‘ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ- ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯದಿಂದ‌ ಕೇಂದ್ರ ಬಿಜೆಪಿ‌ ಸರ್ಕಾರ ಐಟಿ- ಇಡಿ ದಾಳಿ ನಡೆಸುತ್ತಿದೆ’- ಸಿಎಂ ಸಿದ್ದರಾಮಯ್ಯ

ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿಗಳು ಹಾಗೂ ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐಟಿ- ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ತನ್ನ ದುರುದ್ದೇಶ ಮತ್ತು ಭ್ರಷ್ಟತೆಯನ್ನು ಮುಚ್ಚಿಕೊಳ್ಳುವುದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ, ಈ ಬಗ್ಗೆ ಯಾವುದಾದರೂ ಪುರಾವೆಗಳಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಅವರು ಸ್ವತಂತ್ರರಿದ್ದಾರೆ. ತೆರಿಗೆ ವಂಚಕರ ವಿರುದ್ಧದ ಕ್ರಮಗಳನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

ಗುತ್ತಿಗೆದಾರರು ಖೊಟ್ಟಿ ಖರೀದಿ ರಸೀದಿಗಳು ಮತ್ತು ಉಪಗುತ್ತಿಗೆದಾರರಿಂದ ಅಪ್ರಾಮಾಣಿಕವಾದ ಖರ್ಚುವೆಚ್ಚದ ದಾಖಲೆಗಳ ಮೂಲಕ ಅದಾಯವನ್ನು ಕಡಿಮೆಗೊಳಿಸಿ ತೆರಿಗೆ ವಂಚನೆ ಮಾಡಿರುವುದು ದಾಳಿಯಲ್ಲಿ ಪತ್ತೆಯಾಗಿದೆ ಎಂದು ಐಟಿ ಇಲಾಖೆಯೇ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ರಾಜಕೀಯ ಪಕ್ಷದ ಜೊತೆಗಿನ ವ್ಯವಹಾರದ ಬಗ್ಗೆ ಉಲ್ಲೇಖವನ್ನು ಇಲಾಖೆಯೇ ಮಾಡದೆ ಇರುವಾಗ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎದೆ ಬಡಿದುಕೊಂಡು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಯಾಕೆ? ಇವರದ್ದೇ ಸರ್ಕಾರದ ವರಮಾನ ತೆರಿಗೆ ಇಲಾಖೆಯ ಮೇಲೆಯೂ ಇವರಿಗೆ ನಂಬಿಕೆ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪಂಚರಾಜ್ಯಗಳಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯ ಸೋಲು ಬಹುತೇಕ ಖಾತರಿಯಾಗಿರುವ ಕಾರಣ ಬಿಜೆಪಿಗೆ ಹಿಂದಿನಂತೆ ಹಣ ಸಂಗ್ರಹವಾಗುತ್ತಿಲ್ಲ, ಕರ್ನಾಟಕದಲ್ಲಿ 40% ಕಮಿಷನ್ ನ ಬಹುದೊಡ್ಡ ಮೂಲ ಕೂಡಾ ನಿಂತುಹೋಗಿದೆ. ಇದಕ್ಕಾಗಿ ಶ್ರೀಮಂತ ಉದ್ಯಮಿಗಳು ಮತ್ತು ಗುತ್ತಿಗದಾರರನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಐಟಿ-ಇಡಿ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ

ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಶತಸಿದ್ದ. ತನ್ನ ಸೋಲಿಗೆ ಕಾರಣ ಹೇಳಲು ಬಿಜೆಪಿ ಈಗಲೇ ಕುಂಟುನೆಪಗಳನ್ನು ಹುಡುಕುತ್ತಿದೆ. ಕಾಂಗ್ರೆಸ್ ಪಕ್ಷದ ದುಡ್ಡಿನಬಲದಿಂದಾಗಿ ನಾವು ಸೋತುಹೋದೆವು ಎಂದು ಚುನಾವಣೆಯ ಮರುದಿನ ಬಿಜೆಪಿಯಿಂದ ಹೇಳಿಕೆ ಬಂದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.

ತಮ್ಮ ಚುನಾವಣಾ ರಾಜಕೀಯಕ್ಕಾಗಿ ಯಾವ ಪಕ್ಷ ಹಣ ದೋಚುವುದರಲ್ಲಿ ತೊಡಗಿದೆ ಎನ್ನುವುದು ಚುನಾವಣಾ ಬಾಂಡ್ ಗಳ ಮೂಲಕ ಬಿಜೆಪಿ ಸಂಗ್ರಹಿಸಿದ ಹಣದ ವಿವರವೇ ಸಾಕ್ಷಿಯಾಗಿದೆ. ಮಾರ್ಚ್‌ 2018ರಿಂದ ಜನವರಿ 2023ರ ವರೆಗಿನ ಅವಧಿಯಲ್ಲಿ 12,008 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳು ಮಾರಾಟವಾಗಿದ್ದು ಅದರಲ್ಲಿ ಬಿಜೆಪಿಗೆ ಸೇರಿರುವ ಬಾಂಡ್ ಗಳ ಒಟ್ಟು ಮೌಲ್ಯ 5,272 ಕೋಟಿ ರೂಪಾಯಿ. ಈ ಹಣವನ್ನು ಉದ್ಯಮಿಗಳು ಸ್ವಯಿಚ್ಚೆಯಿಂದ ನೀಡಿದರೇ? ಇಲ್ಲವೇ ಬ್ಲಾಕ್ ಮೇಲ್ ನಡೆಸಲಾಗಿತ್ತೇ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೋಟ್ಯಂತರ ರೂಪಾಯಿ ಲಂಚ ಹೊಡೆಯುತ್ತಿದ್ದಾಗಲೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದಾಗ ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದ ಬಿಜೆಪಿ ನಾಯಕರು ಈಗ ಯಾವುದೋ ಖಾಸಗಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಈ ನೈತಿಕತೆ ಬಿಜೆಪಿಗೆ ಇದೆಯೇ?‌ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿನ ಭ್ರಷ್ಟಾಚಾರದ ಇತಿಹಾಸವನ್ನು ತಿರುವಿಹಾಕಿದರೆ ಪುಟಪುಟಗಳಲ್ಲಿಯೂ ಬಿಜೆಪಿ ನಾಯಕರ ಮುಖಾರವಿಂದಗಳನ್ನು ಕಾಣಬಹುದಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಮಾಜಿ ಶಾಸಕ ಸಂಪಂಗಿಯಿಂದ ಹಿಡಿದು ಇತ್ತೀಚಿನ ಮಾಡಾಳು ವಿರೂಪಾಕ್ಷಪ್ಪನವರ ವರೆಗೆ ಬಿಜೆಪಿ ನಾಯಕರೆಲ್ಲರೂ ಭ‍್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿದವರಾಗಿದ್ದಾರೆ. ಇವರು ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ, ನಗೆಪಾಟಲಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ 40% ಕಮಿಷನ್ ಆರೋಪ ಇದೆ. ಬಿಟ್ ಕಾಯಿನ್ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಅರಗ ಜ್ಞಾನೇಂದ್ರ ಷಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾರೆ. ಚುನಾವಣಾ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಿ.ಎಲ್.ಸಂತೋಷ್, ಸುನೀಲ್ ಕುಮಾರ್ ಮತ್ತು ಸಿ,ಟಿ.ರವಿ ಅವರ ಹೆಸರುಗಳನ್ನು ಆರೋಪಿಗಳೇ ಉಲ್ಲೇಖಿಸಿದ್ದಾರೆ. ಇವರೆಲ್ಲರೂ ಸೇರಿ ನಮ್ಮ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತು ಅವರ ಮಗ ಕೂಡಾ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆಯಾಗಿ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

ಕಾರ್ಪೊರೆಟ್‌ ಭ್ರಷ್ಟಾಚಾರದ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ದೇಶವನ್ನೇ ಅದಾನಿ ಕೈಗೆ ಒತ್ತೆಯಿಟ್ಟಿರುವ ಈ ಬಿಜೆಪಿಗರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದೊಡ್ಡ ಕುಚೋದ್ಯ! ಅದಾನಿ ಎನ್ನುವ ಉದ್ಯಮಿಯ ಒಂದೊಂದು ಹಗರಣಗಳು ಲಕ್ಷ ಕೋಟಿಗಳನ್ನು ದಾಟುತ್ತಿವೆ! ಸಾವಿರ ಕೋಟಿಗಳ ಅವ್ಯವಹಾರಕ್ಕೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ಕೇಳಿರುವ ನೂರು ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಹೇಳಲು ಬಿಜೆಪಿಯ ನಾಯಕರಿಗೆ, ವಿಶೇಷವಾಗಿ ಮೋದಿಯವರಿಗೆ ಈವರೆಗೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

11 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

17 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

19 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

22 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago