Categories: ಲೇಖನ

ಇಎಂಐ ( EMI ) ಗಳ ಬಲೆಯೊಳಗೆ ಯುವ ಸಮೂಹ……

ಇಎಂಐ ( EMI ) ಗಳ ಬಲೆಯೊಳಗೆ ಯುವ ಸಮೂಹ……

ಮನೆ ಖರೀದಿ ಬದುಕನ್ನೇ ಮಾರಾಟ
ಮಾಡಿದಂತೆ……….

” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು ಖರೀದಿಸಿರುತ್ತದೆ ”

ಆಸ್ಟ್ರೇಲಿಯಾದ ಉದ್ಯಮಿಯೊಬ್ಬರ ಅನುಭವದ ನುಡಿಗಳು……

ಭಾರತದ ಮಧ್ಯಮ ವರ್ಗದ ಜನರ ಬದುಕಿಗೆ ಇದು ಅತ್ಯಂತ ಹತ್ತಿರವಾಗಿದೆ. ಕೇವಲ ಮನೆ ಮಾತ್ರವಲ್ಲ ಕಾರು, ಪ್ರವಾಸ, ಇತರ ಅನೇಕ ವಸ್ತುಗಳು, ಜೀವ ವಿಮೆ, ಆರೋಗ್ಯ ವಿಮೆ ಮುಂತಾದ ಅನೇಕ ಬದುಕಿನ ಅವಶ್ಯಕತೆಗಳಿಗೆ ಸೌಲಭ್ಯ ಒದಗಿಸಲಾಗಿದೆ…..

ಕೆಲವು ದಶಕಗಳ ಹಿಂದೆ ಸಾಮಾನ್ಯವಾಗಿ ಬಹುತೇಕ ಸರ್ಕಾರಿ ಉದ್ಯೋಗಿಗಳು ಮತ್ತು ಕೆಲವು ಖಾಸಗಿ ಕಂಪನಿಗಳ ಉದ್ಯೋಗಿಗಳು ಹಾಗು ಕೆಲವು ಯಶಸ್ವಿ ಉದ್ಯಮಿಗಳು ಸುಮಾರು 50/60 ರ‌ ವಯಸ್ಸಿನ ಆಸುಪಾಸಿನಲ್ಲಿ ಅಂದರೆ ನಿವೃತ್ತಿಯ ಸಮೀಪದಲ್ಲಿ ಒಂದು ಸ್ವಂತ ಮನೆ ಮತ್ತು ಮಕ್ಕಳ ಮದುವೆ ಮಾಡುತ್ತಿದ್ದರು. ಅಲ್ಲಿಯವರೆಗೂ ಸಾಧ್ಯವಾದಷ್ಟು ತಮ್ಮ ಸಂಪಾದನೆಯ ಹಣ ಉಳಿತಾಯ ಮಾಡಿರುವುದನ್ನು ಖರ್ಚು ಮಾಡುತ್ತಿದ್ದರು. ಸಾಲ ಎಂಬುದು ಶೂಲ ಎನ್ನುವ ಅಭಿಪ್ರಾಯವಿತ್ತು.

ಆದರೆ ಜಾಗತೀಕರಣದ ನಂತರ ಬ್ಯಾಂಕಿಂಗ್ ಕ್ಷೇತ್ರದ ಹಣಕಾಸು ಸಂಸ್ಥೆಗಳು ಲಾಭದ ಸ್ಪರ್ಧೆಗೆ ಬಿದ್ದು ಅಭಿವೃದ್ಧಿಯ ಹೆಸರಿನಲ್ಲಿ ಸರಳ ರೀತಿಯ ಆದರೆ ಸಂಕೀರ್ಣ ಲಾಭಕೋರ ಸಾಲ ಸೌಲಭ್ಯಗಳನ್ನು ಕೆಳ ಹಂತಕ್ಕೆ ತಲುಪಿಸುವ ಯೋಜನೆಗಳನ್ನು ರೂಪಿಸಿದರು. ಅದರ ಪರಿಣಾಮವಾಗಿ ಸುಮಾರು ‌30 ವರ್ಷ ಆಸುಪಾಸಿನ ವಯೋಮಾನದ ಯುವಕರು ಸಹ ಸ್ವಂತ ಮನೆಯ ಕನಸು ಕಾಣಲು ಪ್ರೇರೇಪಣೆಯಾಯಿತು. ಅದಕ್ಕೆ ಪೂರಕವಾಗಿ ಮತ್ತಷ್ಟು ಕಾರಣಗಳು ಮತ್ತು ಅನಿವಾರ್ಯತೆಯನ್ನು ಕೃತಕವಾಗಿ ಸೃಷ್ಟಿಸಲಾಯಿತು.

20/30 ವರ್ಷಗಳ ಸುಲಭ ಸಾಲ ಕಂತುಗಳು ( ಇಎಂಐ ) ಯೋಜನೆಯನ್ನು ಮನೆ ಬಾಗಿಲಿಗೆ ಆಕರ್ಷಕವಾಗಿ ತಲುಪಿಸಲಾಯಿತು.

ಮೇಲ್ನೋಟಕ್ಕೆ ಅತ್ಯಂತ ಪ್ರಗತಿಪರ ಮತ್ತು ಅನುಕೂಲಕರ ಎನಿಸಿದರು ದೀರ್ಘ ಅವಧಿಯ ಬಡ್ಡಿ ಪರೋಕ್ಷವಾಗಿ ನಮ್ಮ ಸಂಪಾದನೆಯ ಬಹಳಷ್ಟು ಹಣವನ್ನು ನಮಗರಿವಿಲ್ಲದೆ ನುಂಗುತ್ತದೆ. ಹಣಕಾಸು ಸಂಸ್ಥೆಗಳು ಕೋಟಿ ಕೋಟಿಗಳ ಲೆಕ್ಕದಲ್ಲಿ ಲಾಭ‌ ಗಳಿಸುತ್ತವೆ.

ಆದರೆ ಇಲ್ಲಿ ಅಡಗಿರುವ ಮತ್ತೊಂದು ಭಯಾನಕ ಸತ್ಯವೆಂದರೆ ಅದರಲ್ಲೂ ಮಧ್ಯಮ ವರ್ಗದವರ ಪಾಲಿನ ದುರಂತವೆಂದರೆ ಒಂದು ಸ್ವಂತ ಮನೆಗಾಗಿ 30 ರಿಂದ 60 ರ ವರೆಗಿನ ಬದುಕಿನ ಅತ್ಯಮೂಲ್ಯ ಸಮಯ ಮತ್ತು ಸಂಪಾದನೆಯನ್ನು ಕಳೆದುಕೊಳ್ಳಬೇಕಾಗುತ್ತದೆ. ತಾವು ಕೆಲಸ ಮಾಡುವ ಸ್ಥಳದಲ್ಲಿ ಅನಿವಾರ್ಯವಾಗಿ ಗುಲಾಮಿತನವನ್ನು ಒಪ್ಪಿಕೊಳ್ಳಬೇಕಾಗುತ್ತದೆ, ಭ್ರಷ್ಟರಾಗಬೇಕಾಗುತ್ತದೆ, ಅನ್ಯಾಯವೇನಾದರು ನಡೆದರೆ ಅದನ್ನು ಸಹಿಸಬೇಕಾಗುತ್ತದೆ.

ಸ್ವಲ್ಪ ಪ್ರತಿರೋಧ ತೋರಿದರೂ ಉದ್ಯೋಗಕ್ಕೆ ಕುತ್ತಾಗಿ ಕಂತು ಕಟ್ಟುವುದು ಕಷ್ಟವಾಗಿ ಬದುಕು ಬೀದಿಗೆ ಬರುತ್ತದೆ ಎಂಬ ಅನಿವಾರ್ಯ ಭಯ ಸೃಷ್ಟಿಯಾಗುತ್ತದೆ. ಹೆಂಡತಿ ಮಕ್ಕಳ ಭವಿಷ್ಯ ನೆನಪಾಗಿ ಜೀತದಾಳುವಿನ ಮನೋಭಾವಕ್ಕೆ ಶರಣಾಗಬೇಕಾಗುತ್ತದೆ.

ಇದನ್ನೇ ಅತ್ಯಂತ ಸೂಕ್ಷ್ಮವಾಗಿ ಮತ್ತು ಸ್ಪಷ್ಟವಾಗಿ ಆಸ್ಟ್ರೇಲಿಯಾದ ಉದ್ಯಮಿ ಮನೆ ನಿಮ್ಮನ್ನು ಖರೀದಿಸಿರುತ್ತದೆ ಎಂದು ಹೇಳಿರುವುದು.

ಕೆಲವರು ಇನ್ನೊಂದು ವಿಚಾರ ಮಂಡಿಸುತ್ತಾರೆ. ಹಣಕಾಸು ಸಂಸ್ಥೆಗಳು ನಿಮ್ಮನ್ನು ಒತ್ತಾಯಿಸುವುದಿಲ್ಲ.‌ ಕೇವಲ ಪ್ರಚಾರ ನೀಡುತ್ತಾರೆ. ಆಯ್ಕೆ ನಿಮ್ಮದು. ನಿಮ್ಮ ವಿವೇಚನೆ ಬಳಸಬಹುದಲ್ಲವೇ ಎಂದು…

ಆದರೆ ಭಾರತದ ಸಾಮಾಜಿಕ ಮತ್ತು ಕೌಟುಂಬಿಕ ವ್ಯವಸ್ಥೆ ಹಾಗು ಮಾನಸಿಕ ಪರಿಸ್ಥಿತಿ ಅಷ್ಟು ಪ್ರಬುದ್ದವಾಗಿಲ್ಲ. ಬಹುಬೇಗ ಆಸೆ ಆಮಿಷ ಭಾವನೆ ಮತ್ತು ಒತ್ತಡಗಳಿಗೆ ಒಳಗಾಗುತ್ತದೆ. ಅದನ್ನು ಅರಿತ ಕಾರ್ಪೊರೇಟ್ ವರ್ಗ ಪರೋಕ್ಷವಾಗಿ ಮತ್ತು ಸಹಜವಾಗಿ ಅನಿವಾರ್ಯತೆ ಸೃಷ್ಟಿಯಾಗುವಂತೆ ಮಾಡಿ ಅಭಿವೃದ್ಧಿ ಎಂದರೆ ಇದೇ, ನಿಜವಾದ ಯಶಸ್ಸು ಇದರಲ್ಲಿಯೇ ಅಡಗಿದೆ ಎಂದು ಭ್ರಮೆ ಸೃಷ್ಟಿಸುವ ಕಲೆಗಾರಿಕೆ ಅವರಿಗೆ ಕರಗತವಾಗಿದೆ.

ಒಮ್ಮೆ ಕಂತುಗಳು ಬಂಧನದಲ್ಲಿ ಸಿಲುಕಿದ ವ್ಯಕ್ತಿ ಇತರ ಯಾವುದೇ ಸ್ವತಂತ್ರ, ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗುವುದು ಕಷ್ಟವಾಗುತ್ತದೆ.‌ ಸದಾ ಒತ್ತಡ ಆತನನ್ನು ಮಾನಸಿಕ ಮತ್ತು ದೈಹಿಕವಾಗಿ ಕುಸಿಯುವಂತೆ ಮಾಡುತ್ತದೆ. ಅಪರೂಪದ ಕೆಲವು ಪ್ರಕರಣ ಹೊರತುಪಡಿಸಿ.

20/25 ವರ್ಷಗಳ ನಂತರ ಮನೆ ಸ್ವಂತದ್ದಾಗುತ್ತದೆ. ಆದರೆ ಜೀವನ ಬಾಡಿಗೆಯಲ್ಲಿಯೇ ಇರುತ್ತದೆ. ಜೀವನದ ಗುಣಮಟ್ಟ ಕುಸಿದಿರುತ್ತದೆ.
ಮಾನಸಿಕ ಒತ್ತಡದಿಂದಾಗಿ ಬಹುತೇಕರು ಇದೇ ಕಾರಣದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಇದು ಅತ್ಯಂತ ಆಘಾತಕಾರಿ ವಿಷಯ.

ಹಲವು ಶತಮಾನಗಳ ಹಿಂದೆಯೇ ಹೇಳಿದ ಮಾತು,
” ಸಾಲವನು ಕೊಂಬಾಗ
ಹಾಲೋಗರುಂಡಂತೆ,
ಸಾಲಿಗರು ಕೊಂಡು ಎಳೆವಾಗ
ಕಿಬ್ಬದಿಯ ಕೀಲು ಮುರಿದಂತೆ
ಸರ್ವಜ್ಞ…..”…….

ಇದು ಕೆಲವರ ಪಾಲಿಗೆ ಆಪದ್ಬಾಂಧವನಂತೆ ಅನುಕೂಲಕರ ವಾತಾವರಣ ನಿರ್ಮಿಸುವುದು ನಿಜ. ಕೆಲವರು ಇಎಂಐ ಗಳ ಲಾಭ ಪಡೆದು ಸ್ವಂತ ಮನೆ, ಕಾರು ಇತ್ಯಾದಿ ತಮ್ಮ ಅವಶ್ಯಕತೆಗಳನ್ನು ಪೂರೈಸಿಕೊಂಡಿದ್ದಾರೆ. ಆದರೆ ಇದು ಕೆಲವರಿಗೆ ಮಾತ್ರ ಉಪಯೋಗವಾಗಿ ಸಾಕಷ್ಟು ಜನರಿಗೆ ತೊಂದರೆಯಾಗಿರುವುದು ನಿಜ. ಮಧ್ಯಮ ವರ್ಗದವರಾದ ನಾವು ನಮ್ಮ ಒಟ್ಟಾರೆ ಪರಿಸ್ಥಿತಿಯನ್ನು, ಆರ್ಥಿಕ ಹರಿವನ್ನು ಅರ್ಥ ಮಾಡಿಕೊಂಡು emi ಗಳನ್ನು ಉಪಯೋಗಿಸಿಕೊಂಡರೆ ಇದರ ಲಾಭ ಸಿಗುತ್ತದೆ. ಸ್ವಲ್ಪ ಯಾಮಾರಿ, ಯಾರದೋ ಮಾತು ಕೇಳಿ ಅಥವಾ ಇತರರನ್ನು ನೋಡಿ ಅತಿಯಾದ ಆಸೆಗೆ ಬಿದ್ದರೆ ಬದುಕು ನರಕವಾಗುವುದು ನಿಶ್ಚಿತ. ಆದ್ದರಿಂದ ನಮ್ಮ ಜೀವನ ಶೈಲಿಯನ್ನು ಸಂಪೂರ್ಣ ಅವಲೋಕನಕ್ಕೆ ಒಳಪಡಿಸಿ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು……

ಬ್ಯಾಂಕಿಂಗ್ ಕ್ಷೇತ್ರ ಅತ್ಯಂತ ಲಾಭದಾಯಕ ಉದ್ಯಮವಾಗಿ ಬೆಳೆಯುತ್ತಿರುವುದಕ್ಕೆ ನಾವು ಇಎಂಐ ಗಳ ಬಲೆಯೊಳಗೆ ಸಿಲುಕಿರುವುದು ಕಾರಣ ಎಂಬುದನ್ನು ದಯವಿಟ್ಟು ಯುವ ಸಮೂಹಕ್ಕೆ ಅರ್ಥ ಮಾಡಿಸಿ ಎಂದು ಮನವಿ ಮಾಡಿಕೊಳ್ಳುತ್ತಾ‌…..‌‌

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ ಎಚ್. ಕೆ

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago