ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆ ಅಲ್ಲ: ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ- ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪನವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿನಿತ್ಯ ಬೈದರೆ ಪ್ರಧಾನಿ ನರೇಂದ್ರ ಮೋದಿ ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ. ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ ಎಂದು ಗುಡುಗಿದ್ದಾರೆ.

ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ ಎಂದು ಹೇಳಿದ್ದಾರೆ.

ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ. ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ಮೋದಿಯವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲಾ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ ಎಂದಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಯಡಿಯೂರಪ್ಪನವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ತಿಳಿಸಿದ್ದಾರೆ.

ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆದ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ ಎಂದು ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ ಎಂದಿದ್ದಾರೆ.

ಯಡಿಯೂರಪ್ಪನವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

1 hour ago

ಭಾರತದ ಮಧ್ಯಮ ವರ್ಗದವರ ಸಿಹಿ-ಕಹಿಗಳು, ನಿರಾಸೆ ಮತ್ತು ಜೀವನೋತ್ಸಾಹ…..

ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…

5 hours ago

ದೊಡ್ಡಬಳ್ಳಾಪುರದಲ್ಲಿ ಕಳ್ಳರ ಹಾವಳಿ: ಸರ, ಬೈಕ್‌ನಿಂದ ಹಸುಗಳವರೆಗೆ ಕಳವು – ಜನರಲ್ಲಿ ಹೆಚ್ಚಿದ ಆತಂಕ

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…

6 hours ago

ಸಿಎಂ, ಡಿಸಿಎಂ, ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…

7 hours ago

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

17 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

20 hours ago