ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ- ಸಿಎಂ‌ ಸಿದ್ದರಾಮಯ್ಯ

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಮಾತ್ರ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರದೆ ಮುಂದಿನ‌ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.

ಸಿಸಿಬಿ ಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ, ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.

ಈ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್‌ ಮೋಹನ್ ಸೇರಿದಂತೆ ಇತರರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *