ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು.

ಉದ್ಘಾಡಿಸಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು’ ಎಂದರು.‌

ಸಚಿವ ಎಂ ಬಿ ಪಾಟೀಲ ಮಾತನಾಡಿ, `ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ’ ಎಂದಿದ್ದಾರೆ.

ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ ಎಂದು ಅವರು ಬಣ್ಣಿಸಿದ್ದಾರೆ.

ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ ಎಂದು ಅವರು ನುಡಿದಿದ್ದಾರೆ.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

21 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago