ಎಲ್ಲಾ ಜಾತಿಗಳಿಗೂ ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ನಿರ್ಮೂಲನೆ ಸಾಧ್ಯ- ಸಿಎಂ ಸಿದ್ದರಾಮಯ್ಯ

ವಚನ ಎಂದರೆ ಮಾತು. ಶರಣರ ವಚನ ಜನರ ಭಾಷೆಯಲ್ಲಿವೆ. ಆದ್ದರಿಂದ ವಚನ ಸಾಹಿತ್ಯ, ಜನರ ಸಾಹಿತ್ಯವೇ ಆಗಿದೆ. ಹಿಂದೆ ಸಂಸ್ಕೃತ ಕಲಿತರೆ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇತ್ತು. ಇದರಿಂದಲೇ ಭಾರತೀಯ ಶೂದ್ರ ಸಮುದಾಯ ಅಕ್ಷರ ಸಂಸ್ಕೃತಿಯಿಂದ ವಂಚಿತರಾದರು. ಶಿಕ್ಷಣ ಇಲ್ಲದ ಕಾರಣಕ್ಕೆ ಅಸಮಾನತೆ ಬೆಳೆಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

“ನಮ್ಮ‌ ಸಂವಿಧಾನ ವೈರುದ್ಯತೆ ಇರುವ ಸಮಾಜದಲ್ಲಿ ಜಾರಿ ಆಗುತ್ತಿದೆ. ಪ್ರಜಾಪ್ರಭುತ್ವದ ಕಾರಣದಿಂದ ರಾಷ್ಟ್ರಪತಿಯಿಂದ ಪೌರ ಕಾರ್ಮಿಕರವರೆಗೂ ಎಲ್ಲರಿಗೂ ಒಂದೇ ಮತ ಎನ್ನುವ ರಾಜಕೀಯ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ಇದು ಸಿಗದೆ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇಲ್ಲ ಎನ್ನುವ ಅಂಬೇಡ್ಕರ್ ಅವರ ಮಾತು ಇಂದಿಗೂ ಮನನ‌ ಮಾಡಿಕೊಳ್ಳುವಂತಹುದ್ದು ಎಂದರು.

ಇವನಾರವ ಇವನಾರವ ಎಂದು ವಚನ ಹೇಳೋದು, ಈ ಕಡೆ ಬಂದು ಅವನು ಯಾವ ಜಾತಿ ಎಂದು ಕೇಳೋದು ನಡೆಯುತ್ತಿದೆ. ಹೀಗಾದರೆ ಬಸವಣ್ಣನವರ ಆಶಯದಂತೆ ಜಾತಿ ನಿರ್ಮೂಲನೆ ಆಗಲ್ಲ. ಜಾತಿಗೆ ಚಲನೆಯಿಲ್ಲ. ವರ್ಗಕ್ಕೆ ಚಲನೆ ಇದೆ. ಎಲ್ಲಾ ಜಾತಿಗಳಿಗೂ ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ನಿರ್ಮೂಲನೆ ಸಾಧ್ಯ ಎಂದು ತಿಳಿಸಿದರು.

ಇವನಾರವ ಇವನಾರವ ಎಂದು ವಚನ ಹೇಳುತ್ತಲೇ ಜಾತಿ ಮಾಡುವವರು ಇದ್ದಾರೆ. ಬಸವಣ್ಣನವರು ಮತ್ತು ಶರಣರು ಕರ್ಮಸಿದ್ಧಾಂತದ ವಿರುದ್ಧ ಹೋರಾಟ ನಡೆಸಿದರು. ಆದರೆ ಈಗ ಶಿಕ್ಷಣ ಪಡೆದವರೇ ಜನ್ಮ ಜನ್ಮಗಳಲ್ಲಿ ನಂಬಿಕೆ ಇಟ್ಟು ಕರ್ಮ ಸಿದ್ಧಾಂತ ಆಚರಿಸುತ್ತಿದ್ದಾರೆ. ಒಂದು ಕಡೆ ಬಸವ ಜಯಂತಿ ಆಚರಿಸೋದು ಮತ್ತೊಂದು ಕಡೆ ಕರ್ಮಸಿದ್ಧಾಂತ ಆಚರಿಸೋದು ಮಾಡಿದರೆ ಬಸವ ಜಯಂತಿಗೆ ಅರ್ಥ ಇಲ್ಲ ಎಂದರು.

ಬಸವಣ್ಣ ಅರ್ಥ ಆಗಬೇಕು ಅಂದರೆ ಮೊದಲು ಕರ್ಮಸಿದ್ಧಾಂತ ಮತ್ತು ಹಣೆಬರಹ ಎನ್ನುವ ಮೌಢ್ಯವನ್ನು ಬಿಡುವ ಶಪಥ ಮಾಡಬೇಕು.
ಆಚಾರವೇ ಸ್ವರ್ಗ-ಅನಾಚಾರವೇ ನರಕ ಎನ್ನುವ ಬಸವಣ್ಣನವರ ಮೌಲ್ಯ ಪಾಲಿಸುವ ಶಪಥ ಮಾಡಿ ನೋಡೋಣ. ಧರ್ಮ ಎಂದರೆ ಭಯಾನಕವಾಗಿ ರಾಶಿ ರಾಶಿ ಏನೇನೋ ಹೇಳ್ತಾರೆ. ಇದ್ಯಾವುದೂ ಧರ್ಮ ಅಲ್ಲ. ಬಸವಣ್ಣನವರು ಬಹಳ ಸರಳವಾಗಿ “ದಯೆಯೇ ಧರ್ಮದ ಮೂಲವಯ್ಯ” ಎಂದಿದ್ದಾರೆ. ಇಷ್ಟು ಸರಳ ಮತ್ತು ಸುಂದರವಾದ ಮೌಲ್ಯವೇ ಧರ್ಮ ಎಂದು ತಿಳಿಸಿದರು.

ಬಸವಣ್ಣನವರ ಆಶಯಗಳು, ಬಸವಣ್ಣನವರ ಮೌಲ್ಯಗಳು, ಅಂಬೇಡ್ಕರ್ ಅವರ ಸಂವಿಧಾನದ ಆಶಯ ಮತ್ತು ಮೌಲ್ಯಗಳು ಒಂದೇ ಆಗಿವೆ. ಇದನ್ನು ಅರ್ಥ ಮಾಡಿಕೊಂಡು, ಪಾಲಿಸದೇ ಹೋದರೆ ಕೇವಲ ಬಸವಣ್ಣನವರ ಬಗ್ಗೆ ಭಾಷಣ ಮಾಡುವುದರಿಂದ ಸಮಾಜಕ್ಕೆ ಎನೂ ಒಳ್ಳೆಯದು ಮಾಡಲು ಸಾಧ್ಯವಿಲ್ಲ ಎಂದರು.

ಗೋರುಚ ಅವರ ಸಮಿತಿ ವರದಿಯಂತೆ ಅನುಭಾವಿಗಳ ಅನುಭವ ಮಂಟಪ ಮಾಡುವ ಕೆಲಸ ಆಗಿದ್ದು ನಮ್ಮಿಂದ. ಇದನ್ನು ಈ ವರ್ಷವೇ ಪೂರ್ಣಗೊಳಿಸುತ್ತೇವೆ. ಬಸವಣ್ಣರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ನಾವೇ. ಅಕ್ಕಮಹಾದೇವಿ ವಿಶ್ವ ವಿದ್ಯಾಲಯ ನಾಮಕಾರಣ ಮಾಡಿದ್ದು ನಾವೇ. ಇದಕ್ಕೆ ಶರಣರ ಬದುಕು ಸ್ಪೂರ್ತಿಯಾಗಿದೆ ಎಂದು ಹೇಳಿದರು.

ಕನಕದಾಸರು, ಬಸವಣ್ಣ ಇಬ್ಬರೂ ಸಂಸ್ಕೃತದಲ್ಲಿ ಏನೂ ಹೇಳಲಿಲ್ಲ. ಜನರ ಭಾಷೆಯಲ್ಲಿ, ಜನರಿಗೆ ಅರ್ಥ ಆಗುವ ರೀತಿ ಅತ್ಯಂತ ಸರಳವಾಗಿ ಧರ್ಮ ಮತ್ತು ಮೌಲ್ಯವನ್ನು ಸಾರಿದರು. ಯಾವ ಭಾಷೆಯನ್ನಾದರೂ ಕಲಿಯಿರಿ. ಆದರೆ ಜನರಾಡುವ ಭಾಷೆಯಲ್ಲಿ ಮಾತನಾಡಿ, ಮೌಲ್ಯಗಳನ್ನು ವಿವರಿಸಿ ಎಂದರು. ಮಾತೃಭಾಷೆ, ತಾಯಿ ಭಾಷೆ, ನಮ್ಮ ನೆಲದ ಭಾಷೆಯಲ್ಲಿ ಬಸವಾದಿ ಶರಣರು ತಮ್ಮ ಅನುಭವಗಳನ್ನು ಜನರಿಗೆ ತಿಳಿಸಿದರು ಎಂದರು.

ಬಸವಾದಿ ಶರಣರ ಆಶಯ ಮತ್ತು ಮೌಲ್ಯಗಳನ್ನು ನಾನು ಜಾರಿಗೆ ತರಲು ಮುಂದಾದರೆ ಅದಕ್ಕೂ ಅಡ್ಡಿಪಡಿಸುವವರು, ವಿರೋಧಿಸುವವರು ಇದ್ದಾರೆ. ಆದ್ದರಿಂದ ಸಮ ಸಮಾಜ ಬೇಕೋ? ಜಾತಿ ಸಮಾಜ ಬೇಕೋ? ಎನ್ನುವ ನಿರ್ಧಾರವನ್ನು ಜನರಿಗೇ ಬಿಡುತ್ತಿದ್ದೇನೆ ಎಂದರು.

ದೇವರಿಗೂ ಮತ್ತು ಜನರಿಗೂ ನಡುವೆ ಮಧ್ಯವರ್ತಿಗಳು ಇರಬಾರದು ಎನ್ನುವುದೇ ಬಸವಣ್ಣನವರ ಮಾತಾಗಿತ್ತು. ಅದಕ್ಕೇ ದೇಹವೇ ದೇಗುಲ ಎಂದು ವಚನ ರಚಿಸಿದರು.
ಬಸವಾದಿ ಶರಣರ ಆಶಯದಂತೆ ಇಷ್ಟಲಿಂಗ ಪೂಜೆ ಮಾಡುವಾಗಲಾದರೂ ಮಧ್ಯವರ್ತಿಗಳು ಇರಬಾರದು ಎಂದು ಹೇಳಿದರು.

ಮನುವಾದಿಗಳು ಬಸವತತ್ವದ ವಿರೋಧಿಗಳು. ಮನುಷ್ಯ ತತ್ವಕ್ಕೆ ವಿರುದ್ಧ ಇರುವವರು ಮನುವಾದಿಗಳು. ಮನುಷ್ಯತ್ವ ಪಾಲಿಸುವವರು ಬಸವವಾದಿಗಳು. ಆಯ್ಕೆ ನಿಮ್ಮದು. ಮನುವಾದಿಗಳು ಬೇಕೋ, ಬಸವವಾದಿಗಳು ಬೇಕೋ ನೀವೇ ನಿರ್ಧರಿಸಿ ಎಂದರು.

ಪ್ರಜಾಪ್ರಭುತ್ವ ಹುಟ್ಟಿದ್ದು ಇಂಗ್ಲೆಂಡ್ ನಲ್ಲಿ ಅಲ್ಲ. 900 ವರ್ಷಗಳ ಹಿಂದೆ ಸ್ಥಾಪಿತವಾದ ಅನುಭವ ಮಂಟಪವೇ ಮೊದಲ ಪ್ರಜಾಪ್ರಭುತ್ವದ ಕೇಂದ್ರ. ವಿಶ್ವಕ್ಕೆ ಪ್ರಜಾಪ್ರಭುತ್ವ ಪರಿಚಯಿಸಿದ ನಮ್ಮ ಭಾರತ ದೇಶ ಇಂದು ಸರ್ವಾಧಿಕಾರದ ಕಡೆ ಮುಖ ಮಾಡುತ್ತಿರುವುದು ದುರಂತ.
ಪ್ರಜಾಪ್ರಭುತ್ವದಲ್ಲಿ ಚರ್ಚೆ ಇರುತ್ತದೆ. ಸರ್ವಾಧಿಕಾರದಲ್ಲಿ ಚರ್ಚೆಗೆ ಅವಕಾಶ ಇಲ್ಲ, ಏಕಮುಖವಾಗಿ “ನಾನು ಹೇಳಿದ್ದನ್ನು ನೀವು ಕೇಳಿ” ಎನ್ನುವುದಷ್ಟೆ ಇರುತ್ತದೆ. “ಮನ್ ಕಿ ಬಾತ್” ರೀತಿ ನಾನು ಹೇಳ್ತೀನಿ, ನೀವು ಕೇಳಿ ಅನ್ನೋದು ಸರ್ವಾಧಿಕಾರಿ ಧೋರಣೆ ಎಂದು ಹೇಳಿದರು.

ಆರ್ಥಿಕ ಅಸಮಾನತೆಯು ಗುಲಾಮಗಿರಿ ಬೆಳೆಸುತ್ತದೆ, ಸ್ವಾಭಿಮಾನ ಅಳಿಸುತ್ತದೆ. ಕಾಯಕ ಮತ್ತು ದಾಸೋಹ ಬಸವಾದಿ ಶರಣರು ನಮಗೆ ಕೊಟ್ಟಿರುವ ಆರ್ಥಿಕ‌ ಸಿದ್ಧಾಂತ. ಇದನ್ನು ಪಾಲಿಸಿದರೆ ಮಾತ್ರ ಬಸವ ಜಯಂತಿ ಆಚರಣೆಗೆ ಅರ್ಥ ಬರುತ್ತದೆ ಎಂದರು.

ಕಲ್ಯಾಣಮ್ಮ‌ ಜನಸ್ಥಳವನ್ನು ಅಭಿವೃದ್ಧಿ ಪಡಿಸಲಾಗಿವುದು, ಬಸವಣ್ಣ ನೀಲಾಂಬಿಕೆಯ ವಿಗ್ರಹವನ್ನೂ ಮಾಡಿಸೋಣ. ಇವೆಲ್ಲವನ್ನೂ ನಾವು ಮಾಡ್ತೀವಿ. ಆದರೆ ನೀವೂ ಸ್ವಲ್ಪ ಬದಲಾಗಿ, ಎಲ್ಲರನ್ನೂ “ಇವ ನಮ್ಮವ” ಎನ್ನಬೇಕು. ಇಷ್ಟೇ ನನ್ನ ಮನವಿ ಎಂದರು.

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

5 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

9 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

17 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

20 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

23 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

1 day ago