ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ನಲ್ಲಿ ಬೆಂಕಿ ಅನಾಹುತ: ಅಣುಕು ಪ್ರದರ್ಶನ

 

ದೇವನಹಳ್ಳಿ ವ್ಯಾಪ್ತಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರವಿರುವ ಇಂಡಿಯನ್ ಆಯಿಲ್ ಸ್ಕೈ ಟ್ಯಾಂಕಿಂಗ್ ಪ್ರೈವೇಟ್ ಲಿಮಿಟೆಡ್‌ನ ಅನಿಲ ಸಂಗ್ರಹಾಗಾರದಲ್ಲಿ ಅನಿಲವನ್ನು ಪೈಪ್ ಲೈನ್ ಮೂಲಕ ವರ್ಗಾವಣೆ ಮಾಡುವ ಸಂದರ್ಭದಲ್ಲಿ ಅನಿಲವು ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಇಡೀ ಪ್ರದೇಶವೇ ಹೊಗೆಯಿಂದ ತುಂಬಿಹೋಯಿತು! ತಕ್ಷಣವೇ ಸಂಬಂಧಿಸಿದ ಕಾರ್ಮಿಕರು ಸಂವಹನ ಕೇಂದ್ರಕ್ಕೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದರು.

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ, ವೈದ್ಯಾಧಿಕಾರಿಗಳು, ಅನಿಲ ಸೋರಿಕೆ ತಪಾಸಣಾ ಸಿಬ್ಬಂದಿಯನ್ನು ಕೂಡಲೇ ಸ್ಥಳಕ್ಕೆ ಬರುವಂತೆ ತಿಳಿಸಿದರು. ಎಲ್ಲಾ ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಿ ವಾಹನಗಳ ಮತ್ತು ಜನರ ಓಡಾಟವನ್ನು ನಿರ್ಬಂಧಿಸಿ ಅಪಾಯದ ಮುನ್ನೆಚ್ಚರಿಕೆಯ ಕ್ರಮವಾಗಿ ಸೈರನ್ ಮೊಳಗಿಸಲಾಯಿತು.

ಸುತ್ತಮುತ್ತಲಿನ ಜನರಿಗೆ ಅಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಅರಿವಿರಲಿಲ್ಲ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಪೈಪುಗಳ ಮೂಲಕ ರಭಸವಾಗಿ ನೀರನ್ನು ಹರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚಿನ ಯಾವುದೇ ಅವಘಡಗಳು ಸಂಭವಿಸದಂತೆ ಸನ್ನಿವೇಶವನ್ನು ತಹಬಂದಿಗೆ ತಂದರು, ಈ ಅವಘಡದಲ್ಲಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು , ವೈದ್ಯಕೀಯ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ.

ಇದು ನೈಜ ಘಟನೆಯಲ್ಲ ಬದಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಎನ್ ಶಿವಶಂಕರ್ ಅವರ ಅಧ್ಯಕ್ಷತೆ ಮತ್ತು ಮಾರ್ಗದರ್ಶನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ನಡೆದ ಅಣಕು ಪ್ರದರ್ಶನವಾಗಿತ್ತು.

ಈ ಅಣುಕು ಪ್ರದರ್ಶನದಿಂದ ಜನ ಸಾಮಾನ್ಯರು ಆತಂಕ ಪಡುವ ಅವಶ್ಯಕತೆ ಇರುವುದಿಲ್ಲ. ಮೇಲಿನ ಘಟನೆಯು ಪ್ರತಿ ಆರು ತಿಂಗಳಿಗೊಮ್ಮೆ ಎಲ್ಲಾ ಕಾರ್ಖಾನೆ ಮತ್ತು ಎಲ್.ಪಿ.ಜಿ ಪ್ಲಾಂಟ್ ಗಳಲ್ಲಿ ಎಂದಿನಂತೆ ನಡೆಸುವ ತುರ್ತು ಸ್ಪಂದನ ಕಾರ್ಯದ (ERP) ಅಣುಕು ಪ್ರದರ್ಶನದ ಒಂದು ಭಾಗವಷ್ಟೇ ಆಗಿತ್ತು.

ಇಂತಹ ಅವಘಡಗಳು ಸಂಭವಿಸಿದಾಗ ಸಿಬ್ಬಂದಿಯು ಜಾಗೃತರಾಗಿರಲು ಸನ್ನದ್ಧರಾಗಿರುವಂತೆ ಮಾಡಲು ನಡೆಸುವ ಅಣುಕು ಪ್ರದರ್ಶನ ಕಸರತ್ತಿನಲ್ಲಿ ನಿಜವಾಗಿಯು ನಡೆಯುವ ನೈಜ ಘಟನೆಯಂತೆಯೇ ಸಂದರ್ಭವನ್ನು ಮರು ಸೃಷ್ಟಿಸಲಾಗುತ್ತದೆ. ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಜನರು ಅವಘಡಗಳು ಸಂಭವಿಸಬಹುದಾದಂತಹ ಸಂದರ್ಭದಲ್ಲಿ, ಸುರಕ್ಷಿತ ಕ್ರಮಗಳನ್ನು ಪಾಲಿಸಿ ಸೂಕ್ತ ರಕ್ಷಣೆ ಪಡೆದುಕೊಳ್ಳುವ ಉದ್ದೇಶದಿಂದ ಜನರಿಗೆ ಜಾಗೃತಿ ಮೂಡಿಸಲು ಹಮ್ಮಿಕೊಳ್ಳಲಾಗುತ್ತದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಲ್ಲಾ ವಿಪತ್ತು ಪರಿಣಿತರಾದ ಎ. ಬಸವರಾಜು, ಕಾರ್ಖಾನೆಗಳ ಮತ್ತು ಬಾಯ್ಲರ್‌ಗಳ ಇಲಾಖೆಯ ಜಂಟಿ ನಿರ್ದೇಶಕರಾದ ನವನೀತ್ ಮೋಹನ್ ಮತ್ತು ಉಪ ನಿರ್ದೇಶಕರಾದ ಎಂ ಎ ಸೋಮಶೇಖರ್ ಈ ಅಣುಕು ಪ್ರದರ್ಶನ ಕಾರ್ಯಕ್ರಮದ ವೀಕ್ಷಕರಾಗಿ ಭಾಗವಹಿಸಿ, ಅಣುಕು ಪ್ರದರ್ಶನ ನಡೆಸುವ ಬಗ್ಗೆ ಹಾಗೂ ಸಿಬ್ಬಂದಿ ಸುರಕ್ಷತೆಯ ಕುರಿತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ದೇವನಹಳ್ಳಿ ತಾಲ್ಲೂಕು ಆಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರಾದ ನಾಗೇಶ್, ಕಾರ್ಯಾಚರಣೆ ಪ್ರಧಾನ ವ್ಯವಸ್ಥಾಪಕರಾದ ಹರಿರಾಮ್, ಸುರಕ್ಷತೆ, ಭದ್ರತೆ ಮತ್ತು ಪರಿಹಾರ ವಿಭಾಗದ ಹಿರಿಯ ಅಧಿಕಾರಿಗಳಾದ ಶ್ರೀನಿವಾಸ್, ಈ ಅಣುಕು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಇಂಡಿಯನ್ ಆಯಿಲ್ ಟ್ಯಾಂಕಿಂಗ್ ಸಿಇಒ, ಮತ್ತು ನಿರ್ದೇಶಕರಾದ ಟಿ ಎಸ್ ದುಪಾರೆ ಅವರ ಮೇಲ್ವಿಚಾರಣೆಯಲ್ಲಿ ಅಣುಕು ಪ್ರದರ್ಶನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

11 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

16 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

20 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

23 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago