ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಸಫಲರಾಗಿದ್ದಾರೆ.
ನಾಗರಾಜು (47) ಮತ್ತು ಶ್ರೀನಿವಾಸಲು (39) ಕಳೆದ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಂಧಿತ ಆರೋಪಿಗಳಾಗಿದ್ದಾರೆ.
ಆರೋಪಿಗಳಿಬ್ಬರೂ 2004ರಲ್ಲಿ ತಾಲ್ಲೂಕಿನ ಕೈಗಾರಿಕಾ ಪ್ರದೇಶ ಬಾಶೆಟ್ಟಿಹಳ್ಳಿ ಬಳಿಯ ಟ್ರಾನ್ಸ್ ಎಲೆಕ್ಟ್ರಿಕ್ ಮೋಟರ್ ಕಂಪನಿಯ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಗಳಾಗಿ ಕೆಲಸ ಮಾಡುತ್ತಿದ್ದರು. ಕಂಪನಿಗೆ ಬೀಗ ಹಾಕಿದ್ದ ಸಮಯದಲ್ಲಿ ವಾಚ್ ಮನ್ ಗಳಾಗಿದ್ದ ಇವರಿಬ್ಬರು ಕಂಪನಿಯಲ್ಲಿನ ಮೋಟರ್ಗಳನ್ನು ಕಳವು ಮಾಡಿದಲ್ಲದೇ ಮಾರಾಟ ಮಾಡಿ ಸಿಕ್ಕಿ ಬಿದ್ದಿದ್ದರು.
ನಾಗರಾಜು (26) ಮತ್ತು ಶ್ರೀನಿವಾಸಲು (19) ಇಬ್ಬರ ಮೇಲೆ ಮೋಟರ್ ಕಳ್ಳತನದ ಆರೋಪದ ಮೇಲೆ ಕ್ರೈಂ ನಂ 95/2004 ರಂತೆ ಪ್ರಕರಣ ದಾಖಲಾಗಿ ಮೂರು ತಿಂಗಳ ಕಾಲ ಜೈಲಿನಲ್ಲಿದ್ದ ಗೆಳೆಯರು ನಂತರ ಜಾಮೀನಿನ ಮೇಲೆ ಹೊರಗೆ ಬಂದಿದ್ದರು.
ಆರೋಪಿಗಳ ಪರ ವಾದ ಮಾಡಿದ್ದ ವಕೀಲ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿಗಳಿಗೆ ಸಂಪೂರ್ಣ ಮಾಹಿತಿ ನೀಡದೆ ನಿಮ್ಮ ಮೇಲಿನ ಪ್ರಕರಣ ವಜಾ ಆಗಿದೆ ಎಂದು ಹೇಳಿದ್ದರು. ಹೀಗಾಗಿ ನಾವು ಈ ವಿಚಾರವನ್ನು ಮರೆತಿದ್ದೆವು ಎಂದು ಪೊಲೀಸ್ ವಿಚಾರಣೆಯಲ್ಲಿ ಆರೋಪಿಗಳು ತಿಳಿಸಿದ್ದಾರೆ.
ಇಪ್ಪತ್ತು ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಗಳ ಮೇಲೆ ದೊಡ್ಡಬಳ್ಳಾಪುರದ ಜೆಎಂಎಫ್ಸಿ ನ್ಯಾಯಾಲಯ ಎಲ್ಆರ್ಪಿ (ತಲೆ ಮರೆಸಿಕೊಂಡ ಆರೋಪಿಗಳು) ಗಳು ಎಂದು ನಿರ್ಧಾರ ಮಾಡಿತ್ತು. ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಅವರ ನೇತೃತ್ವದಲ್ಲಿ ತನಿಖೆಗೆ ಇಳಿದ ತಂಡ ಆರೋಪಿಗಳನ್ನು ಆಂಧ್ರಪ್ರದೇಶದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ಆರೋಪಿ ನಾಗರಾಜು
ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ, ಪುಟ್ಟಪರ್ತಿ ಎರಡು ಪೊಲೀಸ್ ಠಾಣೆಗಳಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡಿದ್ದ ನಾಗರಾಜು, ನಂತರ ಗಂಡ ಹೆಂಡತಿ ನಡುವೆ ಜಗಳವಾಗಿ ಕೆಲಸ ಬಿಟ್ಟು, ಧರ್ಮಾವರಂ ಜಿಲ್ಲೆ ಸಿದ್ದರಾಮಪುರಂ ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ.
ಉಸ್ಮಾನಿಯಾ ವಿವಿಯಲ್ಲಿ ಎಂಬಿಎ ಪದವೀಧರ ಆರೋಪಿ ಶ್ರೀನಿವಾಸಲು
ಬಂಧನವಾಗಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಗೆ ಬಂದ ಮತ್ತೊಬ್ಬ ಆರೋಪಿ ಶ್ರೀನಿವಾಸಲು ಆಂಧ್ರಪ್ರದೇಶದ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಎಂಬಿಎ ಜೊತೆಗೆ ಮಾರ್ಕೆಟಿಂಗ್ ಗ್ರಾಜ್ಯುಯೆಷನ್ ಪಡೆದು ಟಾಟಾ ಕಂಪನಿಯಲ್ಲಿ ಮಾರ್ಕೆಟಿಂಗ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ.
ಒಮ್ಮೆ ಜೈಲಿಗೆ ಹೋಗಿ ಬಂದ ಬಳಿಕ ಬುದ್ಧಿ ಕಲಿತಿದ್ದ ಇಬ್ಬರೂ ಆರೋಪಿಗಳು ಮತ್ತೆ ಕೆಟ್ಟದಾರಿ ಹಿಡಿಯದೆ ಓದಿ ವಿದ್ಯಾಭ್ಯಾಸ ಮಾಡಿ ಉನ್ನತ ಶಿಕ್ಷಣ ಪಡೆದು ಜೀವನ ನಡೆಸುತ್ತಿದ್ದರು. ಆದರೆ, ಮಾಡಿದ ಪಾಪ ಈಗಲೇ ಅನುಭವಿಸಬೇಕು ಎಂಬ ನಾಣ್ಣುಡಿಯಂತೆ ಮಾಡಿದ ತಪ್ಪಿಗೆ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲಾಗಲಿಲ್ಲ.
ಈ ವೇಳೆ ಮುಖ್ಯಪೇದೆ ಗೋವಿಂದರಾಜು, ಪೇದೆ ನಾಗೇಶ್ ಇದ್ದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…