ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸಬೇಕು- ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ ಮುಂದೆ ಬಂದೆವು. ಆದರೆ, ಇತ್ತೀಚಿಗೆ ಫಲವತ್ತತೆ ಕಡಿಮೆ ಆಗುತ್ತಾ ಆಹಾರ ಉತ್ಪಾದನಾ ಪ್ರಮಾಣ ಕಡಿಮೆ ಆಗಿದೆ. ಇದಕ್ಕೆ ಸ್ಪಷ್ಟ ಕಾರಣಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ದಿಕ್ಕಿನಲ್ಲಿ ಕೃಷಿ ವಿವಿಗಳು ಹೆಚ್ಚೆಚ್ಚು ಅಧ್ಯಯನ‌ ನಡೆಸಬೇಕು. ಇದಕ್ಕೆ ಅಗತ್ಯವಾದ ಹಣಕಾಸಿನ‌ ನೆರವನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸದ್ಯ ರಾಜ್ಯ ಹಾಲಿನ‌ ಉತ್ಪಾದನೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಸದ್ಯದಲ್ಲೇ ಮಹಾರಾಷ್ಟ್ರ ರಾಜ್ಯವನ್ನು ಹಿಂದಿಕ್ಕಿ ನಾವೇ ನಂಬರ್ ಆದರೂ ಆಶ್ಚರ್ಯವಿಲ್ಲ. ಹೈನುಗಾರಿಕೆಯಲ್ಲಿ ನಾವು ಅಪಾರ ಪ್ರಗತಿ ಸಾಧಿಸಿದ್ದೇವೆ ಎಂದರು.

ಅಕ್ಕಿ, ರಾಗಿ, ಗೋಧಿಯಲ್ಲಿ ಸಕ್ಕರೆಯ ಪ್ರಮಾಣ ಹೆಚ್ಚಾಗಿದ್ದು ಡಯಾಬಿಟಿಕ್ ಸಮಸ್ಯೆ ಇರುವವರ ಪ್ರಮಾಣ ಹೆಚ್ಚುತ್ತಿದೆ. ಆದ್ದರಿಂದ ಸಕ್ಕರೆ ಪ್ರಮಾಣ ಕಡಿಮೆ ಇರುವ ಸಿರಿಧಾನ್ಯ ಕೃಷಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ ಎಂದು ಹೇಳಿದರು.

ಕೃಷಿ ವಿವಿಗಳು Lab to Land ಜೊತೆಗೆ Land to Lab ಕಡೆಗೆ ಗಮನ ಹರಿಸುವ ಕೆಲಸ ಮಾಡಬೇಕು. ಕಡಿಮೆ ಮಳೆಯಲ್ಲೂ ಉತ್ತಮ ಬೆಳೆ ಬೆಳೆಯುವ ರೀತಿ ಸುಸ್ಥಿರ ಕೃಷಿಗೆ ಪೂರಕವಾಗಿ ಅಧ್ಯಯನಗಳು ನಡೆಯಬೇಕು ಎಂದು ತಿಳಿಸಿದರು.

ಮೊದಲೆಲ್ಲಾ ಕೃಷಿ ಚಟುವಟಿಕೆಗೆ ಪೂರಕವಾಗಿ ಗ್ರಾಮ ಸಹಾಯಕರು ಇದ್ದು, ಅವರು ಗ್ರಾಮಗಳಲ್ಲೇ ನೆಲೆಸುತ್ತಿದ್ದರು. ಈಗ ಅವರ ಸಂಖ್ಯೆ ಕಡಿಮೆ ಆಗಿದ್ದು ಮತ್ತೆ ಇವರ ಪ್ರಮಾಣ ಹೆಚ್ಚಾಗುವ ದಿಕ್ಕಿನಲ್ಲಿ ಕೃಷಿ ಸಚಿವರು ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.

ಕೃಷಿ ಭೂಮಿಗಳು ಹೆಚ್ಚಾಗದೆ, ಕೃಷಿಯ ಪ್ರಮಾಣ ಹೆಚ್ಚಾಗದೆ ಕೇವಲ ಕೃಷಿ ವಿವಿಗಳನ್ನು ಹೆಚ್ಚಿಸಿದರೆ ಹೆಚ್ಚಿನ ಅನುಕೂಲಗಳು ಆಗುವುದಿಲ್ಲ.
ಬೆಣ್ಣೆಹಳ್ಳಕ್ಕೆ 200 ಕೋಟಿ ಕೊಟ್ಟಿದ್ದೇವೆ. ಟೆಂಡರ್ ಕರೆಯಲಾಗಿದೆ. ಸದ್ಯದಲ್ಲೇ ಕೆಲಸ ಕೂಡ ಆರಂಭವಾಗಲಿದೆ ಎಂದು ಹೇಳಿದರು.

ಮಳೆಹಾನಿಯಿಂದ ಆಗಿರುವ ಬೆಳೆ ಹಾನಿ ಮತ್ತು ಅನಾಹುತಗಳ ಬಗ್ಗೆ ಧಾರವಾಡ ಜಿಲ್ಲಾಡಳಿತ ಶೇ.90 ಪರಿಹಾರ ನೀಡಿ, ಪ್ರಗತಿಯ ವರದಿ ನೀಡಿದೆ. ಇದಕ್ಕಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರಿಗೆ ಅಭಿನಂದನೆಗಳು ಎಂದರು.

Leave a Reply

Your email address will not be published. Required fields are marked *

error: Content is protected !!