ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಈ ಜನ್ಮವಷ್ಟೇ ಅಲ್ಲ, ಇನ್ನು ಏಳು ಜನ್ಮ ಎತ್ತಿ ಬಂದರೂ ರಾಮನಗರ ಜಿಲ್ಲೆಯನ್ನು ಛಿದ್ರ ಮಾಡಲು ಸಾಧ್ಯವಿಲ್ಲ. ಇದನ್ನು ಡಿ.ಕೆ.ಶಿವಕುಮಾರ್ ಅರಿತುಕೊಳ್ಳಬೇಕು. ಜನರ ಅನುಕೂಲ, ಅನನುಕೂಲಗಳನ್ನು ವೈಜ್ಞಾನಿಕವಾಗಿ ಪರಿಗಣಿಸಿ, ಪರಿಶೀಲಿಸಿ ರಾಮನಗರ ಜಿಲ್ಲೆ ರಚನೆ ಮಾಡಲಾಗಿದೆ. ಈಗ ಜಿಲ್ಲೆ ಒಡೆದು ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದರೆ ಇಡೀ ಜಿಲ್ಲೆಯ ಜನ ತಿರುಗಿಬೀಳುತ್ತಾರೆ, ಜೋಕೆ. ಒಡೆದು ಚೂರುಚೂರು ಮಾಡುವುದಕ್ಕೆ ರಾಮನಗರವೇನು ಕಲ್ಲುಬಂಡೆಯೇ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

“ಈ‌ ದೇಶಕ್ಕೆ ವಿದ್ಯಾವಂತರು ಅಲ್ಲದಿದ್ದರೂ, ಬುದ್ದಿವಂತರು ಅಲ್ಲದಿದ್ದರೂ ಪ್ರಜ್ಞಾವಂತರು ಬೇಕು. ನಾನು ಕುಮಾರಸ್ವಾಮಿ ಅವರನ್ನು ಪ್ರಜ್ಞಾವಂತರು ಅಂದುಕೊಂಡಿದ್ದೆ. ಅವರ ತಂದೆಯವರನ್ನು ಕೇಳಿ ತಿಳಿದುಕೊಳ್ಳಬೇಕು” ಎಂದು ದರ್ಪದ ಮಾತು ಹೇಳಿದ್ದಾರೆ ಡಿಸಿಎಂ. ವಿದ್ಯೆ, ಬುದ್ಧಿ ಇಲ್ಲದಿದ್ದರೆ ಪ್ರಜ್ಞಾವಂತರು ಹೇಗಾದಾರು? ಎನ್ನುವ ಸಾಮಾನ್ಯ ಜ್ಞಾನ ಅವರಿಗಿಲ್ಲ. ಅವರ ಪ್ರಜ್ಞಾವಂತಿಕೆ ಎಂಥಹುದು ಎಂಬುದು ಜನಜನಿತ! ಎಂದಿದ್ದಾರೆ.

ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ ‘ದುಷ್ಟ’ಪ್ರಜ್ಞೆ, ‘ಅತಿ’ ಬುದ್ಧಿವಂತಿಕೆ, ‘ಅಸಾಮಾನ್ಯ’ ಜ್ಞಾನ ಖಂಡಿತವಾಗಿಯೂ ನನಗಿಲ್ಲ. ಅದು ನನಗೆ ಬೇಕಾಗಿಯೂ ಇಲ್ಲ ಎಂದು ಹೇಳಿದ್ದಾರೆ.

“ಕುಮಾರಸ್ವಾಮಿ ಏನೇನೋ ಹೇಳುತ್ತಾರೆ. ನನ್ನ ತಲೆಯಲ್ಲಿ ಏನೋ ಯೋಚನೆ ಇದೆ” ಎನ್ನುತ್ತಾರೆ ಡಿಸಿಎಂ. ಇಷ್ಟಕ್ಕೂ ಅವರ ತಲೆಯಲ್ಲಿ ಏನಿದೆ? ಚಿನ್ನದ ಬೆಲೆಯ ಕನಕಪುರದ ಭೂಮಿಗಳನ್ನು ಕೊಳ್ಳೆ ಹೊಡೆದು ಬಿಲ್ಡರುಗಳಿಗೆ ಒಪ್ಪಿಸುವುದೇ? ಅಥವಾ ತಾವು ಈಗಾಗಲೇ ಎಗ್ಗಿಲ್ಲದೆ ಬೇಲಿ ಹಾಕಿಕೊಂಡಿರುವ ಬೇನಾಮಿ ಭೂಮಿಗಳಲ್ಲಿ ಕೋಟೆ ಕಟ್ಟಿಕೊಳ್ಳುವುದೇ? ಬಿಡಿಸಿ ಹೇಳಿದರೆ ನಾವು ಕೃತಾರ್ಥರಾಗುತ್ತೇವೆ. ಇವರು ಹೇಳಲ್ಲ, ಜನರೂ ನಂಬಲ್ಲ.. ಎಲ್ಲವೂ ನಿಗೂಢ ಎಂದು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಗದಗ ಸೇರಿ ಅನೇಕ ಹೊಸ ಜಿಲ್ಲೆಗಳು ರಚನೆ ಆಗಿವೆ. ಅವೆಲ್ಲವನ್ನೂ ಸುಖಾಸುಮ್ಮನೆ ಮಾಡಲಾಯಿತೆ? ಜನಹಿತ ಪರಿಗಣಿಸಿ ಹೊಸ ಜಿಲ್ಲೆಗಳನ್ನು ರಚಿಸಲಾಯಿತು. ಅಲ್ಲಿ ಜಿಲ್ಲೆಗಳನ್ನು ರಚನೆ ಮಾಡಿದ ಮುಖ್ಯಮಂತ್ರಿಯ ಸ್ವಹಿತ ಇರಲಿಲ್ಲ. ಕನಕಪುರವನ್ನು ಬೆಂಗಳೂರಿಗೆ ಸೇರಿಸಬೇಕೆನ್ನುವುದರ ಹಿಂದೆ ಯಾರ ಹಿತ ಅಡಗಿದೆ? ಕನಕಪುರದ ಪ್ರತಿಯೊಬ್ಬರಿಗೂ ಅಸಲಿ ಸತ್ಯ ಗೊತ್ತಿದೆ. ಇರುವ ಶ್ರೀಮಂತಿಕೆ, ಸಂಪತ್ತು ಸಾಲದೆ? ಇನ್ನೆಷ್ಟನ್ನು ಕೂಡಿ ಹಾಕಬೇಕು? ಎಂದು ಪ್ರಶ್ನೆ ಮಾಡಿದ್ದಾರೆ.

 ಕನಕಪುರದ ಅಭಿವೃದ್ಧಿ ಈಗ ನೆನಪಾಗಿದೆಯಾ? 1983ಕ್ಕೆ ಮೊದಲು ಇದೇ ಕನಕಪುರ, ಸಾತನೂರು ಹೇಗಿದ್ದವು? ರಾಮಕೃಷ್ಣ ಹೆಗಡೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಬಂದ ಮಾಜಿ ಪ್ರಧಾನಿ ದೇವೇಗೌಡ ಅವರಿಗೆ, ಅಲ್ಲಿನ ಸ್ಥಿತಿ ಕಂಡು ಕಣ್ಣೀರು ಬಂತು. ಒಂದು ವಿದ್ಯುತ್‌ ಸಂಪರ್ಕ ಇರಲಿಲ್ಲ, ರಸ್ತೆ-ಚರಂಡಿ ಇರಲಿಲ್ಲ. ಕುಡಿಯಲು ನೀರು ಇರಲಿಲ್ಲ. ಆ ಪರಿಸ್ಥಿತಿಯನ್ನು ದೇವೇಗೌಡರು ಈಗಲೂ ನೆನಪು ಮಾಡಿಕೊಳ್ಳುತ್ತಾರೆ. ಅಂದು ಲೋಕೋಪಯೋಗಿ, ಬೃಹತ್‌ ನೀರಾವರಿ ಮಂತ್ರಿಗಳಾಗಿದ್ದ ಅವರು ಕನಕಪುರ, ರಾಮನಗರಕ್ಕೆ ಕಾಯಕಲ್ಪ ನೀಡಿದರು, ಆ ದುಸ್ಥಿತಿಯನ್ನು ಬದಲಿಸಿದರು. ಅವರ ಕೆಲಸವನ್ನೇ ನಾನೂ ಮುಂದುವರಿಸಿದೆ. ನೀವೇನು ಮಾಡಿದ್ದೀರಿ ಡಿ.ಕೆ.ಶಿವಕುಮಾರ್‌ ರವರೇ..? ಬಡವರ ಜಮೀನಿಗೆ ಬೇಲಿ ಹಾಕಿದ್ದು, ಅಡ್ಡ ಬಂದವರ ಜೀವ ತೆಗೆದದ್ದು, ಕಲ್ಲುಬಂಡೆಗಳನ್ನು ಲೂಟಿ ಮಾಡಿದ್ದು, ಕನಕಪುರದಲ್ಲಿ ದಾದಾಗಿರಿ, ಗೂಂಡಾಗಿರಿ ಮಾಡಿದ್ದು. ಈಗ ಕನಕಪುರವನ್ನು ಬೆಂಗಳೂರಿಗೆ ಸೇರಿಸಿ ಇನ್ನೊಂದು ಮಾಫಿಯಾ ಕಟ್ಟುವುದಾ? ಇದಾ ನಿಮ್ಮ ತಲೆಯಲ್ಲಿ ಇರುವ ಆಲೋಚನೆ? ಎಂದಿದ್ದಾರೆ.

ನಾಡಪ್ರಭು ಶ್ರೀ ಕೆಂಪೇಗೌಡರು, ಶ್ರೀ ಕೆಂಗಲ್‌ ಹನುಮಂತಯ್ಯನವರು, ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು, ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳು ರಾಮನಗರದವರು ಎಂದು ನಿಮಗೆ ಈಗ ಜ್ಞಾನೋದಯ ಆಗಿದೆ. ಇಂಥ ಮಹಾಪುರುಷರು ಜನ್ಮತಳೆದ, ಅವರು ನಡೆದಾಡಿದ ನೆಲವನ್ನು ʼರಿಯಲ್‌ ಎಸ್ಟೇಟ್‌ ಪಾಪಕುಂಡʼವನ್ನಾಗಿ ಮಾಡಿದ್ದು ಯಾರಪ್ಪ ಡಿ.ಕೆ.ಶಿವಕುಮಾರ್?‌ ಈ ಪುಣ್ಯಪರುಷರ ಹೆಸರು ಹೇಳುವ ನೈತಿಕತೆ ನಿಮಗೆ ಇದೆಯಾ? ರಾಮದೇವೇರ ಬೆಟ್ಟದಲ್ಲಿ ನೆಲೆಸಿರುವ ಶ್ರೀರಾಮಚಂದ್ರ ಪ್ರಭು ನಿಮ್ಮ ದುಷ್ಟ ಹುನ್ನಾರವನ್ನು ಮೆಚ್ಚಾನೆಯೇ? ಎಂದು ಪ್ರಶ್ನಿಸಿದ್ದಾರೆ.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

6 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

7 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

11 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

12 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

17 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

19 hours ago