ಆರ್‌ಒ ಘಟಕಗಳ ನೀರಿನ ಗುಣಮಟ್ಟ ಪ್ರಮಾಣಪತ್ರ ಪ್ರದರ್ಶನಕ್ಕೆ ಸದಸ್ಯರ ಆಗ್ರಹ

ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್‌ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ ಪ್ರದರ್ಶಿಸಬೇಕು ಎಂದು ನಗರಸಭೆ ಸದಸ್ಯರು ಸಾಮಾನ್ಯ ಸಭೆಯಲ್ಲಿ ಆಗ್ರಹಿಸಿದರು.

ನಗರಸಭೆ ಕಾರ್ಯಾಲಯದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯರು, ನಗರದಲ್ಲಿ ಸುಮಾರು 40 ಆರ್‌ಒ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.

ಲ್ಯಾಬ್‌ಗಳಲ್ಲಿ ಪರೀಕ್ಷೆ ನಡೆಸಿದರೂ ಅದರ ಪ್ರಮಾಣಪತ್ರಗಳನ್ನು ಘಟಕಗಳಲ್ಲಿ ಪ್ರದರ್ಶಿಸಲಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಆರ್‌ಒ ಘಟಕಗಳ ನಿರ್ವಹಣೆಯನ್ನು ಗುತ್ತಿಗೆ ಪಡೆದವರು ಕೇವಲ ಹಣ ಸಂಗ್ರಹಿಸುವುದರಲ್ಲೇ ನಿರತರಾಗಿದ್ದು, ಸ್ವಚ್ಛತೆ ಹಾಗೂ ಉಪಕರಣಗಳ ನಿರ್ವಹಣೆಗೆ ಅಗತ್ಯ ಗಮನ ನೀಡುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಶೀಘ್ರವಾಗಿ ಪರಿಷ್ಕರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್, ನಗರದ ಎಲ್ಲಾ ಆರ್‌ಒ ಘಟಕಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ನಗರದ ಕುಡಿಯುವ ನೀರಿನ ಸಮಸ್ಯೆಯೂ ಪ್ರಸ್ತಾಪವಾಯಿತು. ಕೆಲ ಪ್ರದೇಶಗಳಲ್ಲಿ ದಿನಬಳಕೆಯ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಪರಿಣಾಮವಾಗಿ ಸಾರ್ವಜನಿಕರು ಟ್ಯಾಂಕರ್ ನೀರಿನ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಕಡೆಗಳಲ್ಲಿ ಕಲುಷಿತ ನೀರಿನ ಸಮಸ್ಯೆಯೂ ಕಂಡುಬರುತ್ತಿದೆ ಎಂದು ಸದಸ್ಯರು ತಿಳಿಸಿದರು.

ನಗರದಲ್ಲಿ ಪ್ರಸ್ತುತ 90 ಬೋರ್‌ವೆಲ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಕಳೆದ ಬೇಸಿಗೆಯಲ್ಲಿ ನೀರಿನ ಕೊರತೆ ಮತ್ತು ವಿದ್ಯುತ್ ವ್ಯತ್ಯಯದಿಂದ ನೀರಿನ ಪೂರೈಕೆಯಲ್ಲಿ ಸಮಸ್ಯೆಗಳು ಎದುರಾಗಿದ್ದವು ಎಂದರು. ನೀರಿನ ಸಮಸ್ಯೆ ನಿವಾರಣೆಗೆ ಹೆಚ್ಚುವರಿ ಬೋರ್‌ವೆಲ್‌ಗಳನ್ನು ಕೊರೆಸುವ ಕ್ರಮ ಕೈಗೊಳ್ಳಲಾಗಿದೆ ಹಾಗೂ ಯುಜಿಡಿ ನಿರ್ವಹಣೆಯ ಕೆಲಸವೂ ನಡೆಯುತ್ತಿದೆ ಎಂದು ನಗರಸಭೆ ಪೌರಾಯುಕ್ತ ಕಾರ್ತಿಕೇಶ್ವರ್ ಹೇಳಿದರು.

ನಗರಸಭೆಯ ಹಿರಿಯ ಸದಸ್ಯ ಎಂ.ಜಿ. ಶ್ರೀನಿವಾಸ್ ಮಾತನಾಡಿ, ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿದರೆ ಅನೇಕ ಸಮಸ್ಯೆಗಳನ್ನು ತಪ್ಪಿಸಬಹುದು ಎಂದರು. ಜಕ್ಕಲುಮಡಗು ನೀರಿನ ಹಂಚಿಕೆಯನ್ನು ಹೆಚ್ಚಿಸುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಬೇಕು ಹಾಗೂ ನೀರಿನ ಸಂಪನ್ಮೂಲಗಳನ್ನು ವೃದ್ಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು. ದೊಡ್ಡಬಳ್ಳಾಪುರ ಸುತ್ತಮುತ್ತ ಕೈಗಾರಿಕಾ ಪ್ರದೇಶಗಳು ವೇಗವಾಗಿ ಅಭಿವೃದ್ಧಿಯಾಗುತ್ತಿದ್ದರೂ, ಅಗತ್ಯ ಮೂಲಸೌಕರ್ಯಗಳು ಸಮರ್ಪಕವಾಗಿ ಒದಗಿಸಲಾಗುತ್ತಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ರಸ್ತೆ ಗುಂಡಿಗಳ ಸಮಸ್ಯೆ, ಇ-ಆಫೀಸ್ ಕಾರ್ಯಗಳ ವಿಳಂಬ, ಯುಜಿಡಿ ನಿರ್ವಹಣೆ, ಕಸದ ವಿಲೇವಾರಿ ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಸಂಜಯನಗರದ ಎಸ್‌ಆರ್‌ಸಿ ಗರಡಿ ಮನೆಯ ನಿರ್ವಹಣಾ ಜವಾಬ್ದಾರಿಯನ್ನು ಟ್ರಸ್ಟ್‌ಗೆ ನೀಡುವ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಯಿತು.

ಸಭೆಯಲ್ಲಿ ನಗರಸಭೆ ಉಪಾಧ್ಯಕ್ಷ ವೆಂಕಟೇಶ್(ಬಂತಿ), ನಿಕಟಪೂರ್ವ ಅಧ್ಯಕ್ಷೆ ಸುಮಿತ್ರಾ ಕೆ, ಹಿರಿಯ ಸದಸ್ಯರಾದ ತ.ನ. ಪ್ರಭುದೇವ್, ರವಿಕುಮಾರ್, ಪದ್ಮನಾಭ, ಶಿವು, ಮಲ್ಲೇಶ್ ಹಾಗೂ ನಗರಸಭೆ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ‍್ಯಾಂಕ್ ಪಡೆದ…

3 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

3 hours ago

ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ ರಾಜೀನಾಮೆ: ಜಿಲ್ಲಾಧಿಕಾರಿ ಅಂಗೀಕಾರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…

12 hours ago

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

23 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

23 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

1 day ago