ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ: ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆ-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

‘ಬಯಲುಸೀಮೆ’ ಎಂಬ ಹೆಸರು ಕೇಳಿದಾಕ್ಷಣ ನಮ್ಮ ಮನಸ್ಸಿಗೆ ಬರಡು ಭೂಮಿಯ ಚಿತ್ರಣ ಬರುತ್ತದೆ. ಕೆಲವು ದಶಕಗಳಿಂದಲೇ ಬಯಲುಸೀಮೆಯಲ್ಲಿ ನೀರಿನ ಕೊರತೆ ಕಂಡುಬಂದಿತ್ತು. ಯಾವುದೇ ಸರ್ಕಾರಗಳು ಬಂದಾಗಲೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಪರಿಹಾರ ಮಾತ್ರ ಶೂನ್ಯ. ಬಯಲುಸೀಮೆಯ ಬಹುತೇಕ ಭಾಗ ಹಿಂದುಳಿಯುವಲ್ಲಿ ನೀರಾವರಿಯ ಕೊರತೆ ದೊಡ್ಡ ಪರಿಣಾಮ ಬೀರಿದೆ. ತರಕಾರಿ, ಹೂವು, ಹಣ್ಣು ಹಾಗೂ ರೇಷ್ಮೆ ಕೃಷಿ ಪ್ರಧಾನವಾಗಿರುವ ಬಯಲುಸೀಮೆಗೆ ಜೀವಜಲವನ್ನು ಒದಗಿಸುವುದು ಅನೇಕ ದಶಕಗಳ ಕನಸು. ಈ ಕನಸನ್ನು ನನಸಾಗಿಸಲು ಹಿಂದಿನ ಸರ್ಕಾರ ಪ್ರಯತ್ನ ಪಟ್ಟಿದ್ದರೂ, ಬದ್ಧತೆ ಹಾಗೂ ಇಚ್ಛಾಶಕ್ತಿಯ ಕೊರತೆಯಿಂದಾಗಿ ಅದು ನೆರವೇರಲಿಲ್ಲ. ಕಾಂಗ್ರೆಸ್‌ ಸರ್ಕಾರದ ಈ ಆಡಳಿತವಾಧಿಯಲ್ಲಿ, ಬಯಲುಸೀಮೆಗೆ ನೀರಿನ ಸಿಂಚನವಾಗಿದೆ. ಇದೇ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಪೂರೈಕೆ ಕಾರ್ಯ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದರೆ.

ಸ್ವರ್ಣ ಗೌರಿ ಮನೆಗೆ ಬರುತ್ತಾಳೆ ಎಂದರೆ ಎಲ್ಲ ಬಗೆಯ ಸಮೃದ್ಧಿ ಮನೆಯಲ್ಲಿ ನೆಲೆಯಾಗಲಿದೆ ಎಂದೇ ಅರ್ಥ. ಈ ಬಾರಿಯ ಗೌರಿ ಹಬ್ಬ ಅಂತಹ ಜಲ ಸಮೃದ್ಧಿಯನ್ನು ತರುತ್ತಿದೆ. ಈ ಭಗೀರಥ ಕಾರ್ಯವನ್ನು ಮಾಡುವ ಅವಕಾಶ ಕಾಂಗ್ರೆಸ್‌ ಸರ್ಕಾರಕ್ಕೆ, ಅದು ಕೂಡ ನನಗೆ ದೊರಕಿರುವುದು ಪುಣ್ಯವೆಂದೇ ಭಾವಿಸಿದ್ದೇನೆ. ನನ್ನ ಕ್ಷೇತ್ರ ಕನಕಪುರವಾದರೂ ಸುತ್ತಮುತ್ತಲಿನ ಜಿಲ್ಲೆಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೆ. ಒಂದು ಕಡೆ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜಧಾನಿ ಬೆಂಗಳೂರು. ಇದರ ಸುತ್ತಮುತ್ತ ನೀರಾವರಿಗೂ ಕಷ್ಟ ಪಡುವ ಜಿಲ್ಲೆಗಳು. ಈ ಸಮಸ್ಯೆಯನ್ನು ನಿವಾರಿಸಲು ನಾನು ನೀರಾವರಿ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ವಹಿಸಿದೆ. ನೀರಾವರಿ ಎಂದರೆ ಕೇವಲ ಒಂದು ಇಲಾಖೆ, ಅನುದಾನ ಅಥವಾ ಯೋಜನೆಗಳಲ್ಲ. ಇದು ಜನರ ಜೀವನಾಡಿ. ಒಂದೇ ಒಂದು ನೀರಾವರಿ ಯೋಜನೆ ಇಡೀ ಪ್ರದೇಶದ ಜೀವನ ಗುಣಮಟ್ಟವನ್ನೇ ಬದಲಿಸಿಬಿಡುತ್ತದೆ. ಕೃಷ್ಣರಾಜಸಾಗರ ಜಲಾಶಯ ಹಳೆ ಮೈಸೂರು ಭಾಗದ ಸಮಗ್ರ ಪ್ರಗತಿಗೆ ಹೇಗೆ ಕಾರಣವಾಗಿದೆ ಎಂಬುದನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಇಂತಹ ಯೋಜನೆಯೊಂದನ್ನು ನಮ್ಮ ಬಯಲುಸೀಮೆಗೆ ನೀಡಬೇಕು ಎನ್ನುವುದು ನನ್ನ ಬಹುವರ್ಷಗಳ ಕನಸಾಗಿತ್ತು. ಅದನ್ನು ಎತ್ತಿನಹೊಳೆಯ ಮೂಲಕ ನೆರವೇರಿಸಿದ್ದೇನೆ ಎನ್ನುವುದು ನನ್ನ ಬದುಕಿನ ಸಾರ್ಥಕತೆಯ ಕ್ಷಣ ಎಂದರು.

ಇದೇನೂ ದಿಢೀರನೆ ಬಂದ ಆಲೋಚನೆಯಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದೇ ಬಲವಾಗಿ ನಂಬಿದ್ದ ನಾನು, ಆ ಸಮಯದಲ್ಲಿ ಎತ್ತಿನಹೊಳೆಯ ಯೋಜನೆಗೆ ಕಾಯಕಲ್ಪ ನೀಡೀಯೇ ತೀರುತ್ತೇನೆ ಎಂದು ಸಂಕಲ್ಪ ಮಾಡಿದ್ದೆ. ಅಂದುಕೊಂಡ ಹಾಗೆಯೇ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಎತ್ತಿನಹೊಳೆ ಯೋಜನೆಗೆ ಸಂಪೂರ್ಣ ಒತ್ತು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೃಢ ನಾಯಕತ್ವದಲ್ಲಿ, ಕಾಮಗಾರಿಗಳಿಗೆ ವೇಗ ನೀಡಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಪೂರೈಕೆಗೆ ಸೆಪ್ಟೆಂಬರ್‌ 6 ರ ಶುಭ ಶುಕ್ರವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಹೆಬ್ಬನಹಳ್ಳಿ ವಿತರಣಾ ತೊಟ್ಟಿಯ 4 ರಿಂದ 32 ಕಿ. ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ರೂಪಿಸಿದ್ದು, ಅಲ್ಲಿಂದ ನಾಲೆಯ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಪೂರೈಸಲಾಗುತ್ತದೆ. ನವೆಂಬರ್ 1 ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುತ್ತದೆ. ಇದು ಕೇವಲ ಪೂರ್ಣಗೊಂಡ ಕಾಮಗಾರಿಗೆ ಚಾಲನೆ ನೀಡುವ ದಿನವಲ್ಲ. ಇದು ಬಯಲುಸೀಮೆಯ ʼಬರಡುʼ ಎಂಬ ಟೀಕೆಯನ್ನು ತೊಡೆದುಹಾಕುವ ಗಳಿಗೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಗ್ಯಾರಂಟಿಗಳ ಭರವಸೆ ನೀಡಿತ್ತು. ಕೇವಲ ಗ್ಯಾರಂಟಿಗಳ ಆಧಾರದಲ್ಲೇ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂಬುದು ಊಹಾಪೋಹದ ಮಾತು. ಗ್ಯಾರಂಟಿಗಳು ಪ್ರಮುಖವಾಗಿದ್ದರೂ, ಅವುಗಳ ಜೊತೆಗೆ ನೀರಾವರಿ, ಕೃಷಿ ಸುಧಾರಣೆ, ಕೈಗಾರಿಕಾಭಿವೃದ್ಧಿ, ನಿರುದ್ಯೋಗ ನಿವಾರಣೆ ಮೊದಲಾದ ಭರವಸೆಗಳು ಜನರ ಗಮನ ಸೆಳೆದಿತ್ತು. ಈ ಪೈಕಿ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ಬದ್ಧತೆಯನ್ನು ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಅದರಂತೆ ಒಂದೂವರೆ ವರ್ಷದೊಳಗೆ ಯೋಜನೆಯ ಮೊದಲ ಹಂತದ ನೀರು ಸರಬರಾಜು ಕಾರ್ಯ ಸಾಕಾರಗೊಂಡಿದೆ.  ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮಾತ್ರವಲ್ಲದೆ, ರಾಮನಗರದ ಕೆಲವು ಭಾಗ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ಜೀವಜಲ ದೊರೆಯಲಿದೆ ಎಂದರು.

ನೀರಾವರಿ ಪ್ರಗತಿ

2027 ಕ್ಕೆ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸುವುದು ಕಾಂಗ್ರೆಸ್‌ ಸರ್ಕಾರದ ಆದ್ಯತೆಯ ಮಹತ್ವಕಾಂಕ್ಷೆ. ಪ್ರಣಾಳಿಕೆಯಲ್ಲಿದ್ದ ʼಕಾಂಗ್ರೆಸ್‌ ಬರಲಿದೆ, ಪ್ರಗತಿ ತರಲಿದೆʼ ಎಂಬ ಘೋಷಣೆಯಂತೆಯೇ ಈಗ ಎತ್ತಿನಹೊಳೆಯ ನೀರಿನ ಮೂಲಕ ನೀರಾವರಿಗೆ ಪ್ರಗತಿ ತರಲಾಗುತ್ತಿದೆ. ಯೋಜನೆಯಡಿ ಒಟ್ಟು 24.01 ಟಿಎಂಸಿ ನೀರನ್ನು ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುತ್ತದೆ. ಇದರಿಂದ ಬರ ಪೀಡಿತವಾದ 29 ತಾಲೂಕುಗಳ 6,657 ಗ್ರಾಮಗಳ 75.59 ಲಕ್ಷ ಜನರ ದಾಹ ತೀರಲಿದೆ. ಜೊತೆಗೆ 5 ಜಿಲ್ಲೆಗಳ 527 ಕೆರೆಗಳ ಅಂತರ್ಜಲ ಮರುಪೂರಣ ಕಾರ್ಯವೂ ನಡೆಯಲಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಖರ್ಚು ಮಾಡುತ್ತಿರುವುದು ಬರೋಬ್ಬರಿ 23,251 ಕೋಟಿ ರೂ! ಎಂದರು.

2011-12 ರಲ್ಲಿ ಅಂದಿನ ಬಿಜೆಪಿ ಸರ್ಕಾರ ರಾಜಕೀಯ ಲಾಭದ ದೃಷ್ಟಿಯಿಂದ ದೂರದೃಷ್ಟಿ ಇಲ್ಲದೆ ಯೋಜನೆ ರೂಪಿಸಿದ್ದರಿಂದ ಅದು ಬದ್ಧತೆಯಿಂದ ಮುಂದುವರಿಯಲಿಲ್ಲ. ಬಳಿಕ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ, ಯೋಜನೆಯ ಮೊತ್ತವನ್ನು ಹೆಚ್ಚಿಸಿ, 2014 ರ ಫೆಬ್ರವರಿಯಲ್ಲಿ ಅನುಮೋದನೆ ನೀಡಿತು. ನಂತರ ಚಿಕ್ಕಬಳ್ಳಾಪುರದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಅಂದು ಆರಂಭವಾದ ಯೋಜನೆ, ನಡುವೆ ಬಿಜೆಪಿ ಸರ್ಕಾರ ಇದ್ದ ಅವಧಿಯಲ್ಲೂ ಪೂರ್ಣಗೊಳ್ಳಲಿಲ್ಲ. ಮತ್ತೆ ಈ ಯೋಜನೆಗೆ ಚುರುಕು ನೀಡಲು ಕಾಂಗ್ರೆಸ್‌ ಪಕ್ಷವೇ ಅಧಿಕಾರಕ್ಕೆ ಬರಬೇಕಾಯಿತು. ಅದರಂತೆ ಈಗ ಕಾಮಗಾರಿಗೆ ವೇಗ ನೀಡಿ ನೀರೆತ್ತುವ ಕಾರ್ಯವನ್ನು ನನಸು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದು ಬಯಲುಸೀಮೆಯ ನೀರಾವರಿ ಕ್ರಾಂತಿಯಲ್ಲಿ ಆರಂಭದ ಹೆಜ್ಜೆ. ಈ ಹೆಜ್ಜೆಯನ್ನು ಇನ್ನಷ್ಟು ಮುಂದಕ್ಕೆ ಒಯ್ದು, ಎತ್ತಿನಹೊಳೆ ಯೋಜನೆಯನ್ನು ಈ ಸರ್ಕಾರದ ಅವಧಿಯಲ್ಲೇ ಪೂರ್ಣಗೊಳಿಸುವುದು ನಮ್ಮ ಮುಂದಿನ ಗುರಿ ಮತ್ತು ಸವಾಲು. ಅದಕ್ಕಾಗಿ ಜನಬಲವೊಂದಿದ್ದರೆ ಸಾಕು ಎಂದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

21 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago