ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಗೆ ಸಚಿವರಿಂದ ಚಾಲನೆ: ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4886/- ನಿಗದಿ

ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಅಂದಾಜು 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿಯನ್ನು ಹೊಂದಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಕುರುಬರದೊಡ್ಡಿ ರಸ್ತೆಯಲ್ಲಿರುವ ಅಕ್ಷರ ದಾಸೋಹ ಕೇಂದ್ರದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ವತಿಯಿಂದ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿಯನ್ನು ಖರೀದಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಸಕ್ತ ವರ್ಷ ಒಳ್ಳೆಯ ಬೆಲೆಯನ್ನು ಸರ್ಕಾರ ನಿಗದಿ ಪಡಿಸಿ ರಾಗಿ ಖರೀದಿಸುತ್ತಿದೆ. ರೈತರಿಂದ ನೇರವಾಗಿ ಖರೀದಿಸಿ ಅದರ ಹಣವನ್ನು ಯಾವುದೇ ಮಧ್ಯವರ್ತಿಗೆ ಆಸ್ಪದ ನೀಡದೇ ರೈತರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಸಂದಾಯ ಮಾಡಲಾಗುತ್ತದೆ. ಗುಣಮಟ್ಟದ ರಾಗಿ ಪೂರೈಕೆ ಆದಲ್ಲಿ ಮುಂದಿನ ವರ್ಷದಲ್ಲಿ 8 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸುವ ಗುರಿ ಇಟ್ಟುಕೊಂಡಿದೆ ಎಂದರು.

ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದು ಮುಂದಿನ ದಿನಗಳಲ್ಲಿ ಹೊರ ರಾಜ್ಯಗಳಿಗೂ ರಾಗಿ ಪೂರೈಕೆ ಮಾಡುವ ಗುರಿ ಹೊಂದಲಾಗಿದೆ. ಬೇಡಿಕೆಯ ಆಧಾರದ ಮೇಲೆ ಬೇರೆ ಬೇರೆ ರಾಜ್ಯಗಳಿಗೆ ರಾಗಿ ಸರಬರಾಜು ಮಾಡಲಾಗುವುದು. ಗುಣಮಟ್ಟದ ರಾಗಿಯಿಂದ ಬೇಡಿಕೆ ಹೆಚ್ಚಾಗಲಿದೆ, ಇದರಿಂದ ರೈತರ ಬಳಿ ರಾಗಿ ಖರೀದಿಸುವ ಪ್ರಮಾಣ ಕೂಡ ಹೆಚ್ಚಾಗಲಿದೆ. ಹಾಗಾಗಿ ರೈತರು ಗುಣಮಟ್ಟದ ರಾಗಿ ನೀಡಬೇಕು ಎಂದರು.

*ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4886/- ನಿಗದಿ*

2025-26 ನೇ ಸಾಲಿನ ಕನಿಷ್ಠ ಬೆಂಬಲ ಯೋಜನೆಯಡಿ ಪ್ರತಿ ಕ್ವಿಂಟಾಲ್ ರಾಗಿಗೆ ರೂ.4886/- ನಿಗದಿ ಪಡಿಸಲಾಗಿದೆ. ಪ್ರತಿ ರೈತರಿಂದ ಒಂದು ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಗಳನ್ನು ಮೀರದಂತೆ ಉತ್ತಮ ಗುಣಮಟ್ಟದ ರಾಗಿ ಖರೀದಿಸಲಾಗುವುದು. ಪ್ರಸಕ್ತ ಸಾಲಿನ ರಾಗಿ ಖರೀದಿ ಪ್ರಕ್ರಿಯೆಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ಬಳಕೆಯಾಗುತ್ತದೆ. ಒಂದು ಬಾರಿ ನೊಂದಣಿ ಸಂದರ್ಭದಲ್ಲಿ ಇನ್ನೊಂದು ರಾಗಿ ಖರೀದಿ ವೇಳೆಯಲ್ಲಿ ಹಾಗಾಗಿ ನೋಂದಾಯಿತ ರೈತರೇ ರಾಗಿ ಖರೀದಿ ಕೇಂದ್ರಗಳಿಗೆ ರಾಗಿ ತರುವುದು ಕಡ್ಡಾಯವಾಗಿರುತ್ತದೆ.

*ತಾಲ್ಲೂಕುವಾರು ರೈತರ ನೋಂದಣಿ ವಿವರ:*

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು- 3678, ದೊಡ್ಡಬಳ್ಳಾಪುರ ತಾಲ್ಲೂಕು- 12687, ಹೊಸಕೋಟೆ ತಾಲೂಕು-1240, ನೆಲಮಂಗಲ ತಾಲೂಕು- 5619 ಸೇರಿ ಒಟ್ಟು 23224 ರೈತರು ರಾಗಿ ಪೂರೈಕೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಆಹಾರ
ಮತ್ತು ನಾಗರೀಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಜಗದೀಶ್ ಅವರು ಮಾತನಾಡಿ, ರಾಗಿ ಬೆಳೆ ರೈತರ ಪಾಲಿನ ಸಂಜೀವಿನಿ ಇದ್ದಂತೆ, ರಾಗಿ ಬೆಳೆ ಕಡಿಮೆ ನೀರಿನಲ್ಲೂ ಉತ್ತಮವಾಗಿ ಬೆಳೆಯಬಹುದು. ರೈತರು ರಾಗಿ ಖರೀದಿ ಕೇಂದ್ರಕ್ಕೆ ಗುಣಮಟ್ಟದ ರಾಗಿಯನ್ನು ಸರಬರಾಜು ಮಾಡಲು ಆದ್ಯತೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ತಹಶೀಲ್ದಾರ್ ಅನಿಲ್, ತಾ.ಪಂ ಇಒ ಶ್ರೀನಾಥ್ ಗೌಡ, ಗ್ಯಾರಂಟಿ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷರಾದ ಜಗನ್ನಾಥ, ಮುಖಂಡರಾದ ಮಂಜಣ್ಣ, ಪ್ರಸನ್ನ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

23 minutes ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 days ago