ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲೂಕು ಘಟಕದ ವತಿಯಿಂದ ಗುರುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ, ಗ್ರಾಮೀಣ ಪ್ರದೇಶದ ನಿವೇಶನ ರಹಿತ ಬಡ ಕುಟುಂಬಗಳಿಗೆ ಆದ್ಯತೆಯ ಮೇರೆಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಿ ಸೂರು ಕಲ್ಪಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಕಾರ್ಯನಿರ್ವಹಿಸುತ್ತಿದೆ. ಆದರೆ ಸರ್ಕಾರಿ ಜಾಗವನ್ನು ಗುರುತಿಸಿ ಬಡಾವಣೆಯಾಗಿ ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜಮೀನು ಮಂಜೂರಾಗದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆದರೆ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ. ಈ ಬಗ್ಗೆ ಶಾಸಕರು ಹಾಗೂ ತಾಲೂಕು ದಂಡಾಧಿಕಾರಿಗಳು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕಿನ ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವನಹಳ್ಳಿ ಸೇರಿದಂತೆ ಭಕ್ತರಹಳ್ಳಿ, ಹೊಸಹಳ್ಳಿ, ನಾಗಸಂದ್ರ, ಬಚ್ಚಹಳ್ಳಿ, ಶಿವಪುರ, ಸೊಣ್ಣಪ್ಪನಹಳ್ಳಿ, ಚಿಕ್ಕಬೆಳವಂಗಲ, ದೊಡ್ಡಹೆಜ್ಜಾಜಿ, ಚುಂಚೇಗೌಡನಹೊಸಹಳ್ಳಿ, ಮಧುರನಹೊಸಹಳ್ಳಿ, ಕೂಗೋನಹಳ್ಳಿ ಹಾಗೂ ಪಿಂಡಕೂರತಿಮ್ಮನಹಳ್ಳಿ ಗ್ರಾಮಗಳ ವಿವಿಧ ಸರ್ವೆ ಸಂಖ್ಯೆಗಳಲ್ಲಿರುವ ಸರ್ಕಾರಿ ಜಾಗಗಳನ್ನು ಆಶ್ರಯ ನಿವೇಶನ ಯೋಜನೆಗೆ ವರ್ಗಾಯಿಸಲಾಗಿದ್ದರೂ ಅಭಿವೃದ್ಧಿಪಡಿಸಿಲ್ಲ ಎಂದು ಆರೋಪಿಸಿದರು.
ನಕ್ಷೆ ಇಲ್ಲ, ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ, ಫಲಾನುಭವಿಗಳ ಆಯ್ಕೆ ಆಗಿಲ್ಲ, ಜಾಗದಲ್ಲಿ ತಕರಾರು ಇದೆ, ಹದ್ದುಬಸ್ತು ಪೂರ್ಣಗೊಂಡಿಲ್ಲ ಎಂಬ ಕಾರಣಗಳನ್ನು ಅಧಿಕಾರಿಗಳು ಮುಂದಿಡುತ್ತಿರುವುದನ್ನು ಕರವೇ ಖಂಡಿಸುತ್ತದೆ ಎಂದು ಹೇಳಿದರು.
ತಕ್ಷಣ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಬಾಕಿ ಇರುವ ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಹಾಗೂ ತಾಲೂಕು ಪಂಚಾಯಿತಿ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಎಸ್.ಎಲ್. ವೇಣು, ತಾಲೂಕು ಕಾರ್ಯಾಧ್ಯಕ್ಷ ಜೋಗಹಳ್ಳಿ ಅಮ್ಮು, ಯುವ ಘಟಕದ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಕೆ.ಆರ್. ಮಂಜುನಾಥ್, ಎಸ್.ಎಂ. ಆನಂದ್ ಕುಮಾರ್, ಖಜಾಂಚಿ ರವಿ ಮುಕ್ಕೇನಹಳ್ಳಿ, ಪ್ರಧಾನ ಕಾರ್ಯದರ್ಶಿ ಬಶೀರ್ ಶ್ರೀನಗರ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯು ಜುಲೈ 5 ಕ್ಕೆ…
ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ…
ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ........ ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ.…
ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು…
ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…
ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…