ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಪಾಳ್ಯ ಗ್ರಾಮದಲ್ಲಿ ಇಂದಿಗೂ ನಲವತ್ತಕ್ಕೂ ಹೆಚ್ಚು ಕುಟುಂಬಗಳು ಗುಡಿಸಲಿನಲ್ಲೇ ಜೀವನ ಸಾಗಿಸುತ್ತಿರುವುದು ವ್ಯವಸ್ಥೆಯ ವೈಫಲ್ಯಕ್ಕೆ ಸಾಕ್ಷಿಯಾಗಿದೆ.

ಚನ್ನದೇವಿ ಅಗ್ರಹಾರ ಗ್ರಾಮ ಪಂಚಾಯಿತಿಯಿಂದ ಕೇವಲ ನೂರು ಮೀಟರ್ ದೂರದಲ್ಲೇ ಸುಮಾರು 40ಕ್ಕೂ ಹೆಚ್ಚು ಗುಡಿಸಲುಗಳು ನಿರ್ಮಾಣವಾಗಿದ್ದು, ಇಲ್ಲಿ ನೂರಕ್ಕೂ ಹೆಚ್ಚು ಮಂದಿ ವಾಸವಿದ್ದೇವೆ. ಬಹುತೇಕ ಹಕ್ಕಿಪಿಕ್ಕಿ ಜನಾಂಗದ ಕುಟುಂಬಗಳು ಕಳೆದ ಐದು ದಶಕಗಳಿಂದ ಸರ್ಕಾರಿ ಗುಂಡುತೋಪು ಪ್ರದೇಶದಲ್ಲಿ ನೆಲೆಸಿದ್ದರೂ, ನಮಗೆ ಇದುವರೆಗೆ ಸಮರ್ಪಕ ಸರ್ಕಾರಿ ಸೌಲಭ್ಯಗಳು ದೊರೆತಿಲ್ಲ ಎಂದು ಗುಡಿಸಲು ನಿವಾಸಿ ನಾಗಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಡಿಸಲಿನಲ್ಲಿ ವಾಸಿಸುವ ಹಲವರಿಗೆ ಇನ್ನೂ ಪಿಂಚಣಿ ಸೌಲಭ್ಯ ಸಿಕ್ಕಿಲ್ಲ. ಕೆಲವರಿಗೆ ಆಧಾರ್ ಕಾರ್ಡ್ ಇಲ್ಲದ ಪರಿಸ್ಥಿತಿಯಿದ್ದು, ಇಲ್ಲಿ ಜನಿಸಿದ ಅನೇಕ ಮಕ್ಕಳಿಗೆ ಜನನ ಪ್ರಮಾಣ ಪತ್ರವೇ ಇಲ್ಲ. ಮತದಾನದ ಸಮಯದಲ್ಲಿ ಮಾತ್ರ ಜನಪ್ರತಿನಿಧಿಗಳು ಬಂದು ಮತದಾರರ ಗುರುತಿನ ಚೀಟಿ ಮಾಡಿಸಿಕೊಟ್ಟಿದ್ದಾರೆ ಹೊರತು ಬೇರೆ ಯಾವುದೇ ದಾಖಲೆ ಅಥವಾ ಸೌಲಭ್ಯ ಕಲ್ಪಿಸಿಲ್ಲ ಎಂದು ಆರೋಪಿಸಿದ್ದಾರೆ.

ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಕಾಂತಲಕ್ಷ್ಮೀ ಮಾತನಾಡಿ, ಮದುರೆ ಕೆರೆಯ ಅಂಚಿನಲ್ಲಿ ಈ ಗುಡಿಸಲುಗಳು ನಿರ್ಮಾಣವಾಗಿರುವುದರಿಂದ ಮಳೆಗಾಲದಲ್ಲಿ ಅಪಾಯ ಮತ್ತಷ್ಟು ಹೆಚ್ಚಾಗುತ್ತದೆ. ಮಳೆ ಬಂದರೆ ನೀರು ಮನೆಗಳಿಗೆ ನುಗ್ಗುವ ಭೀತಿ ಇದ್ದು, ಕೆರೆ ಕೋಡಿ ಹೊಡೆದರೆ ಸಂಪೂರ್ಣ ಗುಡಿಸಲುಗಳು ನೀರಿನಲ್ಲಿ ಕೊಚ್ಚಿ ಹೋಗುವ ಆತಂಕದಲ್ಲಿ ಜನ ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾತ್ರಿ ವೇಳೆಯಲ್ಲಿ ಮಕ್ಕಳಿಗೆ ಓದಲು ಸಮರ್ಪಕ ವಿದ್ಯುತ್ ವ್ಯವಸ್ಥೆಯಿಲ್ಲದ ಕಾರಣ ಬೀದಿ ದೀಪದ ಕೆಳಗೆ ಕುಳಿತು ವಿದ್ಯಾಭ್ಯಾಸ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಜೊತೆಗೆ, ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಜಾಗವಿಲ್ಲ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

“ನಾವು ಸಾಯೋದರ ಒಳಗೆ ಒಂದು ಮನೆ ಕಟ್ಟಿಕೊಡಿ” ಎಂದು ವಯೋವೃದ್ಧರು ಸರ್ಕಾರದ ಮುಂದೆ ಮನವಿ ಮಾಡುತ್ತಿರುವ ದೃಶ್ಯ ಮನಕಲಕುವಂತಿದೆ. ಹಕ್ಕಿಪಿಕ್ಕಿ ಸಮುದಾಯಕ್ಕೆ ಜಾಗ ನೀಡುವ ವಿಚಾರದಲ್ಲಿ ಪಂಚಾಯಿತಿಯ ಕೆಲ ಸದಸ್ಯರು ನಿರಾಸಕ್ತಿ ತೋರುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ.

ಈ ಸ್ಥಳಕ್ಕೆ ಕಳೆದ ವರ್ಷ ಮಕ್ಕಳ ಆಯೋಗದ ಅಧ್ಯಕ್ಷರು ಸಹ ಭೇಟಿ ನೀಡಿದ್ದರು. ನಂತರ 2026ರ ಜನವರಿ 2ರಂದು ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ‌ ಪರಿಶೀಲನೆ ನಡೆಸಿದ್ದರು. ಇಲ್ಲಿನ ನಿವಾಸಿಗಳಿಗೆ ಸಲ್ಲಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು. ಆದರೆ, ಅಧಿಕಾರಿಗಳು ಇದೂವರೆಗೆ ಯಾವುದೇ ಸೌಕರ್ಯಗಳನ್ನು ಒದಗಿಸದೇ ನಿರ್ಲಕ್ಷ್ಯವಹಿಸುತ್ತಿದ್ದಾರೆ. ದಾಖಲೆಗಳಿದ್ದರೆ ಆಯೋಶ್ರಯ ಯೋಜನೆಗೆ ಅನುಕೂಲವಾಗುತ್ತವೆ. ಆದರೆ, ಆ ದಾಖಲೆಗಳನ್ನು ಮಾಡಿಕೊಡಲು ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಅಸ್ಪೃಶ್ಯತೆಯನ್ನು ಜೀವಂತವಾಗಿ ಇಡಲು ಯತ್ನ ನಡೆಯುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಚಿದಾನಂದ ಆರೋಪಿಸಿದರು..

ಬೆಂಗಳೂರು ನಗರದ ಕೂಗಳತೆ ದೂರದಲ್ಲೇ ಇಂತಹ ದುಸ್ಥಿತಿ ಮುಂದುವರಿದಿರುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಕಪ್ಪು ಚುಕ್ಕಿಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಈ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 hours ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

21 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

1 day ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

1 day ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago