Categories: ಮೈಸೂರು

ಇಡಿ, ಐ.ಟಿ, ಸಿ.ಬಿ.ಐ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? – ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಇಡಿ, ಐ.ಟಿ, ಸಿ.ಬಿ.ಐ ಹಾಗೂ ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಂಡು ಆಟ ಆಡ್ತೀರಾ? ಅರವಿಂದ್ ಕೇಜ್ರಿವಾಲ್ ಆಯ್ತು. ಈಗ ನಾನು ಮತ್ತು ನನ್ನ ಪತ್ನಿಯನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ನಿನ್ನೆ ಮೊನ್ನೆ ಮಂತ್ರಿಯಾದವನಲ್ಲ. 40 ವರ್ಷದಿಂದ ಮಂತ್ರಿಯಾಗಿದ್ದೀನಿ. ಸುಳ್ಳು ಕೇಸಲ್ಲಿ ನನ್ನನ್ನು, ನನ್ನ ಧರ್ಮಪತ್ನಿಯನ್ನು ಎಳೀತೀರಾ? ರಾಜ್ಯದ ಜನರೇನು ಮೂರ್ಖರಾ. ರಾಜ್ಯದ ಜನ‌ರ ಆಶೀರ್ವಾದ ನನ್ನ  ಮೇಲೆ ಇರುವವರೆಗೂ ನಾನು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಷಡ್ಯಂತ್ರಗಳಿಗೆ ಜಗ್ಗಲ್ಲ, ಬಗ್ಗಲ್ಲ. ನಾಡಿನ ಪ್ರಜ್ಞಾವಂತರು ಕೂಡ ಸುಖಾ ಸುಮ್ಮನೆ ಜನಾದೇಶದಿಂದ ಆಯ್ಕೆಯಾದ ಮುಖ್ಯಮಂತ್ರಿಯ ತಂಟೆಗೆ ಬಂದರೆ ಸುಮ್ಮನಿರಲ್ಲ ಎನ್ನುವ ಎಚ್ಚರಿಕೆ ಕೊಡಬೇಕಿದೆ ಎಂದರು.

ಬಿಜೆಪಿ ಇವತ್ತಿನವರೆಗೂ ರಾಜ್ಯದಲ್ಲಿ ಸ್ವಂತ ಶಕ್ತಿಯಿಂದ ಒಂದು ಬಾರಿಯೂ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಈ ಬಾರಿ ಕಾಂಗ್ರೆಸ್ಸಿನ 50 ಮಂದಿ ಶಾಸಕರಿಗೆ ತಲಾ 50 ಕೋಟಿ ಆಫರ್ ನೀಡಿ ಖರೀದಿಸಲು ಯತ್ನಿಸಿದ್ದಾರೆ. ಎಲ್ಲಿಂದ ಬರತ್ತೆ ಈ ಹಣ? ಯಡಿಯೂರಪ್ಪ, ಬೊಮ್ಮಾಯಿ, ಆರ್.ಅಶೋಕ್ ಪ್ರಿಂಟ್ ಹಾಕಿದ್ದಾ ಈ ಹಣ? ರಾಜ್ಯವನ್ನು ಲೂಟಿ ಹೊಡೆದ ಹಣ ತಾನೇ. ಆದರೆ ನಮ್ಮ ಶಾಸಕರು ಇವರ ಆಮಿಷಕ್ಕೆ ಒಳಗಾಗಲಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ನಮ್ಮ ಐದೂ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಭಯಂಕರ ಸುಳ್ಳುಗಳನ್ನು ಹೊಸೆಯುತ್ತಿದ್ದಾರೆ. ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಹಸಿ ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿ ಕೊಟ್ಟರೆ, ಅಭಿವೃದ್ಧಿ ಕಾರ್ಯಗಳಿಗೆ ₹1.20 ಲಕ್ಷ ಕೋಟಿ ನೀಡಿದೆ.‌ ಇಂದು ನರಸೀಪುರದಲ್ಲಿ ₹470 ಕೋಟಿ ಮೌಲ್ಯದ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ದೊರೆತಿದೆ. ಬಿಜೆಪಿಯ ಸುಳ್ಳುಗಳಿಗೆ ಇವತ್ತಿನ ಅಭಿವೃದ್ಧಿ ಕಾರ್ಯಕ್ರಮ ಕನ್ನಡಿ ಹಿಡಿದಿದೆ ಎಂದು ತಿಳಿಸಿದರು.

ಈ ಬಿಜೆಪಿಯವರಿಗೆ, ಗ್ಯಾರಂಟಿ ವಿರೋಧಿಗಳಿಗೆ ನಾನು ನೇರವಾಗಿ ಒಂದು ಪ್ರಶ್ನೆ ಕೇಳುತ್ತಿದ್ದೀನಿ. ರಾಜ್ಯದಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳ ಫಲಾನುಭವಿಗಳಲ್ಲವಾ? ಬಿಜೆಪಿಯವರು ಉಚಿತವಾಗಿ ಬಸ್ಸಲ್ಲಿ ಓಡಾಡುತ್ತಿಲ್ಲವಾ? ಬಿಜೆಪಿಯವರು ಉಚಿತ ವಿದ್ಯುತ್ ಪಡೆಯುತ್ತಿಲ್ಲವಾ? ಬಿಜೆಪಿಯವರು ಗೃಹಲಕ್ಷ್ಮಿ ಹಣ ಪಡೆಯುತ್ತಿಲ್ಲವಾ?  ಇಲ್ಲಾ, ನಾವು ತೆಗೆದುಕೊಳ್ಳುತ್ತಿಲ್ಲ ಇಲ್ಲ ಎಂದು ಎದೆ ಮುಟ್ಟಿಕೊಂಡು ಹೇಳಲಿ ನೋಡೋಣ. ರಾಜ್ಯ ಸರ್ಕಾರದ ಗ್ಯಾರಂಟಿ ಫಲಾನುಭವಿಗಳನ್ನು ಅವಮಾನಿಸಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸದಿದ್ದರೆ ಕೋಟಿ ಕೋಟಿ ಫಲಾನುಭವಿಗಳು ನಿಮಗೆ ಸರಿಯಾದ ಪಾಠ ಕಲಿಸ್ತಾರೆ ಎಂದರು.

ನಮ್ಮ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಆರೋಪಗಳು ಚುನಾವಣಾ ಭಾಷಣಕ್ಕಷ್ಟೇ ಸೀಮಿತ. ಇವುಗಳಲ್ಲಿ ಯಾವ ಸತ್ಯವೂ ಇಲ್ಲ ಎಂದರು.

ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕೊರೊನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ಅನ್ನು   2,140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾಡಿರುವುದು ರಾಜ್ಯ ಬಿಜೆಪಿ ಸರ್ಕಾರ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ  ಮಾಡುವುದೂ ಇಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ ಕರ್ನಾಟಕ ಸರ್ಕಾರ 700 ಕೋಟಿ ವಸೂಲಿ ಮಾಡಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಸಾಬೀತು ಮಾಡಲು ಆಗದಿದ್ದರೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದು ತಿಳಿಸಿದರು.

ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿದ್ದಾರೆ. ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ ಹತಾಶರಾಗಿ ನನ್ನ ಮತ್ತು ನಮ್ಮ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಾನೂನು ಪ್ರಕಾರ ಮಾಡುವ ತನಿಖೆ ನಡೆಸಲಿ, ಅದಕ್ಕೆ ಯಾವುದೇ ರೀತಿಯ ಪ್ರತಿರೋಧವನ್ನು ನಾವು ಒಡ್ಡುವುದಿಲ್ಲ. ಇಡಿ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂಬುದಷ್ಟೇ ಹೇಳಬಲ್ಲೇ ಎಂದರು.

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಂಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ. ಈಗಾಗಲೇ ಸುಳ್ಳು ಸುದ್ದಿ ಹರಡಿ ಸಮಾಜದ ಸೌಹಾರ್ದತೆ ಲೆಡಿಸಲು ಬಿಜೆಪಿ ಆರಂಭಿಸಿದೆ. ಅವರಿಗೆ ಕೋಮುಗಲಭೆ ಸೃಷ್ಟಿಸುವುದೇ ಕಾಯಕವಾಗಿದೆ. ಬಿಜೆಪಿಯವರೆಂದೂ  ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

15 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

21 hours ago