
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಜೂ.5ರಂದು ನಡೆಯುತ್ತಿರುವ ರೈತರ ವಿಧಾನಸೌಧ ಚಲೋ ಪ್ರತಿಭಟನೆಗೆ ಬೆಂಬಲಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತ ಸಂಘದ ನೇತೃತ್ವದಲ್ಲಿ ಜಿಲ್ಲೆಯ ರೈತರು ಹೋರಾಟದಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ತಿಳಿಸಿದ್ದಾರೆ.
ಈ ಕುರಿತು ನಗರದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರ ಫಲವತ್ತಾದ ಕೃಷಿ ಭೂಮಿಗಳನ್ನು ಕೈಗಾರಿಕೆ ಹೆಸರಿನಲ್ಲಿ ಭೂಸ್ವಾಧೀನಪಡಿಸಿಕೊಳ್ಳುತ್ತಿರುವ ಕ್ರಮ ಖಂಡನೀಯವಾಗಿದೆ. ನಮ್ಮ ತಾಲೂಕಿನಲ್ಲಿ ಅಪರಲ್ ಪಾರ್ಕ್ ಗಾಗಿ ನೂರಾರು ಎಕರೆ ಸ್ವಾಧೀನ ಜಮೀನನ್ನ ರೈತರಿಂದ ಕಿತ್ತುಕೊಂಡು, ಬಂಡವಾಳಶಾಹಿಗಳಿಗೆ ಹಸ್ತಾಂತರ ಮಾಡಲಾಗಿದೆ. ಇಲ್ಲಿ ಮೂಲಭೂತ ಸ್ಥಳೀಯರಿಗೆ ಎಷ್ಟು ಉದ್ಯೋಗವನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಲಿ. ಕೆಐಎಡಿಬಿ ಒಂದು ಮಧ್ಯವರ್ತಿ ಸಂಸ್ಥೆಯಾಗಿ ನಿರ್ಮಾಣ ಆಗಿದೆ. ದೇಶದಲ್ಲಿ ಆಹಾರ ಭದ್ರತೆಗಾಗಿ 80ರ ದಶಕದಲ್ಲಿ ಬೇರೆ ದೇಶಗಳಿಗೆ ಭಿಕ್ಷೆ ಬೇಡಬೇಕಿತ್ತು. ಸಕ್ಕರೆ ಕಾರ್ಖಾನೆ, ಸೋಲಾರ್ ಯೋಜನೆಗಳು ಮೊದಲಾದ ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪನೆ ಮಾಡಲಿ ಆದರೆ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುತ್ತೇವೆ ಅಂತ ಯಾರೋ ಒಬ್ಬರಿಗೆ ಕೊಟ್ಟು ಬಿಟ್ಟು, ಹತ್ತು ಸಾವಿರ ಎಕರೆ ಒಬ್ಬರಿಗೆ ಕೊಟ್ಟು ವಿದ್ಯುತ್ ಉತ್ಪಾದನೆ ಮಾಡಿ ಕಳಿಸಬಾರದು, ರೈತರಿಗೆ ವಿದ್ಯುತ್ ಉತ್ಪಾದನೆ ಮಾಡಲು ಅವಕಾಶ ನೀಡಬೇಕು. ಇತ್ತೀಚೆಗೆ ರಾಜ್ಯದಲ್ಲಿ ಬಲವಂತದ ಭೂಸ್ವಾಧೀನ ನಡೆಯುತ್ತಿದ್ದು, ನಮ್ಮ ತಾಲೂಕಿನಲ್ಲಿಯೂ ಸಹ ಭೂಸ್ವಾಧೀನ ನಡೆಯುತ್ತಿದೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟ ನಡೆಸಲಾಗುತ್ತಿದೆ ಎಂದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 13 ಹಳ್ಳಿಗಳಿಗೆ ಸೇರಿದ ಕೆಐಎಡಿಬಿ ಭೂಸ್ವಾಧೀನ ಕೈಬಿಡುವಂತೆ ಒತ್ತಾಯಿಸಿ ಅಲ್ಲಿನ ರೈತರಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸಲಾಗುತ್ತಿದೆ. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಕಾರಣ ಜೂ.5ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ಹೋರಾಟಕ್ಕೆ ರಾಜ್ಯ ರೈತ ಸಂಘದ ಜಿಲ್ಲಾ ಘಟಕ ಬೆಂಬಲಿಸಿದೆ. ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು ಮೊದಲಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಲಿದ್ದಾರೆ. ಚಿಕ್ಕಬಳ್ಳಾಪುರದ ರಾಣಿ ಸರ್ಕಲ್ ಬಳಿಯಿಂದ ಮೂಲಕ ವಿಧಾನಸೌಧ ಚಲೋ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಮುಖಂಡರಾದ ಮಹೇದೇವ್, ರವಿ ಶಿರವಾರ ಮೊದಲಾದವರು ಹಾಜರಿದ್ದರು.