2023ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ.
ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ/ನಾಟಿ ವಿಫಲಗೊಂಡಲ್ಲಿ ವಿಮಾ ರಕ್ಷಣೆ ಒದಗಿಸುವುದು. ಹಾಲಿ ಇರುವ ಬೆಳೆಗಳಿಗೆ (ಬಿತ್ತನೆಯಿಂದ ಕಟಾವಿನ ಹಂತದವರೆಗೆ) ಬರ/ಶುಷ್ಕ ಪರಿಸ್ಥಿತಿ, ನೆರೆ/ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ (14 ದಿನಗಳವರೆಗೆ) ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಹಾಗೂ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೆ ನಷ್ಟ ಪರಿಹಾರವನ್ನು ಒದಗಿಸುವುದು ಯೋಜನೆಯ ಪ್ರಮುಖ ಅಂಶಗಳಾಗಿರುತ್ತವೆ.
ಆಯಾ ತಾಲ್ಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತ್/ ನಗರ ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತೆರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.
ಟೊಮ್ಯಾಟೋ ಮತ್ತು ತೊಗರಿ ಬೆಳೆಗೆ ಜುಲೈ 15, ನೆಲಗಡಲೆ ಬೆಳೆಗೆ ಜುಲೈ 31 ಮತ್ತು ಉಳಿದಂತೆ ರಾಗಿ, ಭತ್ತ, ಮುಸುಕಿನ ಜೋಳ ಮತ್ತು ಹುರುಳಿ ಬೆಳೆಗಳಿಗೆ ಆಗಸ್ಟ್ 16 ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ.
ಅಂತಿಮ ದಿನದವರೆಗೆ ಕಾಯದೆ ರೈತರು ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಬ್ಯಾಂಕ್ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸುವುದು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ.
ಆಯ್ಕೆಯಾಗಿರುವ ವಿಮಾ ಸಂಸ್ಥೆ ರಿಲಾಯನ್ಸ್ ಜನರಲ್ ಇನ್ಯೂರನ್ಸ್ ಕಂಪನಿ, ಟೋಲ್ ಫ್ರೀ ನಂ (1800 102 4088). ವಿಮಾ ಸಂಸ್ಥೆಯ ಜಿಲ್ಲಾ ಮತ್ತು ತಾಲ್ಲೂಕು ಪ್ರತಿನಿಧಿಗಳ ದೂರವಾಣಿ ಸಂಖ್ಯೆ: ಜಿಲ್ಲಾ ಪ್ರತಿನಿಧಿ ಅಶೋಕ್ ಕುಮಾರ್ ರೆಡ್ಡಿ(ಮೊ.ಸಂ.:8655821851), ತಾಲ್ಲೂಕು ಪ್ರತಿನಿಧಿಗಳು, ದೇವನಹಳ್ಳಿ-ಕಾಂತಕುಮಾರ್(9341627547),
ದೊಡ್ಡಬಳ್ಳಾಪುರ-ರವಿಶಂಕರ್(9620838348), ಹೊಸಕೋಟೆ-ಶ್ರೀನಿವಾಸ್ ಮೂರ್ತಿ(9900450778), ನೆಲಮಂಗಲ-ಕುಮಾರಸ್ವಾಮಿ (8618812813).
ವಿಶೇಷ ಸೂಚನೆ: ರೈತರು ಅಂದಾಜು/ಅಪೇಕ್ಷಿತ ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲೆ ವಿಮೆಗೆ ನೋಂದಾಯಿಸಿಕೊಳ್ಳಬಹುದು ಹಾಗೂ ಬಿತ್ತನೆ ದೃಢೀಕರಣದ ಅವಶ್ಯಕತೆ ಇರುವುದಿಲ್ಲ. ಬೆಳೆ ವಿಮೆಗೆ ನೋಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗಧಿಪಡಿಸಿದ ಅವಧಿಯೊಳಗಾಗಿ ತಾವು ನೋಂದಾಯಿಸಿದ ಕೇಂದ್ರಗಳಿಗೆ ತೆರಳಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಡಾ.ಲಲಿತರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.