ಗಡಿ ಭಾಗದ ಸಾಸಲು ಹೋಬಳಿಗೆ ಸಿಗುತ್ತಿಲ್ಲ‌ ಸಾಸಿವೆಯಷ್ಟು ಪ್ರಾತಿನಿಧ್ಯ: 18 ಕೊಳವೆ ಬಾವಿಗಳಿಗೆ ಒಂದೇ ವಿದ್ಯುತ್ ಪರಿವರ್ತಕ: ಬಾಡಿದ ಬೆಳೆಗಳು: ಸಂಕಷ್ಟದಲ್ಲಿ ರೈತರು

ತಾಲೂಕಿನ ಸಾಸಲು ಹೋಬಳಿ ಗಡಿ ಭಾಗದಲ್ಲಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಗಳು, ಆಡಳಿತ ವರ್ಗಕ್ಕೆ ಮಲತಾಯಿಯ ಮಗುವಿನಂತಾಗಿ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ.

ತಾಲೂಕಿನ ಬೇರೆ ಹೋಬಳಿಗಳಿಗೆ ಸಿಗುತ್ತಿರುವ ಪ್ರಾತಿನಿಧ್ಯದಲ್ಲಿ ಸಾಸಿವೆಯಷ್ಟು ಕಾಳಜಿ ಸಾಸಲು ಹೋಬಳಿ ಮೇಲೆ‌ ಕಾಣದಾಗಿದೆ. ಹೋಬಳಿಯಲ್ಲಿ ದಶಕಗಳಿಂದ ಶಿಕ್ಷಣ, ಆರೋಗ್ಯ, ಬಡತನದ ಸಮಸ್ಯೆ ಹಾಸು ಹೊಕ್ಕಾಗಿದೆ. ಆದರೆ, ಜನಪ್ರತಿನಿಧಿಗಳಿಗೆ ಸಾಸಲು ಹೋಬಳಿಯ ಸಮಸ್ಯೆ ಪಂಚವಾರ್ಷಿಕ‌, ಸಾಂದರ್ಭಿಕ ಚುನಾವಣೆಗಳಲ್ಲಿ ಪ್ರಚಾರದ ಸರಕಾಗಿ ಮಾತ್ರ ಬಳಕೆಯಾಗುತ್ತಿದೆ.

ಸರ್ಕಾರಿ ಸೇವೆಗಳಲ್ಲಿ ತೊಡಗಿಸಿಕೊಂಡ ಅತಿ ಹೆಚ್ಚಿನವರು ಸಾಸಲು ಹೋಬಳಿಯಿಂದ ಹೊರಗಡೆ ಹೋದವರೇ ಆದರೂ ಅಭಿವೃದ್ಧಿ ಕಾಣದಿರುವುದು ಯಕ್ಷಪ್ರಶ್ನೆಯಾಗಿದೆ.

ಹೋಬಳಿ ಕೇಂದ್ರದಿಂದ ಸುಮಾರು 2ಕಿಮೀ‌ ದೂರದಲ್ಲಿರುವ ಶ್ರೀರಾಮನಹಳ್ಳಿ ಗ್ರಾಮದಲ್ಲಿ ರೈತರು ಅಡಿಕೆ, ಬಾಳೆ, ತೆಂಗು ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಬೆಳೆಯುವ ಸಲುವಾಗಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ವಿಪರ್ಯಾಸವೆಂದರೆ 18 ಕೊಳವೆ ಬಾವಿಗಳಿಗೆ ಇರುವುದು ಒಂದೇ ವಿದ್ಯುತ್ ಪರಿವರ್ತಕ. ಅತಿಯಾದ ಒತ್ತಡದಿಂದ ವಿದ್ಯುತ್ ಪರಿವರ್ತಕ(ಟ್ರಾನ್ಸ್ ಫಾರ್ಮರ್) ಪದೇ ಪದೇ ಸುಟ್ಟು ಹೋಗುತ್ತಿದೆ. ಒಮ್ಮೆ ವಿದ್ಯುತ್ ಪರಿವರ್ತಕ ರಿಪೇರಿ ಮಾಡಿಸಿದರೆ‌ ಎರಡು ದಿನ ಮಾತ್ರ ಸರಿಯಾಗಿ ಕೆಲಸ‌ನಿರ್ವಹಿಸುತ್ತದೆ. ನಂತರ ಸಮಸ್ಯೆ ಪುನರಾವರ್ತನೆಯಾಗುತ್ತದೆ.

ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಗ್ರಾಮಸ್ಥರು ಸಾಕಷ್ಟು ಬಾರಿ ಬೆಸ್ಕಾಂ ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ಸಬೂಬು ಹೇಳಿಕೊಂಡು ದಿನದೂಡುತ್ತಿದ್ದಾರೆ. ಇನ್ನು ಶ್ರೀರಾಮನಹಳ್ಳಿಯಲ್ಲಿರುವ ಇರುವುದು ಒಂದೇ ಒಂದು ವಿದ್ಯುತ್ ಪರಿವರ್ತಕಕ್ಕೆ ಮನೆಯಲ್ಲಿ ಕೊಳವೆ ಬಾವಿ ಹೊಂದಿದವರೂ ಕೂಡ ಸಂಪರ್ಕ ಪಡೆಯುತ್ತಿದ್ದು, ಮತ್ತಷ್ಟು ಒತ್ತಡದಿಂದ ಜಂಪ್ ಸುಟ್ಟುಹೋಗುವುದು ಸಾಮಾನ್ಯವಾಗಿದೆ.

ಗ್ರಾಮಸ್ಥರ ಮಧ್ಯೆ ಸದಾ ಜಗಳ

ವಿದ್ಯುತ್ ಪರಿವರ್ತಕಕ್ಕೆ‌ ಸಂಪರ್ಕ ಪಡೆಯುವ ವಿಚಾರವಾಗಿ ಗ್ರಾಮಸ್ಥರ ಮಧ್ಯೆ ಸಾಕಷ್ಟು ಜಗಳವಾಗಿದೆ. ಗ್ರಾಮಸ್ಥರ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ‌ ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ.

ಗ್ರಾಮದ ಹಲವು ರೈತರು 4-5 ವರ್ಷಗಳ ಹಿಂದೆಯೇ ವೈಯಕ್ತಿಕ ವಿದ್ಯುತ್ ಪರಿವರ್ತಕಕ್ಕಾಗಿ ಅರ್ಜಿ ಸಲ್ಲಿಸಿ, ಠೇವಣಿ ಕೂಡ ಕಟ್ಟಿದ್ದಾರೆ. ರೈತ ಸಾಲಗಾರನಾಗಿ ನಷ್ಟ‌ ಅನುಭವಿಸುತ್ತಿದ್ದರೂ ಬೆಸ್ಕಾಂನಿಂದ ಮಾತ್ರ ವಿದ್ಯುತ್ ಪರಿವರ್ತಕ‌ ಬಂದಿಲ್ಲ. ಗ್ರಾಮದ ಅಶ್ವತ್ಥಪ್ಪ ಎಂಬುವರ ಬಳಿ ಲೈನ್ ಮನ್ ಒಬ್ಬರು ಟಿಸಿ ಹಾಗೂ ಕಂಬಕ್ಕಾಗಿ 50 ಸಾವಿರ ಪಡೆದು ಎರಡು ವರ್ಷವಾಗಿದೆ. ಈವರೆಗೂ ಟಿಸಿನೂ ಇಲ್ಲ, ಹಣನೂ ಇಲ್ಲ ಎಂದು 85 ವರ್ಷದ ವೃದ್ಧ ಅಶ್ವತ್ಥಪ್ಪ‌ ಕಣ್ಣೀರು ಹಾಕಿದರು.

ಟಿ‌.ಸಿಗಾಗಿ ಠೇವಣಿ‌ ಇರಿಸಿದ ಹಲವು ರೈತರ ಪಾಡು ಇದೇ ಹಾಗಿದೆ. ರೈತರ ಸಮಸ್ಯೆ ಕುರಿತು ಬೆಸ್ಕಾಂ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಬಜೆಟ್ ಬಂದಿಲ್ಲ. ಮಾರ್ಚ್ ತಿಂಗಳಲ್ಲಿ 63 ಕೆವಿ ಸಾಮರ್ಥ್ಯದ ಇನ್ನೊಂದು ವಿದ್ಯುತ್ ಪರಿವರ್ತಕ ಅಳವಡಿಸುತ್ತೇವೆ. ಸಾಸಲು ಹಾಗೂ ತೂಬಗೆರೆ ಹೋಬಳಿಯ 250 ವೈಯಕ್ತಿಕ ಫಲಾನುಭವಿಗಳಿಗೆ ಟಿಸಿ ಅಳವಡಿಸಲು ಕಾರ್ಯಾದೇಶ ನೀಡಲಾಗಿದೆ. ಶೀಘ್ರವೇ ವಿದ್ಯುತ್ ಪರಿವರ್ತಕ ಅಳವಡಿಸಲಾಗುವುದು ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಎಇಇ ಇನಾಯತ್ ಅವರು ತಿಳಿಸಿದರು.

ಇನ್ನು ಇದೇ ಸಮಸ್ಯೆ ಕುರಿತು ನೆಲಮಂಗಲದ ಬೆಸ್ಕಾಂ ಕಚೇರಿಯ ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನು ಪ್ರಶ್ನಿಸಿದರೆ, ಏನೇ ಹೇಳಬೇಕಾದರೂ ದೊಡ್ಡಬಳ್ಳಾಪುರ ಉಪವಿಭಾಗದ ಅಧಿಕಾರಿಗಳಿಗೆ ತಿಳಿಸಿ, ಅವರು ನಮ್ಮ ಗಮನಕ್ಕೆ ತರುತ್ತಾರೆ. ಆ ಬಳಿಕ ಸಮಸ್ಯೆ ಪರಿಶೀಲಿಸೋಣ ಎಂದು ಉಡಾಫೆ ಉತ್ತರ‌ ನೀಡುತ್ತಾರೆ. ಇದೇ ಕಾರ್ಯನಿರ್ವಾಹಕ‌ ಎಂಜಿನಿಯರ್ ಅವರಿಗೆ ಶಾಸಕರಾದಿಯಾಗಿ ಗ್ರಾ.ಪಂ. ಅಧ್ಯಕ್ಷರು ಸಾಕಷ್ಟು ಬಾರಿ ದೂರವಾಣಿ ಮೂಲಕ‌ ತಿಳಿಸಿದ್ದರೂ ಸಮಸ್ಯೆಯ ಗಂಭೀರತೆ ಮಾತ್ರ ಅಧಿಕಾರಿಗಿಲ್ಲ.

30 ಎಕರೆಗೂ ಹೆಚ್ಚು ಬೆಳೆ ನಾಶ

ಶ್ರೀರಾಮನಹಳ್ಳಿ ಗ್ರಾಮದಲ್ಲಿ  ವಿದ್ಯುತ್ ಪರಿವರ್ತಕದ ಸಮಸ್ಯೆಯಿಂದ ಸುಮಾರು 30 ಎಕರೆಗು ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ವಿದ್ಯುತ್ ಪರಿವರ್ತಕದ ಸಮೀಪವೇ ಬೆಳೆದಿರುವ ಅಡಿಕೆ ಸಸಿಗಳು ನೀರಿಲ್ಲದೇ ಒಣಗುತ್ತಿವೆ. ರಾಗಿ ಪೈರು, ಬಾಳೆ ಗಿಡಗಳು ಕೂಡ ಒಣಗಲಾರಂಭಿಸಿವೆ. ಕಳೆದ ವರ್ಷ ಸರಿಯಾದ ಮಳೆಯಾಗದೇ ಬೆಳೆ ನಾಶವಾಯಿತು. ಈ ವರ್ಷ ಬಿಸಿಲು ಹೆಚ್ಚಿದೆ. ವಿದ್ಯುತ್ ಅಭಾವ, ವಿದ್ಯುತ್ ಪರಿವರ್ತಕದ ಸಮಸ್ಯೆಯಿಂದ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಜೀವನಾಧಾರವಾದ ಕೃಷಿ ಕೈಕೊಟ್ಟರೆ ನಮ್ಮ ಬದುಕು ಹೇಗೆ ಎಂದು ಗ್ರಾಮಸ್ಥರಾದ ನರಸಿಂಹಮೂರ್ತಿ, ಮಂಜುನಾಥ್ ಹಾಗೂ ರೈತ‌ ಮಹಿಳೆ ಸಂಧ್ಯಾ ಅವರು ಪ್ರಶ್ನಿಸಿದರು.

ತಕ್ಷಣವೇ ಬೆಸ್ಕಾಂ ಅಧಿಕಾರಿಗಳು ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಒತ್ತಾಯಿಸಿದರು.

ಜನರೇಟರ್ ತರಿಸಿ ನೀರು ಹಾಯಿಸುವ ಸಾಹಸ

ವಿದ್ಯುತ್ ಪರಿವರ್ತಕ‌ ಒಮ್ಮೆ ಸುಟ್ಟು ಹೋದರೆ ಅದನ್ನು ದುರಸ್ತಿಗೊಳಿಸಲು ಬೆಸ್ಕಾಂ ಸಿಬ್ಬಂದಿ ಕನಿಷ್ಠ 20 ದಿನ ಸಮಯ ತೆಗೆದುಕೊಳ್ಳುತ್ತಾರೆ. ಇಂತಹ ಸಮಯದಲ್ಲಿ ಹೆಜ್ಜಾಜಿ ಸೇರಿ ಹಲವೆಡೆ ಜನರೇಟರ್ ತರಿಸಿ ನೀರು ಹಾಯಿಸುತ್ತೇವೆ. ಒಮ್ಮೆ ಜನರೇಟರ್ ಬಾಡಿಗೆಗೆ ತಂದರೆ ಅವರಿಗೆ ಸಾವಿರಾರು ರುಪಾಯಿ ತೆರಬೇಕಾಗುತ್ತದೆ. ಕಿ.ಮೀ.ಗಟ್ಟಲೇ ತೋಟಗಳಿಗೆ ವೈರ್ ತರಬೇಕಾಗಿದೆ ಹಾಗಾಗ ವೈರ್ ಸುಟ್ಟು ಹೋಗುವುದರಿಂದ ಗಾಯದ ಮೇಲೆ‌ ಬರೆ ಬಿದ್ದಂತಾಗುತ್ತದೆ ಎಂದು ರೈತರು ಅಳಲು ತೋಡಿಕೊಂಡರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

2 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

6 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

7 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

17 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago