ಇಂದಿನಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ: ವಿದ್ಯುತ್ ಮೀಟರ್ ರೀಡರ್‌ಗಳ ಮೂಲಕ ಎಲ್ಲ ಮನೆಗಳ ಜಿಯೋ ಟ್ಯಾಗಿಂಗ್ ಕಾರ್ಯಕ್ಕೆ ಸಹಕರಿಸಿ- ಮಧುಸೂಧನ್ ಆರ್ ನಾಯ್ಕ ಮನವಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಇಂದಿನಿಂದ ಪ್ರಾರಂಭಿಸುತ್ತಿದೆ, ವಿದ್ಯತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸುವ ಬದ್ಧತೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಮೊದಲ ಹಂತದಲ್ಲಿ ಸಮೀಕ್ಷೆಗೆ ಸಂಬಂಧಿಸಿದ ಪೂರ್ವಭಾವಿ ಕೆಲಸಗಳಾಗಿರುವ ಮನೆ ಪಟ್ಟಿ ಮತ್ತು ಅವುಗಳ ನಕ್ಷೆ (ಮ್ಯಾಪಿಂಗ್) ಸಿದ್ಧಪಡಿಸುವ ಕಾರ್ಯವನ್ನು ಒಳಗೊಂಡಿರುತ್ತದೆ. ಅದು ರಾಜ್ಯದಾದ್ಯಂತ ಎಲ್ಲಾ ಮನೆಗಳ ಸಂಪೂರ್ಣ ಎಣಿಕೆ, ಅನುಕ್ರಮ ಸಂಖ್ಯೆಗಳನ್ನು ನೀಡುವುದು ಮತ್ತು ಮ್ಯಾಪಿಂಗ್ ಮಾಡುವ ಕೆಲಸವನ್ನು ಸಾಧ್ಯವಾಗಿಸುತ್ತದೆ. ರಾಜ್ಯದಲ್ಲಿರುವ ಎಲ್ಲಾ ವಾಸದ ಮನೆಗಳಿಗೆ ವಿದ್ಯುತ್ ಸಂಪರ್ಕವಿರುವುದರಿಂದ ವಾಸದ ಮನೆಗಳ ಆರ್. ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ ಅಲ್ಲಿರುವ ಜನರ ಸಮೀಕ್ಷೆ ಮಾಡುವುದರಿಂದ ಯಾವುದೇ ಮನೆಗಳು ಸಮೀಕ್ಷಾ ವ್ಯಾಪ್ತಿಯಿಂದ ತಪ್ಪಿ ಹೋಗುವುದಿಲ್ಲ.

ಇದರಿಂದ ಎರಡನೇ ಹಂತದಲ್ಲಿ ಸಮೀಕ್ಷೆಯ ಕಾರ್ಯವನ್ನು ವ್ಯವಸ್ಥಿತವಾಗಿ ಮತ್ತು ವೈಜ್ಞಾನಿಕವಾಗಿ ಕಾರ್ಯಗತಗೊಳಿಸಲು ಅನುಕೂಲವಾಗುತ್ತದೆ. ಎರಡನೇಯ ಹಂತದ ಸಮೀಕ್ಷೆಯ ಕಾರ್ಯವನ್ನು ದಸರಾ ರಜೆಯ ಅವಧಿಯಲ್ಲಿ 22 ನೇ ಸೆಪ್ಟೆಂಬರ್ ನಿಂದ 7 ನೇ ಅಕ್ಟೋಬರ್ 2025 ರವರೆಗೆ ನಡೆಸಲು ಗುರಿ ಹೊಂದಲಾಗಿದೆ. ಈ ಸಮಯದಲ್ಲಿ ಶಾಲಾ ರಜಾದಿನಗಳು ಇರುವುದರಿಂದ ಸಮೀಕ್ಷೆ ಕಾರ್ಯಕ್ಕೆ ಪೂರಕವಾಗುತ್ತದೆ.

ಇ-ಆಡಳಿತ ಮತ್ತು ಇಂಧನ ಇಲಾಖೆಗಳು ವಿದ್ಯುಚ್ಛಕ್ತಿ ಮೀಟರ್ ಸಂಪರ್ಕದ (ಆ‌ರ್.ಆ‌ರ್. ನಂಬರ್) ಆಧಾರದ ಮೇಲೆ ವಿನ್ಯಾಸಗೊಳಿಸಿದ ಈ ನವೀನ, ಕ್ರಿಯಾತ್ಮಕ ಮತ್ತು ವಿಶಿಷ್ಟ ವ್ಯವಸ್ಥೆಯು ಉತ್ತಮವಾಗಿದೆ. ಅದಕ್ಕನುಗುಣವಾಗಿ ಒಂದು ಅಗತ್ಯವಾದ ‘ಆ್ಯಪ್’ ಅಭಿವೃದ್ಧಿಪಡಿಸಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರು ಸೇರಿದಂತೆ, ಆಯೋಗದ ಇಂಧನ ಇಲಾಖೆಯ, ಇ.ಡಿ.ಸಿ.ಎಸ್ ಸಂಸ್ಥೆಯ ಉತ್ಸಾಹಿ ಹಾಗೂ ಸೃಜನಶೀಲ ಸಲಹಾ ತಂಡದ ಸಹಕಾರದೊಂದಿಗೆ ಈ ಪ್ರಕ್ರಿಯೆಯನ್ನು ವಿನ್ಯಾಸಗೊಳಿಸಲಾಗಿದೆ. ಸಮೀಕ್ಷೆಯ ಕಾರ್ಯವನ್ನು ತ್ವರಿತವಾಗಿ ಪ್ರಾರಂಭಿಸಲು ಸಹಾಯ ಮಾಡುತ್ತದೆ.

ಇದು ರಾಜ್ಯದಾದ್ಯಂತ ಇರುವ ಇಂಧನ ಇಲಾಖೆಯ ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ( ESCOM) ಗಳ ಅಪಾರ ಸಂಖ್ಯೆಯ ‘ಮೀಟರ್ ರೀಡರ್’ (Meter Readers) ಗಳನ್ನು ಒಳಗೊಂಡಿರುತ್ತದೆ. ಕರ್ನಾಟಕ ರಾಜ್ಯವು ಎಲ್ಲಾ ಮನೆಗಳನ್ನು ವಿದ್ಯುದ್ದೀಕರಣ ಗೊಳಿಸುವುದರಲ್ಲಿ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯವಾಗಿರುವುದರಿಂದ ಎಸ್ಕಾಂಗಳ ಮೀಟರ್ ರೀಡರ್ ಗಳು, ಗ್ರಾಹಕರ ಮನೆ ಬಳಕೆ ವಿದ್ಯುತ್ ಸಂಪರ್ಕದ ಮೀಟರ್ ಅನ್ನು ಓದುವುದು ಮತ್ತು ಬಿಲಿಂಗ್ ಮಾಡುವುದರ ಜೊತೆಗೆ ಮನೆಗಳನ್ನು ‘ಜಿಯೋ ಟ್ಯಾಗ್’ ಮಾಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವ್ಯಾಪ್ತಿಗೆ ಒಳಪಟಿಸುತ್ತಾರೆ.

ಮೀಟರ್ ರೀಡರ್ ಗಳು ಸೆರೆಹಿಡಿದ ಮನೆ ಪಟ್ಟಿ ಡೇಟಾವನ್ನು EDCS (ನಾಗರಿಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ) ನ ಸರ್ವರ‌್ ಗಳಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ನಂತರ ದ್ವಿತೀಯ ದತ್ತಾಂಶಗಳನ್ನು ಆಧರಿಸಿ, ಮೌಲೀಕರಿಸಿದ ನಂತರ ‘ಮನೆ ಪಟ್ಟಿ’ ಸಮೀಕ್ಷೆಯ ಉದ್ದೇಶಕ್ಕಾಗಿ ‘ಮ್ಯಾಪಿಂಗ್’ ಮಾಡಲಾಗುತ್ತದೆ. ಅಭಿವೃದ್ಧಿಪಡಿಸಲಾದ ಅಪ್ಲಿಕೇಶನ್ ನಲ್ಲಿ ಮನೆಯ ‘ಸ್ಥಳ’ (Location) ವನ್ನು ಸೆರೆಹಿಡಿಯಲಾಗುತ್ತದೆ ಮತ್ತು ಪ್ರತಿ ಮನೆಗಳಿಗೆ ‘ವಿಶಿಷ್ಟ್ಯ (Unique Number) ಸಂಖ್ಯೆಯನ್ನು’ ನೀಡಲಾಗುತ್ತದೆ. [ಅಪಾರ್ಟ್‌ ಮೆಂಟ್ ಗಳು / ವಾಸಸ್ಥಳಗಳ ಕ್ಲಸ್ಟರ್ ಸೇರಿದಂತೆ]

ತಮ್ಮ ‘ಬಿಲ್ಲಿಂಗ್ ಸೈಕಲ್’ನಲ್ಲಿ ಮೀಟ‌ರ್ ರೀಡರ್ ಗಳು ಆಗಸ್ಟ್ 23, 2025 ರಿಂದ ಸದರಿ ಕೆಲಸವನ್ನು ಪ್ರಾರಂಭಿಸುತ್ತಾರೆ ಮತ್ತು ಅಭಿವೃದ್ಧಿ ಪಡಿಸಲಾದ ಆ್ಯಪ್ ನಲ್ಲಿ ದಾಖಲಿಸುತ್ತಾರೆ. ಇದಾದ ನಂತರ ಪ್ರತಿ ಮನೆಗೂ ಸ್ಟಿಕ್ಕರ್ ಅಂಟಿಸಿ ಸಮೀಕ್ಷಾ ದಾರರಿಗೆ ಮನೆಯ ಗುರುತಿಸುವಿಕೆ ಸುಲಭವಾಗುವಂತೆ ಮಾಡುತ್ತಾರೆ.

ಪ್ರಸ್ತಾವಿತ ಸಮೀಕ್ಷೆಯು ಹಿಂದುಳಿದ ವರ್ಗಗಳು ಮತ್ತು ಇತರ ಎಲ್ಲಾ ಜನರ ‘ದತ್ತಾಂಶಗಳನ್ನು ಸೆರೆಹಿಡಿಯುವುದು’ ಮಾತ್ರವಲ್ಲದೆ, ಅಂದಾಜು 7 ಕೋಟಿ ಜನರಿಗೆ ಸರ್ಕಾರಿ ಇಲಾಖೆಗಳಿಂದ ಪ್ರಾರಂಭಿಸಲಾಗಿರುವ ಹಾಗೂ ಮುಂದೆ ಪ್ರಾರಂಭಿಸಲಿರುವ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಬಳಸಬಹುದಾದ ಉಪಯುಕ್ತ ದತ್ತಾಂಶವಾಗಲಿದೆ.

ಮನೆ ಪಟ್ಟಿ ಕಾರ್ಯಾಚರಣೆಗಳ ಈ ಮೊದಲ ಹಂತವು ತುಂಬಾ ಸವಾಲಿನದ್ದಾಗಿದ್ದರೂ ರಾಜ್ಯದ ಎಲ್ಲಾ ಮನೆಗಳನ್ನು ಒಳಗೊಂಡಂತೆ ವ್ಯವಸ್ಥಿತವಾಗಿ ಸಮೀಕ್ಷೆಯನ್ನು ನಡೆಸುವ ಉದ್ದೇಶಕ್ಕಾಗಿ ಇದು ಬಹಳ ಪ್ರಮುಖ ಕಾರ್ಯವಾಗಿದೆ. ಆದ್ದರಿಂದ, ಸಾರ್ವಜನಿಕರು ಮತ್ತು ಪ್ರತಿಯೊಂದು ಕುಟುಂಬದ ಸದಸ್ಯರು [ವಿಶೇಷವಾಗಿ ಅಪಾರ್ಟೆಂಟ್ ಮತ್ತು ಕ್ಲಸ್ಟರ್ ವಾಸಸ್ಥಳಗಳಲ್ಲಿ ವಾಸಿಸುವವರು] ಮೀಟರ್ ರೀಡರ್ ಗಳಿಗೆ ವಹಿಸಲಾಗಿರುವ ಮನೆ ಪಟ್ಟಿ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸುವ ದಿಸೆಯಲ್ಲಿ ಸಹಕರಿಸಲು ಮತ್ತು ಅನುಕೂಲ ಮಾಡಿಕೊಡಲು ಆಯೋಗ ಮನವಿ ಮಾಡಿದೆ.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

28 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

34 minutes ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

7 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago