕೃತಿಯ ಶಿಶು, ಈ ಸಮಾಜದ ಒಂದು ಭಾಗ. ಇತರರ ಸ್ವಾತಂತ್ರ್ಯ ಗೌರವಿಸಿ ನಾನು ಬದುಕಬೇಕು. ನನ್ನ ನಿಷ್ಠೆ ಈ ಸೃಷ್ಟಿಗೆ ಎಂಬ ಅಂಶವನ್ನು ಕಲಿಸಬೇಕು. ಅದೇ ಶಿಕ್ಷಣದ ಮುಖ್ಯ ಗುರಿಯಾಗಬೇಕು. ಆಗ ಜಾತಿ ಧರ್ಮ ಪ್ರದೇಶ ಆಸ್ತಿ ಅಧಿಕಾರ ನಾನು ನನ್ನದು ಎಂಬ ಸ್ವಾರ್ಥ ಕಡಿಮೆಯಾಗಿ ಉಳಿದ ಎಲ್ಲವೂ ತನ್ನಿಂದ ತಾನೇ ಅರ್ಥವಾಗಿ ನಾಗರಿಕ ಸಮಾಜ ನಿರ್ಮಾಣವಾಗುತ್ತದೆ.
ಇದು ಹೇಳುವಷ್ಟು ಸುಲಭವಲ್ಲ. ಶಿಕ್ಷಣ ಸಮಾಜದ ಒಂದು ಭಾಗ ಮಾತ್ರ. ಸಮಾಜದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾದರೆ ಮಾತ್ರ ಶಿಕ್ಷಣದ ಬದಲಾವಣೆ ಸಾಧ್ಯ. ಇಲ್ಲದಿದ್ದರೆ ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳೇ ಮುಖ್ಯವಾಗಿ, ಉದ್ಯೋಗವೇ ಪ್ರಮುಖವಾಗಿ ಶಿಕ್ಷಣ ವ್ಯಾಪಾರವಾಗಿ ನಾವು ಅಕ್ಷರ ಕಲಿತ ಅನಾಗರಿಕತೆಯತ್ತ ಸಾಗಬೇಕಾಗುತ್ತದೆ. ಈಗ ಆ ಹಾದಿಯಲ್ಲಿ ಇದ್ದೇವೆ……….
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…