ಗಡಿ ಭಾಗದ ಸಾಸಲು ಹೋಬಳಿಗೆ ಸಿಗುತ್ತಿಲ್ಲ‌ ಸಾಸಿವೆಯಷ್ಟು ಪ್ರಾತಿನಿಧ್ಯ: 18 ಕೊಳವೆ ಬಾವಿಗಳಿಗೆ ಒಂದೇ ವಿದ್ಯುತ್ ಪರಿವರ್ತಕ: ಬಾಡಿದ ಬೆಳೆಗಳು: ಸಂಕಷ್ಟದಲ್ಲಿ ರೈತರು

ತಾಲೂಕಿನ ಸಾಸಲು ಹೋಬಳಿ ಗಡಿ ಭಾಗದಲ್ಲಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಗಳು, ಆಡಳಿತ ವರ್ಗಕ್ಕೆ ಮಲತಾಯಿಯ ಮಗುವಿನಂತಾಗಿ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ.

ತಾಲೂಕಿನ ಬೇರೆ ಹೋಬಳಿಗಳಿಗೆ ಸಿಗುತ್ತಿರುವ ಪ್ರಾತಿನಿಧ್ಯದಲ್ಲಿ ಸಾಸಿವೆಯಷ್ಟು ಕಾಳಜಿ ಸಾಸಲು ಹೋಬಳಿ ಮೇಲೆ‌ ಕಾಣದಾಗಿದೆ. ಹೋಬಳಿಯಲ್ಲಿ ದಶಕಗಳಿಂದ ಶಿಕ್ಷಣ, ಆರೋಗ್ಯ, ಬಡತನದ ಸಮಸ್ಯೆ ಹಾಸು ಹೊಕ್ಕಾಗಿದೆ. ಆದರೆ, ಜನಪ್ರತಿನಿಧಿಗಳಿಗೆ ಸಾಸಲು ಹೋಬಳಿಯ ಸಮಸ್ಯೆ ಪಂಚವಾರ್ಷಿಕ‌, ಸಾಂದರ್ಭಿಕ ಚುನಾವಣೆಗಳಲ್ಲಿ ಪ್ರಚಾರದ ಸರಕಾಗಿ ಮಾತ್ರ ಬಳಕೆಯಾಗುತ್ತಿದೆ.

ಸರ್ಕಾರಿ ಸೇವೆಗಳಲ್ಲಿ ತೊಡಗಿಸಿಕೊಂಡ ಅತಿ ಹೆಚ್ಚಿನವರು ಸಾಸಲು ಹೋಬಳಿಯಿಂದ ಹೊರಗಡೆ ಹೋದವರೇ ಆದರೂ ಅಭಿವೃದ್ಧಿ ಕಾಣದಿರುವುದು ಯಕ್ಷಪ್ರಶ್ನೆಯಾಗಿದೆ.

ಹೋಬಳಿ ಕೇಂದ್ರದಿಂದ ಸುಮಾರು 2ಕಿಮೀ‌ ದೂರದಲ್ಲಿರುವ ಶ್ರೀರಾಮನಹಳ್ಳಿ ಗ್ರಾಮದಲ್ಲಿ ರೈತರು ಅಡಿಕೆ, ಬಾಳೆ, ತೆಂಗು ಹಾಗೂ ಇತರೆ ವಾಣಿಜ್ಯ ಬೆಳೆಗಳನ್ನು ಬೆಳೆಯುವ ಸಲುವಾಗಿ ಕೊಳವೆ ಬಾವಿ ಕೊರೆಸಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ವಿಪರ್ಯಾಸವೆಂದರೆ 18 ಕೊಳವೆ ಬಾವಿಗಳಿಗೆ ಇರುವುದು ಒಂದೇ ವಿದ್ಯುತ್ ಪರಿವರ್ತಕ. ಅತಿಯಾದ ಒತ್ತಡದಿಂದ ವಿದ್ಯುತ್ ಪರಿವರ್ತಕ(ಟ್ರಾನ್ಸ್ ಫಾರ್ಮರ್) ಪದೇ ಪದೇ ಸುಟ್ಟು ಹೋಗುತ್ತಿದೆ. ಒಮ್ಮೆ ವಿದ್ಯುತ್ ಪರಿವರ್ತಕ ರಿಪೇರಿ ಮಾಡಿಸಿದರೆ‌ ಎರಡು ದಿನ ಮಾತ್ರ ಸರಿಯಾಗಿ ಕೆಲಸ‌ನಿರ್ವಹಿಸುತ್ತದೆ. ನಂತರ ಸಮಸ್ಯೆ ಪುನರಾವರ್ತನೆಯಾಗುತ್ತದೆ.

ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಗ್ರಾಮಸ್ಥರು ಸಾಕಷ್ಟು ಬಾರಿ ಬೆಸ್ಕಾಂ ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ಸಬೂಬು ಹೇಳಿಕೊಂಡು ದಿನದೂಡುತ್ತಿದ್ದಾರೆ. ಇನ್ನು ಶ್ರೀರಾಮನಹಳ್ಳಿಯಲ್ಲಿರುವ ಇರುವುದು ಒಂದೇ ಒಂದು ವಿದ್ಯುತ್ ಪರಿವರ್ತಕಕ್ಕೆ ಮನೆಯಲ್ಲಿ ಕೊಳವೆ ಬಾವಿ ಹೊಂದಿದವರೂ ಕೂಡ ಸಂಪರ್ಕ ಪಡೆಯುತ್ತಿದ್ದು, ಮತ್ತಷ್ಟು ಒತ್ತಡದಿಂದ ಜಂಪ್ ಸುಟ್ಟುಹೋಗುವುದು ಸಾಮಾನ್ಯವಾಗಿದೆ.

ಗ್ರಾಮಸ್ಥರ ಮಧ್ಯೆ ಸದಾ ಜಗಳ

ವಿದ್ಯುತ್ ಪರಿವರ್ತಕಕ್ಕೆ‌ ಸಂಪರ್ಕ ಪಡೆಯುವ ವಿಚಾರವಾಗಿ ಗ್ರಾಮಸ್ಥರ ಮಧ್ಯೆ ಸಾಕಷ್ಟು ಜಗಳವಾಗಿದೆ. ಗ್ರಾಮಸ್ಥರ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದರೂ ಬೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿ‌ ಮಾತ್ರ ಜಾಣಕುರುಡು ಪ್ರದರ್ಶಿಸುತ್ತಿದ್ದಾರೆ.

ಗ್ರಾಮದ ಹಲವು ರೈತರು 4-5 ವರ್ಷಗಳ ಹಿಂದೆಯೇ ವೈಯಕ್ತಿಕ ವಿದ್ಯುತ್ ಪರಿವರ್ತಕಕ್ಕಾಗಿ ಅರ್ಜಿ ಸಲ್ಲಿಸಿ, ಠೇವಣಿ ಕೂಡ ಕಟ್ಟಿದ್ದಾರೆ. ರೈತ ಸಾಲಗಾರನಾಗಿ ನಷ್ಟ‌ ಅನುಭವಿಸುತ್ತಿದ್ದರೂ ಬೆಸ್ಕಾಂನಿಂದ ಮಾತ್ರ ವಿದ್ಯುತ್ ಪರಿವರ್ತಕ‌ ಬಂದಿಲ್ಲ. ಗ್ರಾಮದ ಅಶ್ವತ್ಥಪ್ಪ ಎಂಬುವರ ಬಳಿ ಲೈನ್ ಮನ್ ಒಬ್ಬರು ಟಿಸಿ ಹಾಗೂ ಕಂಬಕ್ಕಾಗಿ 50 ಸಾವಿರ ಪಡೆದು ಎರಡು ವರ್ಷವಾಗಿದೆ. ಈವರೆಗೂ ಟಿಸಿನೂ ಇಲ್ಲ, ಹಣನೂ ಇಲ್ಲ ಎಂದು 85 ವರ್ಷದ ವೃದ್ಧ ಅಶ್ವತ್ಥಪ್ಪ‌ ಕಣ್ಣೀರು ಹಾಕಿದರು.

ಟಿ‌.ಸಿಗಾಗಿ ಠೇವಣಿ‌ ಇರಿಸಿದ ಹಲವು ರೈತರ ಪಾಡು ಇದೇ ಹಾಗಿದೆ. ರೈತರ ಸಮಸ್ಯೆ ಕುರಿತು ಬೆಸ್ಕಾಂ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಬಜೆಟ್ ಬಂದಿಲ್ಲ. ಮಾರ್ಚ್ ತಿಂಗಳಲ್ಲಿ 63 ಕೆವಿ ಸಾಮರ್ಥ್ಯದ ಇನ್ನೊಂದು ವಿದ್ಯುತ್ ಪರಿವರ್ತಕ ಅಳವಡಿಸುತ್ತೇವೆ. ಸಾಸಲು ಹಾಗೂ ತೂಬಗೆರೆ ಹೋಬಳಿಯ 250 ವೈಯಕ್ತಿಕ ಫಲಾನುಭವಿಗಳಿಗೆ ಟಿಸಿ ಅಳವಡಿಸಲು ಕಾರ್ಯಾದೇಶ ನೀಡಲಾಗಿದೆ. ಶೀಘ್ರವೇ ವಿದ್ಯುತ್ ಪರಿವರ್ತಕ ಅಳವಡಿಸಲಾಗುವುದು ಎಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಎಇಇ ಇನಾಯತ್ ಅವರು ತಿಳಿಸಿದರು.

ಇನ್ನು ಇದೇ ಸಮಸ್ಯೆ ಕುರಿತು ನೆಲಮಂಗಲದ ಬೆಸ್ಕಾಂ ಕಚೇರಿಯ ಕಾರ್ಯನಿರ್ವಾಹಕ ಎಂಜಿನಿಯರ್ ಅವರನ್ನು ಪ್ರಶ್ನಿಸಿದರೆ, ಏನೇ ಹೇಳಬೇಕಾದರೂ ದೊಡ್ಡಬಳ್ಳಾಪುರ ಉಪವಿಭಾಗದ ಅಧಿಕಾರಿಗಳಿಗೆ ತಿಳಿಸಿ, ಅವರು ನಮ್ಮ ಗಮನಕ್ಕೆ ತರುತ್ತಾರೆ. ಆ ಬಳಿಕ ಸಮಸ್ಯೆ ಪರಿಶೀಲಿಸೋಣ ಎಂದು ಉಡಾಫೆ ಉತ್ತರ‌ ನೀಡುತ್ತಾರೆ. ಇದೇ ಕಾರ್ಯನಿರ್ವಾಹಕ‌ ಎಂಜಿನಿಯರ್ ಅವರಿಗೆ ಶಾಸಕರಾದಿಯಾಗಿ ಗ್ರಾ.ಪಂ. ಅಧ್ಯಕ್ಷರು ಸಾಕಷ್ಟು ಬಾರಿ ದೂರವಾಣಿ ಮೂಲಕ‌ ತಿಳಿಸಿದ್ದರೂ ಸಮಸ್ಯೆಯ ಗಂಭೀರತೆ ಮಾತ್ರ ಅಧಿಕಾರಿಗಿಲ್ಲ.

30 ಎಕರೆಗೂ ಹೆಚ್ಚು ಬೆಳೆ ನಾಶ

ಶ್ರೀರಾಮನಹಳ್ಳಿ ಗ್ರಾಮದಲ್ಲಿ  ವಿದ್ಯುತ್ ಪರಿವರ್ತಕದ ಸಮಸ್ಯೆಯಿಂದ ಸುಮಾರು 30 ಎಕರೆಗು ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ. ವಿದ್ಯುತ್ ಪರಿವರ್ತಕದ ಸಮೀಪವೇ ಬೆಳೆದಿರುವ ಅಡಿಕೆ ಸಸಿಗಳು ನೀರಿಲ್ಲದೇ ಒಣಗುತ್ತಿವೆ. ರಾಗಿ ಪೈರು, ಬಾಳೆ ಗಿಡಗಳು ಕೂಡ ಒಣಗಲಾರಂಭಿಸಿವೆ. ಕಳೆದ ವರ್ಷ ಸರಿಯಾದ ಮಳೆಯಾಗದೇ ಬೆಳೆ ನಾಶವಾಯಿತು. ಈ ವರ್ಷ ಬಿಸಿಲು ಹೆಚ್ಚಿದೆ. ವಿದ್ಯುತ್ ಅಭಾವ, ವಿದ್ಯುತ್ ಪರಿವರ್ತಕದ ಸಮಸ್ಯೆಯಿಂದ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಜೀವನಾಧಾರವಾದ ಕೃಷಿ ಕೈಕೊಟ್ಟರೆ ನಮ್ಮ ಬದುಕು ಹೇಗೆ ಎಂದು ಗ್ರಾಮಸ್ಥರಾದ ನರಸಿಂಹಮೂರ್ತಿ, ಮಂಜುನಾಥ್ ಹಾಗೂ ರೈತ‌ ಮಹಿಳೆ ಸಂಧ್ಯಾ ಅವರು ಪ್ರಶ್ನಿಸಿದರು.

ತಕ್ಷಣವೇ ಬೆಸ್ಕಾಂ ಅಧಿಕಾರಿಗಳು ಹೆಚ್ಚುವರಿ ವಿದ್ಯುತ್ ಪರಿವರ್ತಕ ಅಳವಡಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಒತ್ತಾಯಿಸಿದರು.

ಜನರೇಟರ್ ತರಿಸಿ ನೀರು ಹಾಯಿಸುವ ಸಾಹಸ

ವಿದ್ಯುತ್ ಪರಿವರ್ತಕ‌ ಒಮ್ಮೆ ಸುಟ್ಟು ಹೋದರೆ ಅದನ್ನು ದುರಸ್ತಿಗೊಳಿಸಲು ಬೆಸ್ಕಾಂ ಸಿಬ್ಬಂದಿ ಕನಿಷ್ಠ 20 ದಿನ ಸಮಯ ತೆಗೆದುಕೊಳ್ಳುತ್ತಾರೆ. ಇಂತಹ ಸಮಯದಲ್ಲಿ ಹೆಜ್ಜಾಜಿ ಸೇರಿ ಹಲವೆಡೆ ಜನರೇಟರ್ ತರಿಸಿ ನೀರು ಹಾಯಿಸುತ್ತೇವೆ. ಒಮ್ಮೆ ಜನರೇಟರ್ ಬಾಡಿಗೆಗೆ ತಂದರೆ ಅವರಿಗೆ ಸಾವಿರಾರು ರುಪಾಯಿ ತೆರಬೇಕಾಗುತ್ತದೆ. ಕಿ.ಮೀ.ಗಟ್ಟಲೇ ತೋಟಗಳಿಗೆ ವೈರ್ ತರಬೇಕಾಗಿದೆ ಹಾಗಾಗ ವೈರ್ ಸುಟ್ಟು ಹೋಗುವುದರಿಂದ ಗಾಯದ ಮೇಲೆ‌ ಬರೆ ಬಿದ್ದಂತಾಗುತ್ತದೆ ಎಂದು ರೈತರು ಅಳಲು ತೋಡಿಕೊಂಡರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

7 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

10 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago