ಕುಸುಮ್-ಸಿ ಯೋಜನೆ: ನಾಳೆ ಗೌರಿಬಿದನೂರಿನಲ್ಲಿ ಉದ್ಘಾಟನೆ- ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ ಐಪಿ ಸೆಟ್‌ಗಳಿಗೆ ವಿದ್ಯುತ್ – ಸಚಿವ ಕೆ.ಜೆ.ಜಾರ್ಜ್‌

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ್‌ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,” ಎಂದರು.

“ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ಗಳ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ಫರ್ಮರ್‌ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ,” ಎಂದು ಹೇಳಿದರು.

“ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.

*ನಮ್ಮ ಸರ್ಕಾರ ಬಂದ ಮೇಲೆ ಕುಸುಮ್-ಸಿ ಜಾರಿ*:

“ಕುಸುಮ್ – ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು. ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ್ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್‌ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

“ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6,19,000 (6 ಲಕ್ಷ 19 ಸಾವಿರ) ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 200 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮರ್ಥ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು,” ಎಂದು ಮಾಹಿತಿ ನೀಡಿದರು.

“ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ಗಳ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,” ಎಂದರು.

“ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,” ಎಂದು ಹೇಳಿದರು.

ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ್ , ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

7 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

17 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

18 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago