ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ. ನಾರಾಯಣಗೌಡ) ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಮಾತನಾಡಿ, ರಾಜ್ಯ ಸರ್ಕಾರವು ಎಸ್‌ಎಸ್‌ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಗುಡುಗಿದರು.

ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ತರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಜಾಗೊಳಿಸಬೇಕೆಂದು ಆಗ್ರಹಿಸುತ್ತೇವೆ ಎಂದರು.

ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ಸುರಕ್ಷಿತ ಸ್ವರ್ಗವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರ ಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ ಎಂಬುದು ಸ್ಪಷ್ಟ. ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ನಾವು ಕಾಯುತ್ತಿದ್ದೇವೆ ಎಂದು ಆಗ್ರಹಿಸಿದರು.

ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು..

ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ. ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲಿ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಡಾ.ಕೆ ಅನುರಾಧಾ ಅವರಿಗೆ ಮನವಿ‌ ಪತ್ರ ಸಲ್ಲಿಸುವ ಮೂಲಕ ಕೇಂದ್ರಕ್ಕೆ ಮನವಿ ಮಾಡಿದರು.

ಈ ವೇಳೆ ಕರವೇ ಜಿಲ್ಲಾ ಉಪಾಧ್ಯಕ್ಷ ಉಪಾಧ್ಯಕ್ಷ ಸೇರಿದಂತೆ ಅನೇಕರು ಇದ್ದರು..

Ramesh Babu

Journalist

Recent Posts

ಭಾರೀ ಸಿಡಿಲಿಗೆ ಎರಡು ಸೀಮೆ ಹಸುಗಳ ಸಾವು

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು…

10 hours ago

56,432 ಹುದ್ದೆಗಳ ನೇರ ನೇಮಕಾತಿಗಾಗಿ ತುರ್ತು ಕ್ರಮ- ಸಿಎಂ ಸಿದ್ದರಾಮಯ್ಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…

11 hours ago

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ

ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…

11 hours ago

ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…

22 hours ago

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

2 days ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

2 days ago