
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮಾತನಾಡಿದ ಪ್ರಮುಖ ಅಂಶಗಳು ಇಲ್ಲಿದೆ ಓದಿ…
ಕಸ್ತೂರಿ ರಂಗನ್ ವರದಿ ಮತ್ತು ಭೌತಿಕ ಸಮೀಕ್ಷೆ ಕುರಿತು:
• ಕಸ್ತೂರಿ ರಂಗನ್ ಸಮಿತಿಯು ಉಪಗ್ರಹಗಳ ಮೂಲಕ ಜಿಪಿಎಸ್ ಸಮೀಕ್ಷೆ ಮಾಡಿದ್ದು, ಕಾಫಿ, ಅಡಿಕೆ, ರಬ್ಬರ್ ತೋಟವನ್ನು ಕಾಡು ಎಂದು ಪರಿಗಣಿಸಿದೆ; ಈ ವರದಿಯಿಂದ ಜಿಲ್ಲೆಯಲ್ಲಿ 138 ಹಳ್ಳಿಗಳು ಹಾಗೂ ರಾಜ್ಯದಲ್ಲಿ 1,449 ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಅಧಿಸೂಚನೆ ಮಾಡಿದ್ದು, ರೈತರು ತೀವ್ರ ಆತಂಕದಲ್ಲಿದ್ದಾರೆ.
• ಕೇರಳದಲ್ಲಿ ಉಮರ್ ಸಮಿತಿ ಎಂಬ ಉನ್ನತ ಮಟ್ಟದ ಅಧಿಕಾರಿ ಸಮಿತಿ ಮೂಲಕ ಭೌತಿಕ ಸಮೀಕ್ಷೆ ನಡೆಸಿ, ನಾಡು-ಕಾಡನ್ನು ಬೇರ್ಪಡಿಸಿ 5,000 ಚ.ಕಿ.ಮೀ ಪ್ರದೇಶವನ್ನು ವರದಿಯಿಂದ ಮುಕ್ತಗೊಳಿಸಲಾಗಿದೆ; ಅದೇ ಮಾದರಿಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸುವಂತೆ ರೈತ ಮುಖಂಡರು ಸಲಹೆ ನೀಡಿದ್ದಾರೆ.
• 2022ರಲ್ಲಿ ಸಂಜಯ್ ಕುಮಾರ್ ಎಂಬ ಅಧಿಕಾರಿಯಿಂದ ವರದಿ ನೀಡಲು 2027ರವರೆಗೆ ಕಾಲಾವಕಾಶ ನೀಡಿರುವ ವಿಚಾರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು; ಅಗತ್ಯ ಬಿದ್ದರೆ ಕೇಂದ್ರಕ್ಕೆ ಪ್ರತ್ಯೇಕ ನಿಯೋಗ ಕರೆದೊಯ್ಯಲಾಗುವುದು.
• ಈ ವರದಿಗೆ ಸಂಬಂಧಿಸಿದಂತೆ ಈಗ 7ನೇ ಬಾರಿಗೆ ಅಧಿಸೂಚನೆ ಹೊರಡಿಸಿದ್ದು, ಇದು ಸಾಡೇಸಾತಿಯಂತಾಗಿದೆ; ಮಲೆನಾಡು ಹಾಗೂ ಕರಾವಳಿ ಭಾಗವನ್ನು ವಿಶೇಷ ಕೃಷಿ ವಲಯ ಎಂದು ಘೋಷಿಸಬೇಕು ಮತ್ತು ಮೀಸಲು ಜಲ ಪ್ರಮಾಣ ಘೋಷಣೆ ಮಾಡಬೇಕು ಎಂಬ ಬೇಡಿಕೆಗಳಿದ್ದು, ಈ ಸಮಸ್ಯೆಗಳನ್ನು ನಿವಾರಣೆ ಮಾಡುವ ವಿಶ್ವಾಸವಿದೆ.
ಸರ್ಕಾರದ ಮುಂದಿನ ನಡೆ ಹಾಗೂ ಅಧಿವೇಶನದ ತೀರ್ಮಾನ:
• ಪರಿಸರ ಸೂಕ್ಷ್ಮ ವಲಯ ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು, ರಾಜ್ಯದ ಹಿತಕ್ಕಾಗಿ ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡಲು ನಮ್ಮ ಸರ್ಕಾರ ಕೆಲಸ ಮಾಡಲಿದೆ; ಈ ಕುರಿತು ಅಂತಿಮ ತೀರ್ಮಾನಕ್ಕೆ ಬರುವ ಮುನ್ನ ಜನರ ಅಭಿಪ್ರಾಯ ಸಂಗ್ರಹಿಸಲು ಬಂದಿರುವೆ.
• ವಿರೋಧ ಪಕ್ಷದವರು ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ನೀಡದ ಕಾರಣ ಶಾಸಕರ ಜೊತೆ ಚರ್ಚಿಸಲಾಗಿದ್ದು, ಕಸ್ತೂರಿ ರಂಗನ್ ವರದಿ ಬಗ್ಗೆ ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಜನರ ಅಭಿಪ್ರಾಯ ಪಡೆದು ರೈತರ ಬದುಕು ಉಳಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ.
• ರಾಜ್ಯದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕೇಂದ್ರದ ಮಾರ್ಗಸೂಚಿಯಂತೆ ಉಳಿದ ಕಡೆ ಅಧ್ಯಯನ ನಡೆಯುತ್ತಿದೆ; ಒಂದೆರಡು ದಿನಗಳಲ್ಲಿ ಮತ್ತೊಂದು ಪಟ್ಟಿ ಬಿಡುಗಡೆಯಾಗಲಿದ್ದು, ವಿಶೇಷ ಅಧಿವೇಶನದಲ್ಲಿ ಬರ ಹಾಗೂ ಕಸ್ತೂರಿ ರಂಗನ್ ವರದಿ ಬಗ್ಗೆ ವಿಸ್ತೃತ ಚರ್ಚೆ ಮಾಡಲಾಗುವುದು.
ಅರಣ್ಯವಾಸಿಗಳ ಹಕ್ಕು ಮತ್ತು ಭೂಮಿ ಒದಗಿಸುವಿಕೆ:
• ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ರೈತರಿಗೆ ಯಾವುದೇ ರೀತಿ ತೊಂದರೆ ಕೊಡಬಾರದು ಮತ್ತು ರೈತರು ಈಗಾಗಲೇ ಉಳುಮೆ ಮಾಡುತ್ತಿರುವ ಜಮೀನನ್ನು ಕಾಪಾಡಿಕೊಳ್ಳಬೇಕು; ಆದರೆ ಹೊಸದಾಗಿ ಯಾರೂ ಒತ್ತುವರಿ ಮಾಡಬಾರದು, ಮಾಡಿದರೆ ಅವಕಾಶ ನೀಡುವುದಿಲ್ಲ.
• ನಮ್ಮ ಹಿಂದಿನ ಸರ್ಕಾರಗಳು ಉಳುವವನಿಗೆ ಭೂಮಿ, ಬಗರ್ ಹುಕುಂ ಜಾರಿಗೆ ತಂದಿದ್ದು, ಬಾಕಿ ಇರುವ ಅರ್ಜಿ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು; ಕಾಫಿ ಲೀಸ್, ಫಾರಂ 57 ವಿಚಾರ ಹಾಗೂ ಅರಣ್ಯ ಹಕ್ಕು ಕಾಯ್ದೆಯಲ್ಲಿ ಎಲ್ಲರಿಗೂ 25 ವರ್ಷ ನಿಗದಿ ಮಾಡಲು ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.
ಸ್ಥಳೀಯ ಅಭಿವೃದ್ಧಿ ಹಾಗೂ ಸಚಿವ ಸಂಪುಟ ಸಭೆ:
• ನನ್ನ ಕಷ್ಟಕಾಲದಲ್ಲಿ ಬೆನ್ನಿಗೆ ನಿಂತು, ಅಧಿಕಾರ ಕೊಟ್ಟು ಶಕ್ತಿ ನೀಡಿದ್ದೀರಿ; ದೇವರು ಕೊಟ್ಟಿರುವ ಅವಕಾಶದಲ್ಲಿ ನಿಮ್ಮ ಸೇವೆಗೆ ಸಂಕಲ್ಪ ಮಾಡಿದ್ದೇನೆ.
• ಮುಂದಿನ ದಿನಗಳಲ್ಲಿ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು; ಎಲ್ಲಾ ಸಮಸ್ಯೆಗಳು ಬಗೆಹರಿಯದಿದ್ದರೂ, ಪಿಂಚಣಿ ಹಾಗೂ ನಿವೇಶನ ರಹಿತರ ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಮುಂದಾಗುತ್ತೇವೆ ಎಂದು ಸಿಎಂ ಹೇಳಿದ್ದಾರೆ.