ಆಶ್ರಯ ನಿವೇಶನ ಹಂಚಿಕೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಕರವೇ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ತಾಲೂಕು ಘಟಕದ ವತಿಯಿಂದ ಗುರುವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ, ಗ್ರಾಮೀಣ ಪ್ರದೇಶದ ನಿವೇಶನ ರಹಿತ ಬಡ ಕುಟುಂಬಗಳಿಗೆ ಆದ್ಯತೆಯ ಮೇರೆಗೆ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಮಾಡಿ ಸೂರು ಕಲ್ಪಿಸುವ ಉದ್ದೇಶದಿಂದ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಕಾರ್ಯನಿರ್ವಹಿಸುತ್ತಿದೆ. ಆದರೆ ಸರ್ಕಾರಿ ಜಾಗವನ್ನು ಗುರುತಿಸಿ ಬಡಾವಣೆಯಾಗಿ ಅಭಿವೃದ್ಧಿಪಡಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಜಮೀನು ಮಂಜೂರಾಗದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಜಾಗವನ್ನು ಗುರುತಿಸಿ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆದರೆ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯೋಜನೆ ಅನುಷ್ಠಾನ ವಿಳಂಬವಾಗುತ್ತಿದೆ. ಈ ಬಗ್ಗೆ ಶಾಸಕರು ಹಾಗೂ ತಾಲೂಕು ದಂಡಾಧಿಕಾರಿಗಳು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ಕನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮದೇವನಹಳ್ಳಿ ಸೇರಿದಂತೆ ಭಕ್ತರಹಳ್ಳಿ, ಹೊಸಹಳ್ಳಿ, ನಾಗಸಂದ್ರ, ಬಚ್ಚಹಳ್ಳಿ, ಶಿವಪುರ, ಸೊಣ್ಣಪ್ಪನಹಳ್ಳಿ, ಚಿಕ್ಕಬೆಳವಂಗಲ, ದೊಡ್ಡಹೆಜ್ಜಾಜಿ, ಚುಂಚೇಗೌಡನಹೊಸಹಳ್ಳಿ, ಮಧುರನಹೊಸಹಳ್ಳಿ, ಕೂಗೋನಹಳ್ಳಿ ಹಾಗೂ ಪಿಂಡಕೂರತಿಮ್ಮನಹಳ್ಳಿ ಗ್ರಾಮಗಳ ವಿವಿಧ ಸರ್ವೆ ಸಂಖ್ಯೆಗಳಲ್ಲಿರುವ ಸರ್ಕಾರಿ ಜಾಗಗಳನ್ನು ಆಶ್ರಯ ನಿವೇಶನ ಯೋಜನೆಗೆ ವರ್ಗಾಯಿಸಲಾಗಿದ್ದರೂ ಅಭಿವೃದ್ಧಿಪಡಿಸಿಲ್ಲ ಎಂದು ಆರೋಪಿಸಿದರು.

ನಕ್ಷೆ ಇಲ್ಲ, ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಇದೆ, ಫಲಾನುಭವಿಗಳ ಆಯ್ಕೆ ಆಗಿಲ್ಲ, ಜಾಗದಲ್ಲಿ ತಕರಾರು ಇದೆ, ಹದ್ದುಬಸ್ತು ಪೂರ್ಣಗೊಂಡಿಲ್ಲ ಎಂಬ ಕಾರಣಗಳನ್ನು ಅಧಿಕಾರಿಗಳು ಮುಂದಿಡುತ್ತಿರುವುದನ್ನು ಕರವೇ ಖಂಡಿಸುತ್ತದೆ ಎಂದು ಹೇಳಿದರು.

ತಕ್ಷಣ ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಭೂಮಾಪನ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಬಾಕಿ ಇರುವ ಪ್ರಕ್ರಿಯೆ ಪೂರ್ಣಗೊಳಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತಾಲೂಕು ಕಚೇರಿ ಹಾಗೂ ತಾಲೂಕು ಪಂಚಾಯಿತಿ ಎದುರು ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಎಸ್.ಎಲ್. ವೇಣು, ತಾಲೂಕು ಕಾರ್ಯಾಧ್ಯಕ್ಷ ಜೋಗಹಳ್ಳಿ ಅಮ್ಮು, ಯುವ ಘಟಕದ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಕೆ.ಆರ್. ಮಂಜುನಾಥ್, ಎಸ್.ಎಂ. ಆನಂದ್ ಕುಮಾರ್, ಖಜಾಂಚಿ ರವಿ ಮುಕ್ಕೇನಹಳ್ಳಿ, ಪ್ರಧಾನ ಕಾರ್ಯದರ್ಶಿ ಬಶೀರ್ ಶ್ರೀನಗರ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

47 minutes ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

21 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago