ಕೋಲಾರ: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ಬಂಡವಾಳಶಾಹಿ ಪರವಾದ ನಿಲುವಿನ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ದೇಶಾದ್ಯಂತ ಎಲ್ಲಾ ತಾಲೂಕು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ
ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯು (ಜೆಸಿಟಿಯು) ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾರ್ಮಿಕರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಬಂಡವಾಳಶಾಹಿಯು ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ವೇತನ ನೀಡಬೇಕು. ಆದರೆ, ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಕಾನೂನು ಜಾರಿಗೆ ತಂದು ಕಾರ್ಮಿಕರನ್ನು ಶೋಷಿಸುತ್ತಿದೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ಬಂಡವಾಳಶಾಹಿ ವ್ಯವಸ್ಥೆಗೆ ಶರಣಾಗುವಂತೆ ಮಾಡಿದೆ. ಕಾರ್ಪೊರೇಟ್ ಕಂಪನಿಗಳ ಕೈಗೊಂಬೆಯಾಗಿರುವ ಕೇಂದ್ರ ಸರ್ಕಾರವು ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿದೆ. ಉಳ್ಳವರ ಪರ ಆಡಳಿತ ನಡೆಸಿ ಮತ್ತು ಅವರ ಪರ ಕಾಯ್ದೆ ರೂಪಿಸಿ ದೇಶದಲ್ಲಿ ಆರ್ಥಿಕ ಅರಾಜಕತೆ ಸೃಷ್ಟಿಸುತ್ತಿದೆ ಎಂದರು.
ಕಾರ್ಮಿಕ ಸಂಹಿತೆ ಹಿಂಪಡೆಯಬೇಕು. ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ನಿರ್ಧಾರ ಕೈಬಿಡಬೇಕು. ವಿವಿಧ ಕಾರ್ಮಿಕ ವರ್ಗದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಕಾರ್ಮಿಕ ಸಂಘಗಳ ಸಹಕಾರದೊಂದಿಗೆ ಅಖಲ ಭಾರತ ಮಟ್ಟದ ಮುಷ್ಕರ ನಡೆಸಲಾಗುತ್ತಿದ್ದು, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರದಲ್ಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಎಐಸಿಟಿಯುಸಿ ರಾಜ್ಯ ಕಾರ್ಯದರ್ಶಿ ಅಪ್ಪಣ್ಣ ಮಾತನಾಡಿ ದುಡಿಯುವ ವರ್ಗದ ಜನರಿಗೆ ಸರ್ಕಾರಗಳು ಘೋರ ಅನ್ಯಾಯ ಮಾಡುತ್ತಿವೆ. ಕಾರ್ಮಿಕರಿಗೆ ಸಮಾನ ವೇತನ ನೀಡದೆ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿವೆ. ಕಾರ್ಮಿಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ನಡೆಸುತ್ತಿರುವ ಹೋರಾಟಕ್ಕೆ ಸಂಘ ಸಂಸ್ಥೆಗಳು ಪಕ್ಷಾತೀತವಾಗಿ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಾರ್ಮಿಕರಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಆದರೆ, ಕಾರ್ಮಿಕರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರಗಳು ಮಾಲೀಕನ ಪರವಾಗಿವೆ. ಕಾರ್ಮಿಕರನ್ನು ಬೀದಿಗೆ ತಳ್ಳುವ ಪ್ರಯತ್ನ ಸದ್ದಿಲ್ಲದೆ ನಡೆದಿದ್ದು, ಇದರ ವಿರುದ್ಧ ತೀವ್ರ ಹೋರಾಟ ನಡೆಸಬೇಕು ಎಂದರು.
ಈ ಸಂದರ್ಭದಲ್ಲಿ ಬೆಮೆಲ್ ಕಾರ್ಮಿಕ ಸಂಘದ ಉಪಾಧ್ಯಕ್ಷ ಸಣ್ಣ ಹನುಮಂತಪ್ಪ, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ, ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಕೃಷ್ಣಮೂರ್ತಿ, ಇಂಟಕ್ ಮುಖಂಡರಾದ ಗಂಗಿರೆಡ್ಡಿ, ಎಂ ವಿಜಯಕೃಷ್ವ ಆರ್ ಪ್ರಭಾಕರ್, ಮುಂತಾದವರು ಇದ್ದರು.