ಕುಸುಮ್-ಸಿ ಯೋಜನೆ: ನಾಳೆ ಗೌರಿಬಿದನೂರಿನಲ್ಲಿ ಉದ್ಘಾಟನೆ- ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ ಐಪಿ ಸೆಟ್‌ಗಳಿಗೆ ವಿದ್ಯುತ್ – ಸಚಿವ ಕೆ.ಜೆ.ಜಾರ್ಜ್‌

ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ್‌ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,” ಎಂದರು.

“ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ಗಳ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್‌ಫರ್ಮರ್‌ಗಳ ಮೇಲಿನ ಹೊರೆಯೂ ಇದರಿಂದ ತಗ್ಗುತ್ತದೆ,” ಎಂದು ಹೇಳಿದರು.

“ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿ ಗ್ರಾಮದ ಸುಮಾರು 60 ಎಕರೆ ಪ್ರದೇಶದಲ್ಲಿ 20 ಮೆ.ವ್ಯಾ. ಸಾಮರ್ಥ್ಯದಲ್ಲಿ ಸೋಲಾರ್ ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾಗಿರುವ ಅತಿ ದೊಡ್ಡ ಘಟಕವಿದು. ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆಯನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ,” ಎಂದು ವಿವರಿಸಿದರು.

*ನಮ್ಮ ಸರ್ಕಾರ ಬಂದ ಮೇಲೆ ಕುಸುಮ್-ಸಿ ಜಾರಿ*:

“ಕುಸುಮ್ – ಸಿ ಯೋಜನೆ ನಾಲ್ಕೈದು ವರ್ಷ ಹಿಂದೆಯೇ ಜಾರಿಯಾಗಿತ್ತಾದರೂ ರಾಜ್ಯದಲ್ಲಿ ಮಾತ್ರ ಅದನ್ನು ಶೀಥಲಗೃಹದಲ್ಲಿಟ್ಟಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಜಾರಿಗೊಳಿಸಲು ನಿರ್ಧರಿಸಿ, ಟೆಂಡರ್ ಕರೆಯಲಾಯಿತು. ಒಂದು ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಗೆ 3.5 ಕೋಟಿ ರೂ.ನಿಂದ 4 ಕೋಟಿ್ ರೂ.ವರೆಗೆ ವೆಚ್ಚ ಆಗುತ್ತದೆ. ಈ ಪೈಕಿ 1 ಕೋಟಿ ರೂ. ಕೇಂದ್ರ ಸರ್ಕಾರದಿಂದ ಸಬ್ಸಿಡಿ ಬರುತ್ತದೆ. ಈ ಎಲ್ಲಾ ಅಂಶಗಳನ್ನು ಆಧರಿಸಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಪ್ರತಿ ಯೂನಿಟ್ ವಿದ್ಯುತ್‌ಗೆ ಗರಿಷ್ಠ 3.17 ರೂ. ನಿಗದಿಪಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್ ಮಾಹಿತಿ ನೀಡಿದರು.

“ಕುಸುಮ್-ಸಿ ಮೊದಲ ಹಂತದಲ್ಲಿ ಕೃಷಿ ಫೀಡರ್‌ಗಳ ಸೋಲರೈಸೇಷನ್ ಮೂಲಕ 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆ ಗುರಿ ಹಾಕಿಕೊಂಡಿದ್ದು ಸುಮಾರು 6,19,000 (6 ಲಕ್ಷ 19 ಸಾವಿರ) ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವ ನಿಟ್ಟಿನಲ್ಲಿ ಕೆಲಸ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 200 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇನ್ನು ಕೆಲವೇ ತಿಂಗಳುಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾರ್ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್-2025ರ ವೇಳೆಗೆ 2,400 ಮೆ.ವ್ಯಾ. ಸಾಮರ್ಥ್ಯದ ಸೌರ ಘಟಕಗಳ ಸ್ಥಾಪನೆಯ ಗುರಿಯನ್ನು ಸಾಧಿಸಲಾಗುವುದು,” ಎಂದು ಮಾಹಿತಿ ನೀಡಿದರು.

“ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಗಳ ಬಳಿ ಸೌರ ಘಟಕಗಳ ಸ್ಥಾಪನೆಗೆ ನಿರ್ಧರಿಸಲಾಗಿದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ಗಳ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,” ಎಂದರು.

“ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಭೂಮಿ ಅಗತ್ಯವಿದೆ. ಸರ್ಕಾರಿ ಭೂಮಿ ಲಭ್ಯವಿದ್ದರೆ ಅದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಆದರೆ, ಆ ಭೂಮಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪ ಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ವಿದ್ಯುತ್ ಉತ್ಪಾದನೆ ಗುತ್ತಿಗೆ ಪಡೆದ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,” ಎಂದು ಹೇಳಿದರು.

ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ್ , ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕ್ರೆಡಲ್) ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್‌.ಜೆ.ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

1 hour ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

2 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

12 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

14 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago