
ಬಾಶೆಟ್ಟಿಹಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಸಹಭಾಗಿತ್ವದಲ್ಲಿ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ವೇಳೆ ಸಾರ್ವಜನಿಕರಲ್ಲಿ ಕ್ಷಯರೋಗದ ಲಕ್ಷಣಗಳು, ಹರಡುವಿಕೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ COPTA ಕಾಯ್ದೆಯಡಿ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು.
ಅಲ್ಲದೆ, ವಿವಿಧ ಅಂಗಡಿ ಹಾಗೂ ವಾಣಿಜ್ಯ ಮಳಿಗೆಗಳ ಪಂಚಾಯಿತಿ ಪರವಾನಗಿಗಳನ್ನು ಪರಿಶೀಲಿಸಿ, ನಿಯಮಾನುಸಾರ ಪರವಾನಿಗೆ ಹೊಂದಿರದವರಿಗೆ ದಂಡ ವಿಧಿಸುವ ಮೂಲಕ ಕ್ರಮ ಕೈಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ನಾಗೇಶ್, ವೈದ್ಯಾಧಿಕಾರಿ ಡಾ. ಮಂಜುವಾಣಿ, ಹಿರಿಯ ನಿರೀಕ್ಷಣಾಧಿಕಾರಿ ನಾಗರಾಜು, ಸಮುದಾಯ ಆರೋಗ್ಯ ಅಧಿಕಾರಿ ನರೇಂದ್ರ, ಸಮುದಾಯ ಸಂಘಟನಾ ಅಧಿಕಾರಿ ರೂಪ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ಪಾಲ್ಗೊಂಡಿದ್ದರು.