ಬೆಂಗಳೂರು ಗ್ರಾಮಾಂತರ: ನವೀಕರಿಸಲಾಗದ ಇಂಧನಗಳ ಮೇಲಿನ ಅವಲಂಬನೆ ಕಡಿಮೆ ಮಾಡಿ, ಕೃಷಿ ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಕೃಷಿ ಅವಶೇಷಗಳನ್ನು ಜೈವಿಕ ಇಂಧನವಾಗಿ ಪರಿವರ್ತಿಸುವ ಮೂಲಕ ರೈತರಿಗೆ ಹೆಚ್ಚುವರಿ ಆದಾಯದ ಮೂಲ ಕಲ್ಪಿಸುವುದರ ಜೊತೆಗೆ ಪರಿಸರ ಮಾಲಿನ್ಯವನ್ನೂ ನಿಯಂತ್ರಿಸಬಹುದು ಎಂದು ಕೃಷಿ ವಿಜ್ಞಾನಿಗಳು ಅಭಿಪ್ರಾಯಪಟ್ಟರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಾಡೋನಹಳ್ಳಿಯ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಅಂತರರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಜ್ಞಾನಿ (ಬೇಸಾಯಶಾಸ್ತ್ರ) ಡಾ. ನಿಂಗರಾಜು ಜಿ.ಕೆ., ದೇಶದ ಕೃಷಿ ಕ್ಷೇತ್ರದಲ್ಲಿ ಭತ್ತದ ಹುಲ್ಲು, ಕಬ್ಬಿನ ತ್ಯಾಜ್ಯ, ಜೋಳದ ಅವಶೇಷಗಳು, ತೆಂಗಿನ ಚಿಪ್ಪು ಸೇರಿದಂತೆ ಅಪಾರ ಪ್ರಮಾಣದ ಜೈವಿಕ ಸಂಪನ್ಮೂಲಗಳು ಲಭ್ಯವಿವೆ. ಇವುಗಳನ್ನು ಸೂಕ್ತ ತಂತ್ರಜ್ಞಾನ ಬಳಸಿ ಇಂಧನವಾಗಿ ಪರಿವರ್ತಿಸುವ ಮೂಲಕ ಪರ್ಯಾಯ ಇಂಧನ ಮೂಲಗಳನ್ನು ಅಭಿವೃದ್ಧಿಪಡಿಸಬಹುದು ಎಂದರು.
ಕೃಷಿ ಅವಶೇಷಗಳನ್ನು ಸುಡುವುದರಿಂದ ವಾಯುಮಾಲಿನ್ಯ ಹಾಗೂ ಹಸಿರುಮನೆ ಅನಿಲಗಳ ಹೊರಸೂಸುವಿಕೆ ಹೆಚ್ಚಾಗುತ್ತದೆ. ಹೀಗಾಗಿ ಅವಶೇಷಗಳನ್ನು ಸುಡುವ ಬದಲು ಅವುಗಳನ್ನು ಜೈವಿಕ ಇಂಧನ ಉತ್ಪಾದನೆಗೆ ಬಳಸುವುದರಿಂದ ಪರಿಸರ ಸಂರಕ್ಷಣೆಯ ಜೊತೆಗೆ ಕೃಷಿ ತ್ಯಾಜ್ಯದ ಮೌಲ್ಯವರ್ಧನೆ ಸಾಧ್ಯವಾಗಲಿದೆ ಎಂದು ಹೇಳಿದರು.
ಬದುಗಳಲ್ಲಿ ಜೈವಿಕ ಇಂಧನ ಸಸಿ ಬೆಳೆಸಲು ಸಲಹೆ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಹನುಮಂತರಾಯ ಬಿ.ಜಿ, ರೈತರು ತಮ್ಮ ಜಮೀನಿನ ಬದುಗಳಲ್ಲಿ ಆಹಾರ ಬೆಳೆಗಳ ಉತ್ಪಾದನೆಗೆ ಧಕ್ಕೆಯಾಗದಂತೆ ಹೊಂಗೆ, ಬೇವು, ಹಿಪ್ಪೆ, ಸುರಹೊನ್ನೆ ಸೇರಿದಂತೆ ಜೈವಿಕ ಇಂಧನಕ್ಕೆ ಉಪಯುಕ್ತವಾದ ಸಸಿಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ಈ ಸಸ್ಯಗಳಿಂದ ದೊರೆಯುವ ಎಣ್ಣೆಯನ್ನು ಜೈವಿಕ ಇಂಧನ ಉತ್ಪಾದನೆಗೆ ಬಳಸಬಹುದಾಗಿದ್ದು, ಇದರಿಂದ ರೈತರಿಗೆ ಹೆಚ್ಚುವರಿ ಆದಾಯ ದೊರೆಯುವ ಅವಕಾಶವಿದೆ. ಕೃಷಿಯೊಂದಿಗೆ ಜೈವಿಕ ಇಂಧನ ಉತ್ಪಾದನೆಯನ್ನೂ ಉತ್ತೇಜಿಸುವ ಮೂಲಕ ಸುಸ್ಥಿರ ಕೃಷಿ ಹಾಗೂ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೈವಿಕ ಇಂಧನದ ಮಹತ್ವ, ಉತ್ಪಾದನಾ ವಿಧಾನಗಳು, ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಯಲ್ಲಿ ಅದರ ಪಾತ್ರ ಹಾಗೂ ಪರಿಸರ ಸಂರಕ್ಷಣೆಯ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಜೈವಿಕ ಇಂಧನ ಸಸಿಗಳನ್ನು ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ. ಗೋಪಿಕಾ ಸಿ. ಮುತ್ತಗಿ, ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯಕ್, ಕೃಷಿ ವಿಸ್ತರಣೆ ವಿಜ್ಞಾನಿ ಡಾ. ಗೋಪಾಲ್, ಕ್ಷೇತ್ರ ಸಹಾಯಕ ಜಗದೀಶ್ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಭಾಗಗಳ ರೈತರು ಹಾಗೂ ರೈತ ಮಹಿಳೆಯರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…
ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…
ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…