ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿದೆ. ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2641 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2ನ್ನು ತೆಗೆದುಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಮಾಹಿತಿ ನೀಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸರ್ಕಾರಿ ಪದವಿಪೂರ್ವ ಕಾಲೇಜು, ದೇವನಹಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜು, ಹೊಸಕೋಟೆ
ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ನೆಲಮಂಗಲ ಸರ್ಕಾರಿ ಪದವಿಪೂರ್ವ ಕಾಲೇಜು ಒಟ್ಟು 4 ಪರೀಕ್ಷಾ ಕೇಂದ್ರಗಳಾಗಿವೆ. ದ್ವಿತೀಯ ಪಿಯುಸಿ ಪರೀಕ್ಷಾ 1 ರಲ್ಲಿ ಹೊಸ ವಿದ್ಯಾರ್ಥಿಗಳು (ಅನುತ್ತೀರ್ಣರಾದ) 1659, ಖಾಸಗಿ ವಿದ್ಯಾರ್ಥಿಗಳು 03, ಪುನರಾವರ್ತಿತ (2025ಕ್ಕಿಂತ ಮೊದಲಿನವರು) 184, ಅಂಕ ಸುಧಾರಣೆ ಬಯಸಿರುವ 795 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ
ಏಪ್ರಿಲ್ 24 ರಿಂದ ಪ್ರಾರಂಭಗೊಳ್ಳುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆ 2 ಕುರಿತು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಭಾಗವಹಿಸಿ ಮಾತನಾಡಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 2 ಪಾರದರ್ಶಕವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ನಾಲ್ಕು ತಾಲ್ಲೂಕಿನ ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
ಸಕಲ ಸಿದ್ದತೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕತೆ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ದತೆ ನಡೆದಿದೆ.
ಕಾನೂನು ವ್ಯವಸ್ಥೆ :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲೂ ಜಾಗೃತ ದಳ ವ್ಯವಸ್ಥೆ ಜೊತೆಗೆ ಪೊಲೀಸ್ ಭದ್ರತಾ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಸುತ್ತಳತೆಯಲ್ಲಿ ನಿಷೇಧಾಜ್ಞೆ, ಜೆರಾಕ್ಸ್ ಅಂಗಡಿಗಳು ಹಾಗೂ ಕಂಪ್ಯೂಟರ್ ಕೇಂದ್ರಗಳು ಮುಚ್ಚುವುದು ಸೇರಿದಂತೆ ಎಲ್ಲಾ ಅಗತ್ಯ ವ್ಯವಸ್ಥೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ) ಉಪನಿರ್ದೇಶಕ ಎನ್. ಮೋಹನ್ ಕುಮಾರ್ ತಿಳಿಸಿದರು.