Categories: ಲೇಖನ

ಎಲ್ಲೆಲ್ಲೂ ಬೆಟ್ಟಿಂಗ್ ದಂಧೆ, ಜೂಜಾಟಗಳದೇ ಅಬ್ಬರ

ಅಪಾಯ – ಎಚ್ಚರ – ಸ್ವಲ್ಪ ಜಾಗೃತರಾಗಿ……

ಎಲ್ಲೆಲ್ಲೂ ರಮ್ಮಿ ಸರ್ಕಲ್, ಡ್ರೀಮ್ ಇಲೆವೆನ್ ಮುಂತಾದ ಜೂಜಾಟಗಳದೇ ಅಬ್ಬರ. ಬಸ್ಸು, ರೈಲು, ಯಾವುದೇ ನಿಲ್ದಾಣಗಳು, ಪಾರ್ಕ್, ಸೋಮಾರಿ ಕಟ್ಟೆಗಳಲ್ಲಿ ಸಾಕಷ್ಟು ಜನ ಈ ಬೆಟ್ಟಿಂಗ್ ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ.

ದೇಶದ ಅತ್ಯಂತ ಪ್ರಖ್ಯಾತ ಜನಪ್ರಿಯ ಸಿನಿಮಾ ನಟ ನಟಿಯರು, ಕ್ರೀಡಾಪಟುಗಳು ಈ ಬೆಟ್ಟಿಂಗ್ ದಂಧೆಯ ರೋಲ್ ಮಾಡೆಲ್ ಗಳಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ಈ ಜೂಜಿನಾಟದಿಂದ ಯಥೇಚ್ಛ ಹಣ ಹರಿದು ಬರುತ್ತಿದೆ. ಸಾಮಾನ್ಯ ಜನರ ಬದುಕಿನ ಸಮಾಧಿಯ ಮೇಲೆ ಮಹಡಿ ಕಟ್ಟುವ ನೀಚ ಮನಸ್ಥಿತಿಯಲ್ಲಿ ಅವರಿದ್ದಾರೆ.

ಬಹುಶಃ ಇಡೀ ಜಗತ್ತಿನಲ್ಲಿ ಬಹುದೊಡ್ಡ ಮನರಂಜನಾ ಉದ್ಯಮವಿರುವುದು ಭಾರತದಲ್ಲೇ ಇರಬೇಕು. ಭಾರತದಲ್ಲಿ ಸಿನಿಮಾ, ಓಟಿಟಿ, ಧಾರವಾಹಿ, ಜಾಹಿರಾತುಗಳ ಉದ್ಯಮ ಬಹುದೊಡ್ಡದಾಗಿ ಬೆಳವಣಿಗೆ ಹೊಂದಿದೆ. ಅದರ ಅರ್ಥ ಇಲ್ಲಿನ ಬಹಳಷ್ಟು ಜನ ಭ್ರಮಾಧೀನರು, ವಾಸ್ತವದಿಂದ ಪಲಾಯನವಾಗುವವರು, ತಮ್ಮ ನೋವು ಸಂಕಷ್ಟಗಳನ್ನು ಮರೆಯಲು ಮನರಂಜನೆಯ ಚಟಕ್ಕೆ ಬೀಳುವವರು ಎಂದೆನಿಸುತ್ತದೆ. ಕಷ್ಟಗಳಿಗೆ ಪರಿಹಾರ ಸಿಗದಿದ್ದಾಗ ಕನಿಷ್ಠ ಭ್ರಮಾತ್ಮಕ ಮನರಂಜನೆಯಾದರು ಸಿಗಲಿ ಎಂಬುದೇ ಅವರ ನಿರೀಕ್ಷೆಯಾಗಿದೆ.

ಭಾರತೀಯ ಸಂಸ್ಕೃತಿಯಲ್ಲಿ ಜೂಜಾಟ ಎಂಬುದು ಅತ್ಯಂತ ಕೆಟ್ಟ ಚಟಗಳಲ್ಲಿ ಒಂದು. ಅದು ಅಂದಿನ ಪುರಾತನ ಕಾಲದ ಮಹಾಗ್ರಂಥ ಮಹಾಭಾರತದಲ್ಲಿ ಜೂಜಾಟದಿಂದಲೇ ಆದ ಕುರುಕ್ಷೇತ್ರ ಯುದ್ದ ಮತ್ತು ಇಡೀ ಸಾಮ್ರಾಜ್ಯದ ಪತನಕ್ಕೆ ಸಾಕ್ಷಿಯಾಗಿ ನಿಂತಿದೆ. ಅಂದಿನ ಸಾಮಾಜಿಕ ವ್ಯವಸ್ಥೆಯಲ್ಲಿಯೇ ಜೂಜಾಟ ಅಷ್ಟೊಂದು ಅಪಾಯಕಾರಿಯಾಗಿತ್ತು.

ಇದೀಗ ಅದನ್ನು ಅಧಿಕೃತಗೊಳಿಸುವ ಮೂಲಕ ಇಡೀ ಸಮಾಜದ ಸರ್ವನಾಶಕ್ಕೆ ಕಾರಣವಾಗುತ್ತಿರುವುದು ದುರಂತ. ಈ ವಿಷಯದಲ್ಲಿ ಆಡಳಿತಗಾರರು ಕಣ್ಮುಚ್ಚಿ ಕುಳಿತಿರುವುದು ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ.

ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ……

ಕ್ರಿಕೆಟ್ ಆಟಗಾರರು – ಫ್ರಾಂಚೈಸಿಗಳು – ಕ್ಲಬ್ ಬಾರ್ ಗಳು – ಜಾಹೀರಾತುದಾರರು – ಅದರ ಪ್ರಚಾರ ರಾಯಭಾರಿಗಳು – ಎಲೆಕ್ಟ್ರಾನಿಕ್ ಟಿವಿ ವಾಹಿನಿಗಳು – ಬೆಟ್ಟಿಂಗ್ ಏಜೆಂಟುಗಳು ಮುಂತಾದ ಎಲ್ಲರಿಗೂ ಹಬ್ಬ…..

ಬೆಟ್ಟಿಂಗ್ ಹುಚ್ಚಿನ ಮನೆಯವರಿಗೆ ಶಾಪ, ಇನ್ನೂ ನತದೃಷ್ಟರಿಗೆ ತಿಥಿ…….

ಈ ಆಟ ಒಂದು ದೊಡ್ಡ ಆರ್ಥಿಕ ಚಟುವಟಿಕೆಗಳನ್ನು ಹೊಂದಿದೆ ಎಂಬುದು ನಿಜ. ಆದರೆ ಅಷ್ಟೇ ಸಮಾಜ ಘಾತಕವೂ ಆಗಿದೆ.

ಸಮಾಜದಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇರುತ್ತದೆ. ಆಯ್ಕೆ ಜನರಿಗೆ ಬಿಟ್ಟಿದ್ದು ಎಂದು ‌ಸಮಾಧಾನಕರ ಉತ್ತರ ಹೇಳಬಹುದು. ಆದರೆ ಈ ಕೊಳ್ಳುಬಾಕ ಸಂಸ್ಕೃತಿ – ಕಾರ್ಪೊರೇಟ್ ವ್ಯವಸ್ಥೆ, ಜನರ ದುರಾಸೆಯ ಪ್ರವೃತ್ತಿ, ಸುಲಭವಾಗಿ ಹಣ ಮಾಡಬೇಕು ಎಂಬ ಮನೋಭಾವ ಎಲ್ಲವೂ ಇರುವಾಗ ಅವರಿಗೆ ಇದೇ ಲಾಭದ ಮಾರ್ಗಗಳು. ಇದನ್ನು ಕೇವಲ ಹಣದ ದೃಷ್ಟಿಯಿಂದ ಮಾತ್ರ ನೋಡದೆ ವ್ಯವಸ್ಥೆಯ ಅಧಃಪತನದ ಹಾದಿಯಾಗಿ ಗುರುತಿಸಬೇಕು.

ವಿವಿಧ ರೀತಿಯ ಆಕರ್ಷಕ ಲಾಭದ ಬೆಟ್ಟಿಂಗ್ ಆ್ಯಪ್ ಗಳು ಮೊಬೈಲ್ ಮಾರುಕಟ್ಟೆಯಲ್ಲಿ ದಾಳಿ ಇಟ್ಟಿವೆ. ಸಾಕಷ್ಟು ಮಧ್ಯಮ ವರ್ಗದ ಜನರೇ ಇದರಲ್ಲಿ ಹಣ ಹೂಡುತ್ತಾರೆ. ಈ ಜೂಜಿನಲ್ಲಿ ಲಾಭ ಮಾಡಿ ಯಶಸ್ವಿಯಾದವರು‌ ತುಂಬಾ ತುಂಬಾ ಕಡಿಮೆ. ನಷ್ಟ ಅನುಭವಿಸಿ ಎಲ್ಲವನ್ನೂ ಕಳೆದುಕೊಂಡವರು ಕೊನೆಗೆ ಪ್ರಾಣವನ್ನೂ ಕಳೆದುಕೊಂಡವರೇ ಹೆಚ್ಚು.

ಪ್ರಾರಂಭದಲ್ಲಿ ಸರಳವಾಗಿ ಖುಷಿ ಖುಷಿಯಾಗಿ ಇದು ನಮ್ಮನ್ನು ಸೆಳೆಯತೊಡಗುತ್ತದೆ. ಹಾಗೆಯೇ ಮುಂದುವರೆದಂತೆ ಆಳಕ್ಕೆ ಎಳೆದೊಯ್ಯುತ್ತದೆ. ಕೊನೆಗೆ ನಮ್ಮ ಅಸ್ತಿತ್ವವನ್ನೇ ಮರೆಸುತ್ತದೆ. ನಮ್ಮ ಭಾವನೆಗಳನ್ನು ಬೆಟ್ಟಿಂಗ್ ನಿಯಂತ್ರಿಸುತ್ತದೆ. ಮಾನ, ಮರ್ಯಾದೆ, ಕುಟುಂಬದ ಜವಾಬ್ದಾರಿ, ಭವಿಷ್ಯದ ಕಷ್ಟಗಳು ಯಾವುದೂ ಆ ಕ್ಷಣದಲ್ಲಿ ನೆನಪಾಗದಂತೆ ಮಾಡುತ್ತದೆ.

ನಮ್ಮಲ್ಲಿ ಸೋಮಾರಿತನ ಬೆಳೆಸುತ್ತದೆ. ಹಣಕ್ಕಾಗಿ ಯಾರನ್ನು ಬೇಕಾದರೂ ಅಂಗಲಾಚುವ, ಏನನ್ನೂ ಬೇಕಾದರೂ ಮಾಡುವ, ಯಾವುದನ್ನು ಬೇಕಾದರೂ ಮಾರುವ ಮನಸ್ಥಿತಿ ಸೃಷ್ಟಿ ಮಾಡುತ್ತದೆ. ಅಪರೂಪದ ಪ್ರಕರಣಗಳನ್ನು ಹೊರತುಪಡಿಸಿ ಬಹುತೇಕರು ಇದರಿಂದ ಹೊರಬರಲಾಗದೆ ಹತಾಶರಾಗುತ್ತಾರೆ. ಕೆಲವರು ದುಷ್ಚಟಗಳಿಗೆ ಬಲಿಯಾದರೆ, ಮತ್ತೆ ಕೆಲವರು ಎಲ್ಲವನ್ನೂ ಕಳೆದುಕೊಂಡು ತೀರಾ ಕೆಳಹಂತಕ್ಕೆ ಕುಸಿದರೆ, ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ.

ಊರು ಬಿಟ್ಟು ಓಡಿ ಹೋಗುವವರು, ಸಂಸಾರದಿಂದ ವಿಚ್ಚೇದಿತರಾಗುವವರು, ಮಾನಸಿಕ ಖಿನ್ನತೆಗೆ ಒಳಗಾಗುವವರು ಸಹ ಸಾಕಷ್ಟು ಜನರಿದ್ದಾರೆ.

ಇದು ಅಧೀಕೃತವಾದರು – ಅನಧೀಕೃತವಾದರು ಪರಿಣಾಮಗಳಲ್ಲಿ ಅಂತಹ ವ್ಯತ್ಯಾಸವೇನು ಆಗುವುದಿಲ್ಲ. ಕಾರಣ ಈ‌ ನೆಲದ ಸಂಸ್ಕೃತಿಗೆ ಈ‌ ಬೆಟ್ಟಿಂಗ್ ಒಗ್ಗುವುದಿಲ್ಲ. ಶ್ರಮ ಸಂಸ್ಕೃತಿ, ಕಾಯಕವೇ ಕೈಲಾಸ, ಉದ್ಯೋಗಂ ಪುರುಷ ಲಕ್ಷಣಂ, ಎಂಬ ಮಾತುಗಳ ಜೊತೆಗೆ ಅನೇಕ ಗಾದೆ ಮಾತುಗಳು ಈ ರೀತಿ ಸುಲಭವಾಗಿ ಬಂದ ಹಣ ಉಳಿಯುವುದಿಲ್ಲ ಅಥವಾ ಅದು ನಮ್ಮನ್ನು ದಾರಿ ತಪ್ಪಿಸುತ್ತದೆ ಎಂದೇ ಅನುಭವದಿಂದ ಸಾಬೀತಾಗಿದೆ.

ಈಗಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ, ಮುಕ್ತ ಮಾರುಕಟ್ಟೆ ವ್ಯವಸ್ಥೆಯಲ್ಲಿ, ಜನರ ಹುಚ್ಚು ಮನಸ್ಸಿನ ಹೊಳೆಯಲ್ಲಿ ಬೆಟ್ಟಿಂಗ್ ನಿಲ್ಲಿಸುವುದು ಅಥವಾ ಇಲ್ಲದಂತೆ ಮಾಡುವುದು ಕಷ್ಟ. ಅದಕ್ಕೆ ಬದಲಾಗಿ ನಾವುಗಳೇ ಆ ಚಟಕ್ಕೆ ಬಲಿಯಾಗದಂತೆ ಸ್ವಯಂ ನಿಯಂತ್ರಣ ಹೊಂದಬೇಕು ಮತ್ತು ನಮ್ಮ ‌ಸುತ್ತಮುತ್ತಲಿನ ಪರಿಚಿತರು ಸ್ನೇಹಿತರು ಇದಕ್ಕೆ ಬಲಿಯಾಗದಂತೆ ನಮ್ಮ ಕೈಲಾದಷ್ಟು ಪ್ರಯತ್ನಿಸಬೇಕು. ಸಂಘ ಸಂಸ್ಥೆಗಳನ್ನು ನಡೆಸುವವರು ತಮ್ಮ ಸದಸ್ಯರುಗಳಿಗೆ ಸಾಧ್ಯವಾದಷ್ಟು ಎಚ್ಚರಿಕೆ ನೀಡಬೇಕು…….

ಒಂದು ಅತ್ಯುತ್ತಮ ಆಟ ನಿಧಾನವಾಗಿ ಮನರಂಜನೆಯ ಹೆಸರಿನಲ್ಲಿ ದೊಡ್ಡ ಉದ್ಯಮವಾಗಿ ಬೆಳೆದು ಬೆಟ್ಟಿಂಗ್ ದಂಧೆಯಾಗಿ ಮಾರ್ಪಟ್ಟು ಒಂದು ಆರ್ಥಿಕ ಮತ್ತು ಸಾಮಾಜಿಕ ವ್ಯವಸ್ಥೆಯ ದುರ್ಗತಿಗೆ ಕಾರಣವಾಗುತ್ತಿರುವುದು ನಮ್ಮ ಸಮಾಜದ ಭವಿಷ್ಯದ ಬಗ್ಗೆ ಚಿಂತಿಸುವಂತೆ ಮಾಡಿದೆ.

ಆಡಳಿತಾತ್ಮಕ ವ್ಯವಸ್ಥೆ ಈ ನಿಟ್ಟಿನಲ್ಲಿ ಯೋಚಿಸುವಂತಾಗಲಿ. ಐ ಪಿ ಎಲ್ ಅಥವಾ ಅದರಿಂದಾಗುವ ಬೆಟ್ಟಿಂಗ್ ದುಷ್ಪರಿಣಾಮಗಳನ್ನು ನಿಯಂತ್ರಿಸುವ ಪ್ರಯತ್ನ ಮಾಡಲಿ ಎಂದು ಆಶಿಸುತ್ತಾ……….

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

42 minutes ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

58 minutes ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago