ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದ್ದು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಗಂಗಾವತಿ ತಾಲ್ಲೂಕಿನ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ ರಾತ್ರಿ ತುಂಗಭದ್ರಾ ಎಡದಂಡೆ ಕಾಲುವೆ ಪಕ್ಕ ಗಿಟಾರ್ ಬಾರಿಸುತ್ತ ಕುಳಿತಿದ್ದ ಐವರು ಪ್ರವಾಸಿಗರ ಪೈಕಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ರೇಲ್ನ 27 ವರ್ಷದ ಪ್ರವಾಸಿ ಮಹಿಳೆ ಮತ್ತು 29 ವರ್ಷದ ಸ್ಥಳೀಯ ಹೋಮ್ ಸ್ಟೇ ಒಡತಿ ಮೇಲೆ ಅತ್ಯಾಚಾರ ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇನ್ನುಳಿದ ಮೂವರು ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅದರಲ್ಲಿ ಒಡಿಶಾದ ಪ್ರವಾಸಿಗನನ್ನು ಕಾಲುವೆಗೆ ಎಸೆಯಲಾಗಿದ್ದು, ಆತನ ಪತ್ತೆಗಾಗಿ ಶೋಧ ಮುಂದುವರಿದಿದೆ. ನಾಲ್ಕು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಂಡಿದ್ದಾರೆ.