ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಉಚಿತ ವಿದ್ಯಾರ್ಥಿ ಬಸ್ ಪಾಸ್ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗಿದೆ.
ಜೂನ್ 12ರಿಂದಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.
ಸಾರಿಗೆ ಇಲಾಖೆ ಈ ಕುರಿತು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಉಚಿತ ಬಸ್ ಪಾಸ್ ಪಡೆಯಬಹುದಾಗಿದೆ.
ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆಯಡಿ ಈಗಾಗಲೇ ವಿದ್ಯಾರ್ಥಿನಿಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ದೊರೆಯುತ್ತಿರುವುದರಿಂದ ಅವರಿಗೆ ಪ್ರತ್ಯೇಕ ವಿದ್ಯಾರ್ಥಿ ಬಸ್ ಪಾಸ್ ಅಗತ್ಯವಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿರುವ ಹೊಸ ಯೋಜನೆ ಕೇವಲ ಗಂಡು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಹಣ ಪಾವತಿಸಿ ಬಸ್ ಪಾಸ್ ಪಡೆದಿರುವ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ಪಾವತಿಸಿದ ಮೊತ್ತವನ್ನು ಮರುಪಾವತಿ ಮಾಡಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಯೋಜನೆ ಜಾರಿಗೆ ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು ₹86.86 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ಅರ್ಜಿ ಸಲ್ಲಿಕೆ ಹೇಗೆ?
ವಿದ್ಯಾರ್ಥಿಗಳು ತಮ್ಮ ಮೊಬೈಲ್, ಸೈಬರ್ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ನಾಡಕಚೇರಿಗಳ ಮೂಲಕ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲೆಗಳು:
1.ಆಧಾರ್ ಕಾರ್ಡ್
2.ಶಾಲೆ ಅಥವಾ ಕಾಲೇಜಿನ ಪ್ರವೇಶಾತಿ ರಶೀದಿ
3.ಇತ್ತೀಚಿನ ಎರಡು ಪಾಸ್ಪೋರ್ಟ್ ಗಾತ್ರದ ಭಾವಚಿತ್ರಗಳು
4.ವಿದ್ಯಾಸಂಸ್ಥೆಯ ಮುಖ್ಯಸ್ಥರ ಸಹಿ ಮತ್ತು ಅಧಿಕೃತ ಸೀಲ್ ಹೊಂದಿರುವ ಅರ್ಜಿ ಪ್ರತಿ
ಪಾಸ್ ವಿತರಣೆ ಪ್ರಕ್ರಿಯೆ
ಆನ್ಲೈನ್ ಅರ್ಜಿಗಳನ್ನು ಬಿಎಂಟಿಸಿ, ಕೆಎಸ್ಆರ್ಟಿಸಿ, ವಾಯುವ್ಯ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಅರ್ಜಿ ಅನುಮೋದನೆಯಾದ ಬಳಿಕ ವಿದ್ಯಾರ್ಥಿಯ ಮೊಬೈಲ್ಗೆ ಎಸ್ಎಂಎಸ್ ಸಂದೇಶ ಕಳುಹಿಸಲಾಗುತ್ತದೆ. ನಂತರ ನಿಗದಿತ ಕೇಂದ್ರಗಳಲ್ಲಿ ಭೌತಿಕ ಬಸ್ ಪಾಸ್ ಪಡೆಯಬಹುದಾಗಿದೆ.
ಪಾಸ್ ವಿತರಣಾ ಕೇಂದ್ರಗಳು
ಬೆಂಗಳೂರಿನ ಮೆಜೆಸ್ಟಿಕ್, ಕೆಂಗೇರಿ, ಶಾಂತಿನಗರ, ಎಲೆಕ್ಟ್ರಾನಿಕ್ ಸಿಟಿ, ಹೊಸಕೋಟೆ ಹಾಗೂ ಆನೇಕಲ್ ಟಿಟಿಎಂಸಿ ಕೇಂದ್ರಗಳ ಜೊತೆಗೆ ರಾಜ್ಯದ ಪ್ರಮುಖ ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ಉಚಿತ ಬಸ್ ಪಾಸ್ ವಿತರಣೆ ನಡೆಯಲಿದೆ.
ಮುಖ್ಯ ಷರತ್ತುಗಳು
1. ವಿದ್ಯಾರ್ಥಿ ಪಾಸ್ಗೆ ಸಂಬಂಧಿಸಿದ ಹಾಲಿ ಅರ್ಹತಾ ಮಾನದಂಡಗಳು, ದೂರದ ಮಿತಿ ಹಾಗೂ ಪಾಸ್ ಅವಧಿ ನಿಯಮಗಳು ಮುಂದುವರಿಯಲಿವೆ.
2. ಸೇವಾಸಿಂಧು ಪೋರ್ಟಲ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
3. ಈಗಾಗಲೇ ವಿತರಿಸಿರುವ ಪಾಸ್ಗಳು ಯಥಾಸ್ಥಿತಿಯಲ್ಲಿ ಮಾನ್ಯವಾಗಿರುತ್ತವೆ.
4. ಕರ್ನಾಟಕದಲ್ಲಿ ವಾಸವಿದ್ದು ನೆರೆರಾಜ್ಯಗಳಲ್ಲಿ ಓದುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ ವಾಸವಿದ್ದು ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಯೋಜನೆ ಅನ್ವಯವಾಗಲಿದೆ.
5. ಹಣ ಪಾವತಿಸಿ ಪಡೆದಿರುವ ಪಾಸ್ಗಳ ಶುಲ್ಕವನ್ನು 15 ದಿನಗಳೊಳಗೆ ಮರುಪಾವತಿಸಲಾಗುವುದು.
6. ಈ ಯೋಜನೆಯಿಂದ ಸಾವಿರಾರು ವಿದ್ಯಾರ್ಥಿಗಳ ಪ್ರಯಾಣ ವೆಚ್ಚ ಕಡಿಮೆಯಾಗಲಿದ್ದು, ಶಿಕ್ಷಣಕ್ಕೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…
Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…
ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…