ಕೆಎಸ್ಆರ್ ಟಿಸಿ ಬಸ್ ಚಾಲಕರು ಇಂಧನ ಉಳಿಕೆ, ಸಮಯ‌ ಪಾಲನೆ, ಅಪಘಾತ ತಡೆಯುವಲ್ಲಿ ಗಮನ ಸೆಳೆದಿದ್ದಾರೆ- ಡಿಸಿ ಪಿ.ಎನ್.ರವೀಂದ್ರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ ವಿಭಾಗದ ಚಾಲಕರು ನಿಗಮದ ವಾಹನಗಳ ಚಾಲನಾ ಅವಧಿಯಲ್ಲಿ ಇಂಧನ ಉಳಿಕೆಯಲ್ಲಿ, ಸಮಯ ಪರಿಪಾಲನೆ ಹಾಗೂ ಅಪಘಾತಗಳನ್ನು ತಡೆಗಟ್ಟುವಲ್ಲಿ ರಾಜ್ಯದ ಗಮನ ಸೆಳೆಯುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಚಾಲಕರನ್ನು ಶ್ಲಾಘಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ ವಿಭಾಗ ಕಚೇರಿ ಹಾಗೂ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ “ಅಪಘಾತ ರಹಿತ ಚಾಲನೆ ಮಾಡಿದ 63 ಚಾಲಕರಿಗೆ ಬೆಳ್ಳಿ ಪದಕಗಳನ್ನು ವಿತರಿಸಿ, ಸನ್ಮಾನಿಸಿ ಅವರು ಮಾತನಾಡಿದರು.

ರಾಷ್ಟ್ರದಲ್ಲಿಯೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸೇವೆಗಳು ಹೆಚ್ಚು ವಿಶ್ವಾಸಾರ್ಹತೆ ಗಳಿಸಿವೆ. ಅದರಲ್ಲೂ ಚಿಕ್ಕಬಳ್ಳಾಪುರ ವಿಭಾಗದ ರಸ್ತೆ ಸಾರಿಗೆ ಸೇವೆಗಳು ಮಾದರಿಯಾಗಿವೆ. ವಿಭಾಗದ 63 ಚಾಲಕರು ಬೆಳ್ಳಿ ಪದಕ ಪಡೆದು ವಿಭಾಗಕ್ಕೆ, ರಾಜ್ಯಕ್ಕೆ ಒಳ್ಳೆಯ ಕೊಡುಗೆ ನೀಡಿದ್ದಿರಿ. ನೀವು ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ಚಿನ್ನದ ಪದಕವನ್ನು ಗಳಿಸುವಂತಾಗಲಿ ಎಂದು ಶುಭ ಹಾರೈಸಿದರು.

ಚಾಲಕರು ಯಾವುದೇ ರೀತಿಯ ಅಪಘಾತ, ಅಪರಾಧ, ಸಾರ್ವಜನಿಕ ದೂರುಗಳ ಇತ್ಯಾಧಿಗಳಿಗೆ ಆಸ್ಪದ ನೀಡದೆ, ಉತ್ತಮ ಚಾಲಕರಾಗಿ ಸತತವಾಗಿ 05 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಹಾಗೂ ಸರಾಸರಿ ವಾರ್ಷಿಕ 240 ಕ್ಕಿಂತ ಹೆಚ್ಚಿನ ದಿನಗಳ ಹಾಜರಾತಿಯನ್ನು ಹೊಂದಿರುವ ಚಾಲಕರಿಗೆ ಬೆಳ್ಳಿ ಪದಕ ಪ್ರದಾನ ಮಾಡಲಾಗುತ್ತದೆ.

ಬೆಳ್ಳಿ ಪದಕ ವಿಜೇತರಿಗೆ ಪದಕದೊಂದಿಗೆ ರೂ.2000/-ಗಳ ನಗದು ಪುರಸ್ಕಾರ, ಪ್ರಶಸ್ತಿ ಪತ್ರ ವಿತರಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಮಾಸಿಕವಾರು ಪ್ರೋತ್ಸಾಹ ಭತ್ಯೆ ರೂ.250/-ಗಳನ್ನು ನೀಡಲಾಗುತ್ತದೆ. ಇಂತಹ ಪ್ರಯೋಜನವನ್ನು ಇನ್ನೂ ಹೆಚ್ಚಿನ ಚಾಲಕರು ಗಳಿಸುವಂತಾಗಲಿ.

ನಮ್ಮ ಚಿಕ್ಕಬಳ್ಳಾಪುರ ವಿಭಾಗವು 6 ಘಟಕಗಳು, 8 ವಾಹನ ನಿಲ್ದಾಣಗಳು ಹಾಗೂ 9 ನಿಯಂತ್ರಣ ಬಿಂದುಗಳನ್ನು ಹೊಂದಿದ್ದು ಜನರಿಗೆ ಉತ್ತಮ ಸೇವೆ ಒದಗಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ ವಿಭಾಗದ ನಿಯಂತ್ರಣಾಧಿಕಾರಿ ಹಿಮವರ್ಧನ ನಾಯ್ದು ಅವರು ಮಾತನಾಡಿ, ಜಿಲ್ಲೆಯಲ್ಲಿ ಚಿಂತಾಮಣಿ, ಬಾಗೇಪಲ್ಲಿ, ಗೌರಿಬಿದನೂರು, ದೊಡ್ಡಬಳ್ಳಾಪುರ, ಶಿಡ್ಲಘಟ್ಟ, ಘಟಕಗಳು ಒಳಗೊಂಡಂತೆ, ಗುಡಿಬಂಡೆ ಹಾಗೂ ಮಂಡಿಕಲ್‌ಗಳಲ್ಲಿ ಸುಸಜ್ಜಿತವಾದ ವಾಹನ ನಿಲ್ದಾಣಗಳನ್ನು ಹೊಂದಿರುತ್ತದೆ. ವಿಭಾಗದಲ್ಲಿ ಪ್ರಸ್ತುತ 523 ಅನುಸೂಚಿಗಳನ್ನು 566 ವಾಹನ ಬಲದೊಂದಿಗೆ, ಪ್ರತಿನಿತ್ಯ ಸರಾಸರಿ 1.96 ಲಕ್ಷ ಕಿ.ಮೀಗಳನ್ನು ಕಾರ್ಯಾಚರಣೆ ಮಾಡುತ್ತಿದ್ದು, ಸರಾಸರಿ ರೂ.89.70 ಲಕ್ಷ ಆದಾಯವನ್ನು ಗಳಿಸುತ್ತಿದೆ ಹಾಗೂ ಸರಾಸರಿ ಒಟ್ಟು 2.03 ಲಕ್ಷ ಪ್ರಯಾಣಿಕರು ಮತ್ತು  ಸರಾಸರಿ 20 ಸಾವಿರ ವಿದ್ಯಾರ್ಥಿಗಳು ಪ್ರಯಾಣಿಸುತ್ತಿರುತ್ತಾರೆ.

ಶಕ್ತಿ ಯೋಜನೆಯಿಂದ ಪ್ರಸ್ತುತ ಪ್ರತಿನಿತ್ಯ ಸರಾಸರಿ ರೂ.34.69 ಲಕ್ಷ ಸಾರಿಗೆ ಆದಾಯವನ್ನು ಗಳಿಸಲಾಗುತ್ತಿದೆ ಹಾಗೂ ಪ್ರತಿನಿತ್ಯ ಸರಾಸರಿ ಒಟ್ಟು 1.00 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸುತ್ತಿರುತ್ತಾರೆ. ರಾಷ್ಟ್ರೀಕೃತ ವಲಯದಲ್ಲಿರುವ ಎಲ್ಲಾ 797 ಗ್ರಾಮಗಳಿಗೆ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ರಾಷ್ಟ್ರೀಕೃತವಲ್ಲದ ವಲಯದಲ್ಲಿರುವ 1,242 ಗ್ರಾಮಗಳ ಪೈಕಿ 1,096 ಗ್ರಾಮಗಳಿಗೆ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

ವಿಭಾಗವು ಕಳೆದ ಮೂರು ವರ್ಷಗಳಲ್ಲಿ ಅಂದರೆ 2020-21 ರಲ್ಲಿ ಕೋವಿಡ್-19 ಮತ್ತು ಲಾಕ್ ಡೌನ್ ಕಾರಣಗಳಿಂದಾಗಿ ರೂ 13.77 ಕೋಟಿ ನಷ್ಟ ಹಾಗೂ 2021-22 ರಲ್ಲಿ ರೂ 3.02 ಕೋಟಿ ನಷ್ಟವಾಗಿದ್ದು ಹಾಗೂ 2022-23 ರಲ್ಲಿ 25.99 ಕೋಟಿ ಲಾಭವನ್ನು ಗಳಿಸಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ ವಿಭಾಗದ ವತಿಯಿಂದ 2019ನೇ ಸಾಲಿನ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರು ಸತತವಾಗಿ 05 ವರ್ಷಗಳ ಕಾಲ ಅಪಘಾತ ರಹಿತ ಚಾಲನೆ ಮಾಡಿದ ಒಟ್ಟು 63 ಅರ್ಹ ಚಾಲಕರಿಗೆ ಬೆಳ್ಳಿ ಪದಕಗಳ ಪ್ರದಾನ ಮಾಡಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಬಳ್ಳಾಪುರ ವಿಭಾಗದ ಡಿ.ಎಂ.ಓ ಮಂಜುನಾಥ ಕಲಗೇರಿ, ಉಗ್ರಾಣ ಅಧಿಕಾರಿ  ವೆಂಕಟರಮಣ, ಸಹಾಯಕ ನಿಯಂತ್ರಣಾಧಿಕಾರಿ ಮಂಜುನಾಥ್, ಬೆಳ್ಳಿ ಪದಕ ಪುರಸ್ಕ್ರತ ಚಾಲಕರು ಮತ್ತು ಅವರ ಕುಟುಂಬ ವರ್ಗದವರು ಪಾಲ್ಗೊಂಡಿದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

60 minutes ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

5 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

6 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

13 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

1 day ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago