ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ.

ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ ನಡೆದ ರಸ್ತೆ ಅಪಘಾತಗಳು ಮತ್ತು ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡ ದುರಂತ ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿವೆ.

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್‌ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಧರ್ಮವರಂ ಮೂಲದ ಕೆ. ಜಯಪ್ರಕಾಶ್ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ಸವಾರ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ–48ರ ನವಯುಗ ಟೋಲ್ ಸಮೀಪ ನಾಯಿ ಅಡ್ಡ ಬಂದ ಕಾರಣ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಈ ವೇಳೆ ರಸ್ತೆಗೆ ಬಿದ್ದಿದ್ದ ತುಮಕೂರು ಮೂಲದ ರಂಜನ್ ಕುಮಾರ್ (27) ಅವರ ಮೇಲೆ ಕೆಎಸ್‌ಆರ್‌ಟಿಸಿ ಬಸ್ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪ ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಉದ್ಯೋಗ ಸಂದರ್ಶನಕ್ಕೆ ತೆರಳುತ್ತಿದ್ದ ಮೋನಿಷಾ (21) ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇನ್ನೊಂದು ಘಟನೆಯಲ್ಲಿ, ಹೊಸಕೋಟೆ ಸಮೀಪದ ದೊಡ್ಡಹುಲ್ಲೂರು ಬಳಿ ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಮರ್ಸಿಡಿಸ್ ಬೆಂಜ್ ಕಾರು ಅಪಘಾತಕ್ಕೀಡಾಗಿ ಕಾರಿನಲ್ಲಿದ್ದ ಯುವತಿ ಶಹಜಿಯಾ ಶೇಖ್(28) ಮತ್ತು ಚಾಲಕ ರಿಜ್ವಾನ್(35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ 10 ವರ್ಷದ ದಕ್ಷಾ ಹಾಗೂ 4 ವರ್ಷದ ಧನುಷ್ ಮೃತಪಟ್ಟಿದ್ದಾರೆ. ಆಟವಾಡಲು ತೆರಳಿದ್ದ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಹೊಂಡಕ್ಕೆ ಸಮರ್ಪಕ ಭದ್ರತೆ ಕಲ್ಪಿಸದ ಆರೋಪದಡಿ ಮಾಲೀಕನ ಮೇಲೆ ಪ್ರಕರಣ ದಾಖಲಾಗಿದೆ.

ಒಟ್ಟಾರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದ ಈ ದುರ್ಘಟನೆಗಳಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

2 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

23 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago