ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತಿಪ್ಪಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರಕರಣದಲ್ಲಿ ಎರಡೂ ಕಡೆಯವರು ಪರಸ್ಪರ ಹಲ್ಲೆಯ ಆರೋಪ ಮಾಡಿದ್ದು, ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದೆ.
ಗ್ರಾಮದ ಮಮತಾ–ದಾಳಪ್ಪ ದಂಪತಿ ಸಾಕುತ್ತಿದ್ದ ಕೋಳಿಗಳು ನೆರೆಮನೆಯ ಅಶ್ವಥಪ್ಪ ಅವರ ಮನೆಯ ಮುಂದೆ ಗಲೀಜು ಮಾಡಿದ್ದನ್ನು ಪ್ರಶ್ನಿಸಿದ ವೇಳೆ ಮಾತಿಗೆ ಮಾತು ಬೆಳೆದು ಎರಡು ಕುಟುಂಬಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಈ ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಟ ನಡೆದಿದೆ.
ಈ ಘಟನೆಯಲ್ಲಿ ದಾಳಪ್ಪ ಹಾಗೂ ರವಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಸ್ಪತ್ರೆಗೆ ಬಂದ ಅಶ್ವಥಪ್ಪ ಹಾಗೂ ಅವರ ಬೆಂಬಲಿಗರು ಆಸ್ಪತ್ರೆಯಲ್ಲೇ ರವಿ ಮತ್ತು ಮಮತಾ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದಾಳಪ್ಪ ಕುಟುಂಬದವರು ಆರೋಪಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ, ಮೊದಲು ದಾಳಪ್ಪ ಹಾಗೂ ಅವರ ಕುಟುಂಬದವರು ಸೇರಿ 15ಕ್ಕೂ ಹೆಚ್ಚು ಮಂದಿ ಅಶ್ವಥಪ್ಪ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದು, ತಲೆಗೆ ಗಂಭೀರ ಗಾಯವಾಗಿದೆ ಎಂದು ಅಶ್ವಥಪ್ಪ ಕುಟುಂಬ ಆರೋಪಿಸಿದೆ. ಹಲ್ಲೆಯಿಂದ ಅಶ್ವಥಪ್ಪ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೂ ಅವರ ಮೇಲೆ ಮತ್ತೊಮ್ಮೆ ಹಲ್ಲೆಗೆ ಯತ್ನ ನಡೆದಿದ್ದು, ಈ ವೇಳೆ ಎರಡೂ ಗುಂಪಿನವರ ನಡುವೆ ಮಾರಾಮಾರಿ ನಡೆದಿದೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡ ಅಶ್ವಥಪ್ಪ ಅವರನ್ನು ಹೆಚ್ಚಿನ ಚಿಕಿತ್ಸೆಗೆ ದೊಡ್ಡಬಳ್ಳಾಪುರದ ಮಾತೋಶ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆಗೆ ಉಂಟಾದ ಗಾಯಕ್ಕೆ ವೈದ್ಯರು ಒಂಬತ್ತು ಹೊಲಿಗೆ ಹಾಕಿದ್ದಾರೆ.
ಆಸ್ಪತ್ರೆಯಲ್ಲೇ ನಡೆದ ಗಲಾಟೆಯಿಂದ ರೋಗಿಗಳು ಹಾಗೂ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಗೌರಿಬಿದನೂರು ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ತಂದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎರಡೂ ಕಡೆಯವರಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಘಟನೆಯ ನಿಖರ ಸತ್ಯಾಸತ್ಯತೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…