ಕೆರೆ ಸಂರಕ್ಷಣೆ, ಕೆರೆ ಒತ್ತುವರಿ, ಪರಿಸರ ಮಾಲಿನ್ಯ ಬಗ್ಗೆ ಜನರಿಗೆ ಕಾನೂನು ಅರಿವು ಮೂಡಿಸಿ- ನ್ಯಾಯಮೂರ್ತಿ ಬಿ.ಎ. ಪಾಟೀಲ್

ಕೆರೆ ಒತ್ತುವರಿ, ಭೂ ಕಬಳಿಕೆ, ಪರಿಸರ ಮಾಲಿನ್ಯ ಮಾಡುವುದರಿಂದ ಉಂಟಾಗುವ ಕಾನೂನು ತೊಡಕುಗಳ ಬಗ್ಗೆ ಜನರಿಗೆ ಅರಿವು ಮೂಡಿಸಿ, ಕಾನೂನು ಕ್ರಮಗಳ ಮೂಲಕ ಭೂಮಿ, ಕೆರೆ, ಪರಿಸರವನ್ನು ಸಂರಕ್ಷಿಸಬೇಕು ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು, ಜಿಲ್ಲಾ ಕೆರೆ ಸಂರಕ್ಷಣಾ ಸಮಿತಿ, ಜಿಲ್ಲಾಡಳಿತ, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ದೇವನಹಳ್ಳಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ “ಕೆರೆ ಸಂರಕ್ಷಣೆ ಮಾಡುವಲ್ಲಿ ಸರ್ಕಾರಿ ಅಧಿಕಾರಿಗಳ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತು ಕಾರ್ಯಾಗಾರ” ವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕೆರೆ ಒತ್ತುವರಿ, ರಾಜಕಾಲುವೆಗಳ ಒತ್ತುವರಿ, ದಿನನಿತ್ಯದ ಸಮಸ್ಯೆಗಳಾಗಿವೆ. ಕೆರೆಗಳ ಕುರಿತು ನಿರ್ಲಕ್ಷ್ಯ ಮನೋಭಾವದಿಂದ ಕುಡಿಯುವ ನೀರಿನ ಅಭಾವ ತಲೆದೋರಿದೆ. ಕಲುಷಿತ ನೀರಿನಿಂದ ಪ್ರಕೃತಿ ಮಾಲಿನ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕೆರೆ, ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಸರ್ಕಾರದ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಕೆರೆ ಸಂರಕ್ಷಣೆ ಮಾಡುವುದು ಬಹಳ ಮುಖ್ಯ, ಕೆರೆ ಒತ್ತುವರಿ ತೆರವು ಪ್ರಕ್ರಿಯೆ ಅಧಿಕಾರಿಗಳ ಹಂತದಲ್ಲಿ ಆಗದಿದ್ದಾಗ  ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಲಯದ ಮುಖೇನ ಕಾನೂನು ರೀತಿಯ ಕ್ರಮ ಕೈಗೊಂಡು ಒತ್ತುವರಿಯನ್ನು ತೆರವುಗೊಳಿಸಲಾಗುವುದು ಎಂದು ಅವರು ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಎಮ್.ಎಲ್. ರಘುನಾಥ್ ಅವರು ಕಾರ್ಯಾಗಾರದ  ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರಿ ಜಮೀನು ಒತ್ತುವರಿ, ಧಾರ್ಮಿಕ ಜಮೀನು ಒತ್ತುವರಿ, ಕೆರೆಗೆ ಅತಿಕ್ರಮ ಪ್ರವೇಶ ಮಾಡಿ ಒತ್ತುವರಿ ಮಾಡುವುದು, ಸರ್ಕಾರಿ ಜಮೀನನ್ನು ಬೇರೆಯವರಿಗೆ ಪರಭಾರೆ ಕೊಡುವುದು, ಒತ್ತುವರಿ ವ್ಯಾಪ್ತಿಗೆ ಬರುತ್ತದೆ. ಒತ್ತುವರಿ ಕಂಡುಬಂದಲ್ಲಿ ಶಿಕ್ಷೆ, ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಅಭಿವೃದ್ಧಿ ಕಾರ್ಯಕ್ರಮಗಳು  ಪರಿಸರಕ್ಕೆ ಹಾನಿಯಾಗದಂತೆ ಸುಸ್ಥಿರ ಅಭಿವೃದ್ಧಿ ಮಾದರಿಯಲ್ಲಿ ಆಗಬೇಕೇ ಹೊರತು ಪರಿಸರವನ್ನು ಧಿಕ್ಕರಿಸಿ ಅಲ್ಲ, ಹಾಗಾದಾಗ ಪ್ರಕೃತಿಯೇ ಮಾನವನಿಗೆ ಪಾಠ ಕಲಿಸುತ್ತದೆ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ  ಜಿಲ್ಲಾ ಕೆರೆ ಸಂರಕ್ಷಣಾ ಸಮಿತಿ ಅಧ್ಯಕ್ಷರಾದ ಡಾ.ಶಿವಶಂಕರ್ ಎನ್ ಅವರು ಕಾರ್ಯಾಗಾರದ ಪ್ರಾಸ್ತಾವಿಕ ಮಾತುಗಳನ್ನಾಡಿ ಜಿಲ್ಲೆಯಲ್ಲಿ 709 ಕೆರೆಗಳಿದ್ದು, 2018 ರಲ್ಲಿ ಎಲ್ಲಾ ಕೆರೆಗಳ ಅಳತೆ ಕಾರ್ಯ ಮುಗಿದಿದೆ. ಕೆರೆ ಒತ್ತುವರಿ ಆಗಿರುವ ಕಡೆ ಈಗಾಗಲೇ ತೆರವು ಕಾರ್ಯ ಕೈಗೊಂಡಿದ್ದೇವೆ. 13 ಕೆರೆಗಳ 85 ಎಕರೆ ಒತ್ತುವರಿ ಯನ್ನು ತೆರವುಗೊಳಿಸಿದ್ದೇವೆ. ಒತ್ತುವರಿ ತೆರವುಗೊಳಿಸಿ ಕೆರೆ ಸುತ್ತಲೂ ಕಾಲುವೆ ರೂಪದಲ್ಲಿ ಕಂದಕ(ಟ್ರೆಂಚ್) ತೆಗೆದು ಬಾರ್ಡರ್ ಕಲ್ಲುಗಳನ್ನು  ಹಾಕಿ ಹದ್ದುಬಸ್ತು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮೊದಲನೇ ಅಧಿವೇಶನದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ಸಂದೀಪ್ ಸಾಲಿಯಾನ್ ಅವರು ಮಾತನಾಡಿ, ಸರ್ಕಾರಿ ಸ್ವತ್ತುಗಳ  ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯ ಕರ್ತವ್ಯ. ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯ ಪ್ರವೃತ್ತರಾಗದೇ ಹೋದರೆ ಕೆರೆ, ಕುಂಟೆ, ಕಾಲುವೆಗಳು ಕಲುಷಿತಗೊಂಡು ನಾಶವಾಗಿ ಹೋಗುತ್ತವೆ ಎಂದರು.

ಉಚ್ಛ ನ್ಯಾಯಾಲಯದ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೆರೆ ಸಂರಕ್ಷಣಾ ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ಕೆರೆಗಳ ನಿರೀಕ್ಷಣೆ ಮಾಡಿ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಇಲ್ಲದಿದ್ದಲ್ಲಿ ಕೆರೆ ಸಂರಕ್ಷಣಾ ಕಾಯ್ದೆಗಳ ಪ್ರಕಾರ ಕಾನೂನು ಕ್ರಮಕ್ಕೆ ಗುರಿಯಾಗುತ್ತಾರೆ ಎಂದು ಎಚ್ಚರಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೆರೆ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಹನ್ನೆರಡು ಸಾವಿರಕ್ಕೂ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿ ತಿಳಿಸಿದರು.

ಎರಡನೇ ಅಧಿವೇಶನದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳ ರಿಜಿಸ್ಟ್ರಾರ್ ಆಗಿರುವ ಎಚ್.ಕೆ ನವೀನ್ ಅವರು ಮಾತನಾಡಿ, ಕೆರೆ ಒತ್ತುವರಿ ತೆರವುಗೊಳಿಸಲು ತೆಗೆದುಕೊಳ್ಳಬೇಕಾದ ಕಾನೂನು  ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಐದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಬಿರಾದರ್ ದೇವೇಂದ್ರಪ್ಪ, ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ದೇವನಹಳ್ಳಿ ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ಮಧುಸೂಧನ ಡಿ.ಕೆ, ದೇವನಹಳ್ಳಿ ವಕೀಲರ ಸಂಘದ ಅಧ್ಯಕ್ಷರಾದ ಮುನಿರಾಜ, ಬೆಂಗಳೂರು ಗ್ರಾಮಾಂತರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪಕಾರ್ಯದರ್ಶಿ ರಮೇಶ್ ಟಿ.ಕೆ, ಉಪವಿಭಾಗಾಧಿಕಾರಿ ಶ್ರೀನಿವಾಸ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಕಾರ್ಯಾಗಾರದಲ್ಲಿ  ಉಪಸ್ಥಿತರಿದ್ದರು.

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

30 minutes ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

43 minutes ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

14 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

14 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

17 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago