ಕರ್ನಾಟಕ ಮತ್ತು ಕನ್ನಡಿಗರಿಗೆ ಕೇಂದ್ರದ ಬಿಜೆಪಿ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನು ಹೇಳುತ್ತಲೇ ಬಂದಿದ್ದೇನೆ. ಇದಕ್ಕೆ ಉತ್ತರ ನೀಡಬೇಕಾಗಿರುವವರು ಪ್ರಧಾನಿ ನರೇಂದ್ರ ಮೋದಿಯವರೇ ಹೊರತು ಬಿಜೆಪಿಯ ಐಟಿ ಸೆಲ್ ಅಲ್ಲ. ಪ್ರಧಾನಿಯವರು ಒಪ್ಪಿದ ದಿನ ಮತ್ತು ಸ್ಥಳವನ್ನು ನಿಗದಿಪಡಿಸಿದರೆ ಈ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಿಗೆ ಬರಗಾಲ ಬಿದ್ದು ಆರು ತಿಂಗಳುಗಳಾಗಿವೆ. ಬರಪರಿಹಾರದ ಕೆಲಸಗಳಿಗಾಗಿ 18,177 ಕೋಟಿ ರೂಪಾಯಿ ನೀಡಲು ಮೂರು ತಿಂಗಳುಗಳಿಂದ ಒತ್ತಾಯಿಸುತ್ತಾ ಬಂದಿದ್ದೇವೆ. ಪತ್ರ ಬರೆದಿದ್ದೇವೆ, ನಾನೇ ಖುದ್ದಾಗಿ ಹೋಗಿ ಪ್ರಧಾನಮಂತ್ರಿಯವರನ್ನು ಭೇಟಿಯಾಗಿ ನಮ್ಮ ರೈತರ ಕಷ್ಟಗಳನ್ನು ವಿವರಿಸಿದ್ದೇನೆ.. ಇಲ್ಲಿಯವರೆಗೆ ಒಂದು ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದಿದ್ದಾರೆ.
ಯುಪಿಎ ಸರ್ಕಾರದ 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ನಿಗದಿಪಡಿಸಿದ್ದ ಶೇ.4.72 ತೆರಿಗೆ ಪಾಲನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ 15ನೇ ಹಣಕಾಸು ಆಯೋಗವು ಶೇ.3.64 ಕ್ಕೆ ಇಳಿಕೆ ಮಾಡಿ ವಂಚಿಸಲಾಗಿದೆ. ಇದರಿಂದ ಕನ್ನಡಿಗರು ಕಳೆದ 4 ವರ್ಷಗಳಲ್ಲಿ ಸುಮಾರು 45,000 ಕೋಟಿ ರೂಪಾಯಿಯಷ್ಟು ಬೆವರಗಳಿಕೆಯಿಂದ ಕಟ್ಟಿದ ತೆರಿಗೆ ಹಣವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ನೀಡುತ್ತಿರುವ ಅನುದಾನವನ್ನು ವರ್ಷದಿಂದ ವರ್ಷಕ್ಕೆ ಕಡಿತಗೊಳಿಸಲಾಗುತ್ತಿದೆ. 2021-22ರ ಅವಧಿಯಲ್ಲಿ 20 ಸಾವಿರ ಕೋಟಿ ರೂಪಾಯಿ ಇದ್ದ ಅನುದಾನ, 2022-23ರಲ್ಲಿ 13 ಸಾವಿರ ಕೋಟಿ ರೂಪಾಯಿಗೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವಂತೆ 15ನೇ ಹಣಕಾಸು ಆಯೋಗವು ಶಿಫಾರಸು ಮಾಡಿತ್ತು. ಆದರೆ ಹಣಕಾಸು ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಈ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ಆರ್ಥಿಕ ವರ್ಷ ಆರಂಭವಾಗಿ 6 ತಿಂಗಳು ಕಳೆದರೂ ಕೇಂದ್ರ ಸರ್ಕಾರದ ಸಹಯೋಗದ 61 ಯೋಜನೆಗಳಿಗೆ ಸಂಬಂಧಿಸಿದಂತೆ 23 ಇಲಾಖೆಗಳಿಗೆ ನಯಾಪೈಸೆ ಅನುದಾನ ಬಿಡುಗಡೆಯಾಗಿಲ್ಲ. ಕೃಷ್ಣಾ ಮೇಲ್ದಂಡೆ ಮತ್ತು ಮಹದಾಯಿ ಯೋಜನೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಏಮ್ಸ್ ಸಂಸ್ಥೆ ಬೇಕೆಂಬ ಕನ್ನಡಿಗರ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ಕನ್ನಡಿಗರು ಶ್ರಮದಿಂದ ಕಟ್ಟಿದ ಬ್ಯಾಂಕುಗಳು ವಿಲೀನದ ಹೆಸರಲ್ಲಿ ಬೇರೆ ರಾಜ್ಯಗಳ ನಷ್ಟದಲ್ಲಿರುವ ಬ್ಯಾಂಕುಗಳ ಜೊತೆ ವಿಲೀನ ಮಾಡಿ ಕನ್ನಡಿಗರಿಗೆ ದ್ರೋಹ ಬಗೆಯಲಾಯಿತು ಎಂದಿದ್ದಾರೆ.
ನಮ್ಮ ಹಿರೀಕರು ಕಷ್ಟಪಟ್ಟು ನಿರ್ಮಾಣ ಮಾಡಿದ್ದ ವಿಮಾನ ನಿಲ್ದಾಣವನ್ನು ಖಾಸಗಿಯವರಿಗೆ ಮಾರಲಾಯಿತು. ಹದಿನೆಂಟು ಸಾವಿರ ಕೋಟಿ ರೂಪಾಯಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಗೆ ಅನುದಾನ ಇಲ್ಲದೆ ಸೊರಗಿ ಹೋಗಿದೆ. ಇನ್ನು ರಾಜ್ಯದ ಇತರೆ ರೈಲ್ವೇ ಯೋಜನೆಗಳನ್ನು ಮೂಲೆಗೆ ತಳ್ಳಲಾಗಿದೆ ಎಂದು ಹೇಳಿದ್ದಾರೆ.
ತೆರೆದ ಪುಸ್ತಕದಲ್ಲಿ ಕಾಣುವ ಈ ಅನ್ಯಾಯಗಳನ್ನು ಕಂಡು ಮೌನವಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆಯನ್ನು ಹೇಗೆ ವ್ಯಾಖ್ಯಾನಿಸಲಿ? ಉದ್ದೇಶಪೂರ್ವಕವಾದ ನಿರ್ಲಕ್ಷ್ಯ ಎನ್ನಲೇ? ಸಹಜವಾದ ನಿದ್ರಾ ಸ್ಥಿತಿ ಎನ್ನಲೇ? ಎಂದು ಪ್ರಶ್ನೆ ಮಾಡಿದ್ದಾರೆ.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…