ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ ಸೇವೆಯ ಸದುಪಯೋಗ ಪಡೆಯಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ. ಮನ್ಸುಖ್ ಮಾಂಡವೀಯ ಅವರು ಹೇಳಿದರು.

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 100 ಹಾಸಿಗೆ ಸಾಮರ್ಥ್ಯದ ಇಎಸ್ಐಸಿ ಆಸ್ಪತ್ರೆ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯೇ ಕೇಂದ್ರ ಸರ್ಕಾರದ ಮೂಲಮಂತ್ರವಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಸುಮಾರು 101 ಕೋಟಿ ರೂ. ವೆಚ್ಚದಲ್ಲಿ ಇಎಸ್ಐಸಿ ಆಸ್ಪತ್ರೆ ಕಟ್ಟಡ ನಿರ್ಮಿಸಲಾಗಿದೆ. ಜತೆಗೆ ಬಳ್ಳಾರಿಯಲ್ಲಿ ಸುಮಾರು 1.5 ಲಕ್ಷ ಜವಳಿ ಕಾರ್ಮಿಕರಿಗಾಗಿ ₹150 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಇಎಸ್‌ಐಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕೇಂದ್ರ ಸರ್ಕಾರವು ಕಾರ್ಮಿಕರ ಘನತೆ ಮತ್ತು ಅವರಿಗೆ ಸಿಗಬೇಕಾದ ಹಕ್ಕುಗಳ ಬಗ್ಗೆ ಅಚಲ ಬದ್ಧತೆಯನ್ನು ಹೊಂದಿದೆ ಎಂದರು.

ಕೇಂದ್ರ ಸರ್ಕಾರವು ಇಎಸ್‌ಐಸಿ ಆಸ್ಪತ್ರೆ ಮೂಲಕ
ಕಾರ್ಮಿಕರಿಗೆ ಆರ್ಥಿಕ ಹೊರೆ ತಗ್ಗಿಸಿ ಗುಣಮಟ್ಟದ ಉಚಿತ ಆರೋಗ್ಯ ಸೇವೆ ಹಾಗೂ ಹೊಸ ಕಾರ್ಮಿಕ ಸಂಹಿತೆಯಡಿ ಲಿಂಗ ತಾರತಮ್ಯವಿಲ್ಲದೇ ಸಮಾನ ಕೆಲಸಕ್ಕೆ ಸಮಾನ ವೇತನ ಸಹ‌ ನೀಡುತ್ತಿದ್ದೇವೆ ತಿಳಿಸಿದರು.

*ದೇಶಾದಲ್ಲಿ 20 ಇಎಸ್ಐಸಿ ಮೆಡಿಕಲ್ ಕಾಲೇಜು ಸ್ಥಾಪನೆ*

ದೇಶಾದ್ಯಂತ 20 ಇಎಸ್‌ಐಸಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವ ಮೂಲಕ ಕಾರ್ಮಿಕರ ಕುಟುಂಬಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಚಿಕಿತ್ಸೆಯ ಭರವಸೆ ನೀಡಲಾಗಿದೆ. ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಮಿಕರ ಮಕ್ಕಳಿಗಾಗಿ ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಜಾರಿಗೆ ತರಲಾಗಿರುವ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳು ಖಾಸಗಿ ವಲಯದ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತೆ ಮತ್ತು ನೇಮಕಾತಿ ಪತ್ರದ ಖಾತರಿ ಒದಗಿಸುತ್ತವೆ. ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ 40 ವರ್ಷ ದಾಟಿದ ಪ್ರತಿಯೊಬ್ಬ ಕಾರ್ಮಿಕನಿಗೂ ವಾರ್ಷಿಕ ಉಚಿತ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಇದರ ಉದ್ದೇಶ ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಕಾರ್ಮಿಕರ ಜೀವ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಸಚಿವರು ಹೇಳಿದರು.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಮಾತನಾಡಿ, ಇಂದು ಸುಮಾರು 101 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಇಎಸ್ಐಸಿ ಆಸ್ಪತ್ರೆ ನಿರ್ಮಿಸಲಾಗಿದ್ದು, ದೊಡ್ಡಬಳ್ಳಾಪುರ ಭಾಗದಲ್ಲಿ ಕಾರ್ಮಿಕರ ಸಂಖ್ಯೆ ಹೆಚ್ಚಿದ್ದು, ಈ ಹಿಂದೆ ಉತ್ತಮ ಚಿಕಿತ್ಸೆಗಾಗಿ ಬೆಂಗಳೂರಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಈಗ ಕಾರ್ಮಿಕರಿಗೆ ಇಲ್ಲಿಯೇ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ದೊರೆಯಲಿದೆ. ಪ್ರಸ್ತುತ ಈ ಆಸ್ಪತ್ರೆಗೆ 9 ಜನ ತಜ್ಞ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸದ್ಯಕ್ಕೆ ಇದು ರಾಜಾಜಿನಗರ ಆಸ್ಪತ್ರೆಯ ಮೇಲ್ವಿಚಾರಣೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿದೆ ಎಂದರು.

ದೇಶಾದ್ಯಂತ ಇರುವ 15 ಕೋಟಿ ಕಾರ್ಮಿಕರು ಮತ್ತು ಅವರ ಕುಟುಂಬದವರಿಗೆ ಗುಣಮಟ್ಟದ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ದೇಶದ ಇಎಸ್ಐಸಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸ್ತುತ 1,550 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅದರಲ್ಲಿ ವಿಶೇಷವಾಗಿ ಕಾರ್ಮಿಕರ ಮಕ್ಕಳಿಗಾಗಿ 702 ಸೀಟುಗಳನ್ನು ಮೀಸಲಿಡಲಾಗಿದೆ. ಮುಂಬರುವ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ ನಿರ್ವಹಿಸಲ್ಪಡುವ ಇಂತಹ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸಚಿವರು ತಿಳಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಮತಕ್ಷೇತದ ಸಂಸದರಾದ ಡಾ. ಕೆ.ಸುಧಾಕರ ಅವರು ಮಾತನಾಡಿ, ಇಎಸ್ಐಸಿ ಆಸ್ಪತ್ರೆಯು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸುತ್ತಿದೆ. ದೊಡ್ಡಬಳ್ಳಾಪುರದ ಇಎಸ್ಐಸಿ ಆಸ್ಪತ್ರೆಯು ಐದು ಎಕರೆ ವಿಶಾಲವಾದ ಜಾಗದಲ್ಲಿ ನಿರ್ಮಾಣವಾಗಿದ್ದು, ಕಾರ್ಮಿಕರಿಗೆ ಗುಣಮಟ್ಟದ ವೈದ್ಯಕೀಯ ಒದಗಿಸಲಿದೆ. ಈ ಭಾಗದಲ್ಲಿ 5 ಲಕ್ಷ ಕಾರ್ಮಿಕರು ಇದ್ದು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಜಿಲ್ಲೆಯ ಕಾರ್ಮಿಕರು ಸಹ ವೈದ್ಯಕೀಯ ಸೇವೆ ಪಡೆಯಲು ಸಹಕಾರಿಯಾಗಲಿದೆ ಎಂದರು.

ವೈದ್ಯರು ದಯಾ ಶಕ್ತಿಯಿಂದ ಕಾರ್ಮಿಕ ವರ್ಗಕ್ಕೆ ಅನಾರೋಗ್ಯ ವಾಸಿ ಮಾಡಿ ಆರೋಗ್ಯ ಸೇವೆ ಒದಗಿಸುವ ಮೂಲಕ ಕಾರ್ಮಿಕರ
ಕಣ್ಣಿರು ಒರೆಸುವ ಒಳ್ಳೆಯ ಸೇವಾ ಕೆಲಸ ಆಗಬೇಕು ಎಂದು ಹೇಳಿದರು.

ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾರ್ಮಿಕರ ಬಹುದಿನಗಳ ಕನಸು ಇಂದು ನನಸಾಗುತ್ತಿದೆ. ಇಲ್ಲಿ ನೂರಾರು ಕಾರ್ಖಾನೆಗಳು, ಕಂಪನಿ ಸ್ಥಾಪನೆಯಾಗಿದ್ದು, ಅವುಗಳಲ್ಲಿ ಕೆಲಸ ಮಾಡುತ್ತಿರುವ ಲಕ್ಷಾಂತರ ಕಾರ್ಮಿಕರಿಗೆ ಇಎಸ್ಐಸಿ ಆಸ್ಪತ್ರೆಯು ವೈದ್ಯಕೀಯ ಸೇವೆಗೆ ಅನುಕೂಲವಾಗಲಿದೆ. ಅದರಲ್ಲೂ ದೂರದ ರಾಜ್ಯಗಳು, ಜಿಲ್ಲೆಗಳಿಂದ ವಲಸೆ ಕಾರ್ಮಿಕರಿಗಂತು ಸಹಕಾರಿಯಾಗಲಿದೆ ಎಂದು ಹೇಳಿದರು.

ಇದೇ ವೇಳೆ ವರ್ಚುವಲ್ ಮೂಲಕ ಬಳ್ಳಾರಿಯಲ್ಲಿ ನಿರ್ಮಾಣಗೊಳ್ಳಲಿರುವ 100 ಹಾಸಿಗೆಗಳ ಇ.ಎಸ್.ಐ.ಸಿ ಆಸ್ಪತ್ರೆಗೆ ಶಂಕುಸ್ಥಾಪನೆಯನ್ನು ನೆರವೇರಿಸಿದರು‌.

ಕಾರ್ಯಕ್ರಮದಲ್ಲಿ ಇ.ಎಸ್.ಐ.ಸಿ. ಯೋಜನೆಯಡಿ ಅವಲಂಬಿತ ಭತ್ಯೆ, ಶಾಶ್ವತ ಅಂಗವೈಕಲ್ಯ ಭತ್ಯೆ, ಮಾತೃತ್ವ ಭತ್ಯೆಯ ಫಲಾನುಭವಿಗಳಿಗೆ ನಗದು ಸೌಲಭ್ಯದ ಚೆಕ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಆಯುಕ್ತರಾದ ಡಾ.ಆರ್ ಶ್ರೀನಿವಾಸ್, ಬಾಶೇಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರೇಮ ಕುಮಾರ್, ಇಎಸ್ಐಸಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಗಳು, ಗಣ್ಯರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

7 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

14 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

15 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago