ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಪ್ರಜಾಪ್ರಭುತ್ವ ವ್ಯವಸ್ಥೆಯ ಕತ್ತು ಹಿಸುಕಲು ಭಾರತದದಲ್ಲಿ ತುರ್ತು ಪರಿಸ್ಥಿತಿ ಹೇರಿದ ಕರಾಳ ಇತಿಹಾಸ ಕಾಂಗ್ರೆಸ್ ಪಕ್ಷದ್ದು. ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿರುವ ವಿರೋಧ ಪಕ್ಷವನ್ನು ದಮನ ಮಾಡಲು ವಿರೋಧಿ ರಾಜಕೀಯ ನೇತಾರರು ಹಾಗೂ ಪ್ರಮುಖರನ್ನು ಜೈಲಿಗೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ ಪಕ್ಷದ್ದು. ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಧ್ಯಮ ಕಚೇರಿಗಳಿಗೆ ಬೀಗ ಜಡಿದು ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕಿ, ಸಂವಿಧಾನದ ಆಶಯದ ಮೇಲೆ ಅಟ್ಟಹಾಸ ಮೆರೆದ ಇತಿಹಾಸ ಕಾಂಗ್ರೆಸ್ ಪಕ್ಷದ್ದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಅಧಿಕಾರಕ್ಕೆ ಬಂದಾಗಲೆಲ್ಲಾ ಪಾಳೆಗಾರಿಕೆ ಗುಂಗಿನಲ್ಲಿ ವರ್ತಿಸುವ ಕಾಂಗ್ರೆಸ್ಸಿಗರು ಕರ್ನಾಟಕದಲ್ಲಿ ಕಳೆದ 2 ವರ್ಷಗಳಲ್ಲಿ ನಿರಂಕುಶ ಪ್ರಭುತ್ವ ಸಾಧಿಸಲು ಹವಣಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರಗಳು, ಅಭಿವೃದ್ಧಿ ಶೂನ್ಯ ಆಡಳಿತವನ್ನು ಪ್ರಶ್ನಿಸಿ ಹೋರಾಡುತ್ತಿರುವ ವಿರೋಧ ಪಕ್ಷಗಳನ್ನು ಈವರೆವಿಗೂ ಪೊಲೀಸ್ ವ್ಯವಸ್ಥೆ ದುರ್ಬಳಕೆ ಮಾಡಿಕೊಂಡು ಬೆದರಿಸುತ್ತಿದ್ದ ಕಾಂಗ್ರೆಸ್, ವಿಧಾನ ಸಭೆಯ ಅಧ್ಯಕ್ಷರನ್ನು ಬಳಸಿಕೊಂಡು ವಿರೋಧ ಪಕ್ಷದ 18 ಸದಸ್ಯರನ್ನು ಸುದೀರ್ಘ ಅವಧಿಗೆ ಅಮಾನತು ಮಾಡಿ ಸಭಾಧ್ಯಕ್ಷ ಪೀಠವನ್ನು ತನ್ನ ಸರ್ವಾಧಿಕಾರತನ ಪ್ರದರ್ಶಿಸಲು ಬಳಸಿಕೊಂಡಿತ್ತು ಎಂದು ಹೇಳಿದ್ದಾರೆ.

ಇದೀಗ ಸಾಧನೆಯ ಹೆಸರಿನಲ್ಲಿ ರಾಜ್ಯದ ಜನರಿಗೆ ಸುಳ್ಳು ಹೇಳಲು ಹೊರಟು ಬರಿದಾಗಿರುವ ಬೊಕ್ಕಸವನ್ನು ಮತ್ತಷ್ಟು ಬರಿದು ಮಾಡಲು ದುಂದುವೆಚ್ಚದಲ್ಲಿ ‘ಸಾಧನ ಸಮಾವೇಶ’ ಮಾಡಲು ಹೊರಟ ಜನವಿರೋಧಿ ನಡೆಯನ್ನು ಪ್ರಶ್ನಿಸಿ ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಮಾಧ್ಯಮಗಳ ಮೂಲಕ ಜಾಹಿರಾತು ಬಿಡುಗಡೆ ಮಾಡಿದರೆ ಅದರಿಂದ ವಿಚಲಿತಗೊಂಡು ಮಾನನಷ್ಟ ಮೊಕದ್ದಮೆ ಹೂಡಲು ಹೊರಟಿದೆ. ಇದಕ್ಕೆ ಸರ್ಕಾರದ ವ್ಯವಸ್ಥೆ ಹಾಗೂ ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಇದೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮದವರನ್ನು ಬೆದರಿಸುವ ಕರಾಳ ಅಧಿಸೂಚನೆ ಹೊರಡಿಸಿದೆ. ಕೇವಲ ಜಾಹಿರಾತಿಗೆ ಇಷ್ಟೊಂದು ಹೆದರಿರುವ ಕಾಂಗ್ರೆಸ್ ಸರ್ಕಾರದ ನಡೆ ಪಲಾಯನವಾದ ಹಾಗೂ ‘ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡಂತೆ’ ಎಂಬುದನ್ನು ಪ್ರತಿಬಿಂಬಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಯಾವುದೇ ಬೆದರಿಕೆಗೂ ರಾಜ್ಯ ಬಿಜೆಪಿ ಅಂಜುವ ಪ್ರಶ್ನೆಯೇ ಇಲ್ಲ. ಪೊಲೀಸ್ ಹಾಗೂ ಕಾನೂನಿನ ಹೆಸರಿನಲ್ಲಿ ವಿರೋಧ ಪಕ್ಷಗಳ ಬಾಯಿ ಮುಚ್ಚಿಸಬಹುದು ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನದ ಪರಮಾವಧಿಯಲ್ಲದೇ ಬೇರೆನೂ ಅಲ್ಲ. ನಿಮ್ಮ ಸರ್ವಾಧಿಕಾರಿ ಮನಃಸ್ಥಿತಿಗೆ ಭಟ್ಟಂಗಿಗಳ ಹಾಗೂ ಅವಿವೇಕಿಗಳ ಸಲಹೆಯನ್ನು ಆಧರಿಸಿ, ಮಾನನಷ್ಟ ಮೊಕದ್ದಮೆ ಹೂಡಲು ನಿರ್ಧರಿಸಿರುವುದು ಕೇವಲ ಭಾರತೀಯ ಜನತಾ ಪಾರ್ಟಿ ವಿರುದ್ಧವಷ್ಟೇ ಅಲ್ಲ, ಮಾಧ್ಯಮಗಳ ವಿರುದ್ಧವೂ ಸೇಡು ತೀರಿಸಿಕೊಳ್ಳಲು ಹೊರಟಿರುವುದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿಯ 2ನೇ ಅಧ್ಯಾಯ ಆರಂಭವಾಗಿದೆ, ಅದನ್ನು ಹಿಮ್ಮೆಟ್ಟಿಸುವ ಶಕ್ತಿ ಪ್ರಜಾಪ್ರಭುತ್ವಕ್ಕಿದೆ, ಕರ್ನಾಟಕದ ಜನರಿಗಿದೆ, ವಿರೋಧ ಪಕ್ಷಗಳಿಗಿದೆ, ಮಾಧ್ಯಮಗಳಿಗಿದೆ ಎಂಬುದನ್ನು ಶೀಘ್ರದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಎದುರು ನೋಡಲಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

60 minutes ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 hour ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

4 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

5 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

9 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

13 hours ago