Categories: ಲೇಖನ

ಇಎಂಐ ( EMI ) ಗಳ ಬಲೆಯೊಳಗೆ ಯುವ ಸಮೂಹ……

ಇಎಂಐ ( EMI ) ಗಳ ಬಲೆಯೊಳಗೆ ಯುವ ಸಮೂಹ……

ಮನೆ ಖರೀದಿ ಬದುಕನ್ನೇ ಮಾರಾಟ
ಮಾಡಿದಂತೆ……….

” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು ಖರೀದಿಸಿರುತ್ತದೆ ”

ಆಸ್ಟ್ರೇಲಿಯಾದ ಉದ್ಯಮಿಯೊಬ್ಬರ ಅನುಭವದ ನುಡಿಗಳು……

ಭಾರತದ ಮಧ್ಯಮ ವರ್ಗದ ಜನರ ಬದುಕಿಗೆ ಇದು ಅತ್ಯಂತ ಹತ್ತಿರವಾಗಿದೆ. ಕೇವಲ ಮನೆ ಮಾತ್ರವಲ್ಲ ಕಾರು, ಪ್ರವಾಸ, ಇತರ ಅನೇಕ ವಸ್ತುಗಳು, ಜೀವ ವಿಮೆ, ಆರೋಗ್ಯ ವಿಮೆ ಮುಂತಾದ ಅನೇಕ ಬದುಕಿನ ಅವಶ್ಯಕತೆಗಳಿಗೆ ಸೌಲಭ್ಯ ಒದಗಿಸಲಾಗಿದೆ…..

ಕೆಲವು ದಶಕಗಳ ಹಿಂದೆ ಸಾಮಾನ್ಯವಾಗಿ ಬಹುತೇಕ ಸರ್ಕಾರಿ ಉದ್ಯೋಗಿಗಳು ಮತ್ತು ಕೆಲವು ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗು ಕೆಲವು ಯಶಸ್ವಿ ಉದ್ಯಮಿಗಳು ಸುಮಾರು 50/60 ರ‌ ವಯಸ್ಸಿನ ಆಸುಪಾಸಿನಲ್ಲಿ ಅಂದರೆ ನಿವೃತ್ತಿಯ ಸಮೀಪದಲ್ಲಿ ಒಂದು ಸ್ವಂತ ಮನೆ ಮತ್ತು ಮಕ್ಕಳ ಮದುವೆ ಮಾಡುತ್ತಿದ್ದರು. ಅಲ್ಲಿಯವರೆಗೂ ಸಾಧ್ಯವಾದಷ್ಟು ತಮ್ಮ ಸಂಪಾದನೆಯ ಹಣ ಉಳಿತಾಯ ಮಾಡಿರುವುದನ್ನು ಖರ್ಚು ಮಾಡುತ್ತಿದ್ದರು. ಸಾಲ ಎಂಬುದು ಶೂಲ ಎನ್ನುವ ಅಭಿಪ್ರಾಯವಿತ್ತು.

ಆದರೆ ಜಾಗತೀಕರಣದ ನಂತರ ಬ್ಯಾಂಕಿಂಗ್ ಕ್ಷೇತ್ರದ ಹಣಕಾಸು ಸಂಸ್ಥೆಗಳು ಲಾಭದ ಸ್ಪರ್ಧೆಗೆ ಬಿದ್ದು ಅಭಿವೃದ್ಧಿಯ ಹೆಸರಿನಲ್ಲಿ ಸರಳ ರೀತಿಯ ಆದರೆ ಸಂಕೀರ್ಣ ಲಾಭಕೋರ ಸಾಲ ಸೌಲಭ್ಯಗಳನ್ನು ಕೆಳ ಹಂತಕ್ಕೆ ತಲುಪಿಸುವ ಯೋಜನೆಗಳನ್ನು ರೂಪಿಸಿದರು. ಅದರ ಪರಿಣಾಮವಾಗಿ ಸುಮಾರು ‌30 ವರ್ಷ ಆಸುಪಾಸಿನ ವಯೋಮಾನದ ಯುವಕರು ಸಹ ಸ್ವಂತ ಮನೆಯ ಕನಸು ಕಾಣಲು ಪ್ರೇರೇಪಣೆಯಾಯಿತು. ಅದಕ್ಕೆ ಪೂರಕವಾಗಿ ಮತ್ತಷ್ಟು ಕಾರಣಗಳು ಮತ್ತು ಅನಿವಾರ್ಯತೆಯನ್ನು ಕೃತಕವಾಗಿ ಸೃಷ್ಟಿಸಲಾಯಿತು.

20/30 ವರ್ಷಗಳ ಸುಲಭ ಸಾಲ ಕಂತುಗಳು ( ಇಎಂಐ ) ಯೋಜನೆಯನ್ನು ಮನೆ ಬಾಗಿಲಿಗೆ ಆಕರ್ಷಕವಾಗಿ ತಲುಪಿಸಲಾಯಿತು.

ಮೇಲ್ನೋಟಕ್ಕೆ ಅತ್ಯಂತ ಪ್ರಗತಿಪರ ಮತ್ತು ಅನುಕೂಲಕರ ಎನಿಸಿದರು ದೀರ್ಘ ಅವಧಿಯ ಬಡ್ಡಿ ಪರೋಕ್ಷವಾಗಿ ನಮ್ಮ ಸಂಪಾದನೆಯ ಬಹಳಷ್ಟು ಹಣವನ್ನು ನಮಗರಿವಿಲ್ಲದೆ ನುಂಗುತ್ತದೆ. ಹಣಕಾಸು ಸಂಸ್ಥೆಗಳು ಕೋಟಿ ಕೋಟಿಗಳ ಲೆಕ್ಕದಲ್ಲಿ ಲಾಭ‌ ಗಳಿಸುತ್ತವೆ.

ಆದರೆ ಇಲ್ಲಿ ಅಡಗಿರುವ ಮತ್ತೊಂದು ಭಯಾನಕ ಸತ್ಯವೆಂದರೆ ಅದರಲ್ಲೂ ಮಧ್ಯಮ ವರ್ಗದವರ ಪಾಲಿನ ದುರಂತವೆಂದರೆ ಒಂದು ಸ್ವಂತ ಮನೆಗಾಗಿ 30 ರಿಂದ 60 ರ ವರೆಗಿನ ಬದುಕಿನ ಅತ್ಯಮೂಲ್ಯ ಸಮಯ ಮತ್ತು ಸಂಪಾದನೆಯನ್ನು ಕಳೆದುಕೊಳ್ಳಬೇಕಾಗುತ್ತದೆ. ತಾವು ಕೆಲಸ ಮಾಡುವ ಸ್ಥಳದಲ್ಲಿ ಅನಿವಾರ್ಯವಾಗಿ ಗುಲಾಮಿತನವನ್ನು ಒಪ್ಪಿಕೊಳ್ಳಬೇಕಾಗುತ್ತದೆ, ಭ್ರಷ್ಟರಾಗಬೇಕಾಗುತ್ತದೆ, ಅನ್ಯಾಯವೇನಾದರು ನಡೆದರೆ ಅದನ್ನು ಸಹಿಸಬೇಕಾಗುತ್ತದೆ.

ಸ್ವಲ್ಪ ಪ್ರತಿರೋಧ ತೋರಿದರೂ ಉದ್ಯೋಗಕ್ಕೆ ಕುತ್ತಾಗಿ ಕಂತು ಕಟ್ಟುವುದು ಕಷ್ಟವಾಗಿ ಬದುಕು ಬೀದಿಗೆ ಬರುತ್ತದೆ ಎಂಬ ಅನಿವಾರ್ಯ ಭಯ ಸೃಷ್ಟಿಯಾಗುತ್ತದೆ. ಹೆಂಡತಿ ಮಕ್ಕಳ ಭವಿಷ್ಯ ನೆನಪಾಗಿ ಜೀತದಾಳುವಿನ ಮನೋಭಾವಕ್ಕೆ ಶರಣಾಗಬೇಕಾಗುತ್ತದೆ.

ಇದನ್ನೇ ಅತ್ಯಂತ ಸೂಕ್ಷ್ಮವಾಗಿ ಮತ್ತು ಸ್ಪಷ್ಟವಾಗಿ ಆಸ್ಟ್ರೇಲಿಯಾದ ಉದ್ಯಮಿ ಮನೆ ನಿಮ್ಮನ್ನು ಖರೀದಿಸಿರುತ್ತದೆ ಎಂದು ಹೇಳಿರುವುದು.

ಕೆಲವರು ಇನ್ನೊಂದು ವಿಚಾರ ಮಂಡಿಸುತ್ತಾರೆ. ಹಣಕಾಸು ಸಂಸ್ಥೆಗಳು ನಿಮ್ಮನ್ನು ಒತ್ತಾಯಿಸುವುದಿಲ್ಲ.‌ ಕೇವಲ ಪ್ರಚಾರ ನೀಡುತ್ತಾರೆ. ಆಯ್ಕೆ ನಿಮ್ಮದು. ನಿಮ್ಮ ವಿವೇಚನೆ ಬಳಸಬಹುದಲ್ಲವೇ ಎಂದು…

ಆದರೆ ಭಾರತದ ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆ ಹಾಗು ಮಾನಸಿಕ ಪರಿಸ್ಥಿತಿ ಅಷ್ಟು ಪ್ರಬುದ್ದವಾಗಿಲ್ಲ. ಬಹುಬೇಗ ಆಸೆ ಆಮಿಷ ಭಾವನೆ ಮತ್ತು ಒತ್ತಡಗಳಿಗೆ ಒಳಗಾಗುತ್ತದೆ. ಅದನ್ನು ಅರಿತ ಕಾರ್ಪೊರೇಟ್ ವರ್ಗ ಪರೋಕ್ಷವಾಗಿ ಮತ್ತು ಸಹಜವಾಗಿ ಅನಿವಾರ್ಯತೆ ಸೃಷ್ಟಿಯಾಗುವಂತೆ ಮಾಡಿ ಅಭಿವೃದ್ಧಿ ಎಂದರೆ ಇದೇ, ನಿಜವಾದ ಯಶಸ್ಸು ಇದರಲ್ಲಿಯೇ ಅಡಗಿದೆ ಎಂದು ಭ್ರಮೆ ಸೃಷ್ಟಿಸುವ ಕಲೆಗಾರಿಕೆ ಅವರಿಗೆ ಕರಗತವಾಗಿದೆ.

ಒಮ್ಮೆ ಕಂತುಗಳು ಬಂಧನದಲ್ಲಿ ಸಿಲುಕಿದ ವ್ಯಕ್ತಿ ಇತರ ಯಾವುದೇ ಸ್ವತಂತ್ರ, ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗುವುದು ಕಷ್ಟವಾಗುತ್ತದೆ.‌ ಸದಾ ಒತ್ತಡ ಆತನನ್ನು ಮಾನಸಿಕ ಮತ್ತು ದೈಹಿಕವಾಗಿ ಕುಸಿಯುವಂತೆ ಮಾಡುತ್ತದೆ. ಅಪರೂಪದ ಕೆಲವು ಪ್ರಕರಣ ಹೊರತುಪಡಿಸಿ.

20/25 ವರ್ಷಗಳ ನಂತರ ಮನೆ ಸ್ವಂತದ್ದಾಗುತ್ತದೆ. ಆದರೆ ಜೀವನ ಬಾಡಿಗೆಯಲ್ಲಿಯೇ ಇರುತ್ತದೆ. ಜೀವನದ ಗುಣಮಟ್ಟ ಕುಸಿದಿರುತ್ತದೆ.
ಮಾನಸಿಕ ಒತ್ತಡದಿಂದಾಗಿ ಬಹುತೇಕರು ಇದೇ ಕಾರಣದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದು ಅತ್ಯಂತ ಆಘಾತಕಾರಿ ವಿಷಯ.

ಹಲವು ಶತಮಾನಗಳ ಹಿಂದೆಯೇ ಹೇಳಿದ ಮಾತು,
” ಸಾಲವನು ಕೊಂಬಾಗ
ಹಾಲೋಗರುಂಡಂತೆ,
ಸಾಲಿಗರು ಕೊಂಡು ಎಳೆವಾಗ
ಕಿಬ್ಬದಿಯ ಕೀಲು ಮುರಿದಂತೆ
ಸರ್ವಜ್ಞ…..”…….

ಇದು ಕೆಲವರ ಪಾಲಿಗೆ ಆಪದ್ಬಾಂಧವನಂತೆ ಅನುಕೂಲಕರ ವಾತಾವರಣ ನಿರ್ಮಿಸುವುದು ನಿಜ. ಕೆಲವರು ಇಎಂಐ ಗಳ ಲಾಭ ಪಡೆದು ಸ್ವಂತ ಮನೆ, ಕಾರು ಇತ್ಯಾದಿ ತಮ್ಮ ಅವಶ್ಯಕತೆಗಳನ್ನು ಪೂರೈಸಿಕೊಂಡಿದ್ದಾರೆ. ಆದರೆ ಇದು ಕೆಲವರಿಗೆ ಮಾತ್ರ ಉಪಯೋಗವಾಗಿ ಸಾಕಷ್ಟು ಜನರಿಗೆ ತೊಂದರೆಯಾಗಿರುವುದು ನಿಜ. ಮಧ್ಯಮ ವರ್ಗದವರಾದ ನಾವು ನಮ್ಮ ಒಟ್ಟಾರೆ ಪರಿಸ್ಥಿತಿಯನ್ನು, ಆರ್ಥಿಕ ಹರಿವನ್ನು ಅರ್ಥ ಮಾಡಿಕೊಂಡು emi ಗಳನ್ನು ಉಪಯೋಗಿಸಿಕೊಂಡರೆ ಇದರ ಲಾಭ ಸಿಗುತ್ತದೆ. ಸ್ವಲ್ಪ ಯಾಮಾರಿ, ಯಾರದೋ ಮಾತು ಕೇಳಿ ಅಥವಾ ಇತರರನ್ನು ನೋಡಿ ಅತಿಯಾದ ಆಸೆಗೆ ಬಿದ್ದರೆ ಬದುಕು ನರಕವಾಗುವುದು ನಿಶ್ಚಿತ. ಆದ್ದರಿಂದ ನಮ್ಮ ಜೀವನ ಶೈಲಿಯನ್ನು ಸಂಪೂರ್ಣ ಅವಲೋಕನಕ್ಕೆ ಒಳಪಡಿಸಿ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು……

ಬ್ಯಾಂಕಿಂಗ್ ಕ್ಷೇತ್ರ ಅತ್ಯಂತ ಲಾಭದಾಯಕ ಉದ್ಯಮವಾಗಿ ಬೆಳೆಯುತ್ತಿರುವುದಕ್ಕೆ ನಾವು ಇಎಂಐ ಗಳ ಬಲೆಯೊಳಗೆ ಸಿಲುಕಿರುವುದು ಕಾರಣ ಎಂಬುದನ್ನು ದಯವಿಟ್ಟು ಯುವ ಸಮೂಹಕ್ಕೆ ಅರ್ಥ ಮಾಡಿಸಿ ಎಂದು ಮನವಿ ಮಾಡಿಕೊಳ್ಳುತ್ತಾ‌…..‌‌

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ ಎಚ್. ಕೆ

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

7 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

8 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

12 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago