ಗಣರಾಜ್ಯೋತ್ಸವ 2025 : ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ: ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ

ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು.

ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ. ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಿತು.

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ.

ನಮ್ಮ ರಾಜ್ಯವು ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಲೇ ಸಾಗಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಿತು.

ನಿಗದಿತ ರೂಪು ರೇಷೆಗಳಂತೆ ಈ ಸ್ತಬ್ಧಚಿತ್ರ ದಿನಗಳ ಲೆಕ್ಕದಲ್ಲಿ ಮೈದಳೆದಿದೆ. ಕಡಿಮೆ ಅವಧಿಯಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಸ್ತಬ್ಧಚಿತ್ರ ಕಣ್ಣಿಗೆ ಕಟ್ಟುವ ರೀತಿಯಲ್ಲಿ ಮೂಡಿ ಬಂದಿದ್ದು ವಿಶೇಷ ಎನಿಸಿದೆ.

ಅಹಿಂಸಾವಾದಿಯ ನೆಲೆಬೀಡು,ಶಿಲ್ಪಕಲೆಯ ತೊಟ್ಟಿಲಾದ ಲಕ್ಕುಂಡಿಯಲ್ಲಿ ಶೈವ, ಜೈನ ಮತ್ತು ವೈಷ್ಣವ ದೇವಾಲಯಗಳಿವೆ. ಕಲಾತ್ಮಕತೆಯಿಂದ ಕಂಗೊಳಿಸುವ ಇಲ್ಲಿನ ದೇವಾಲಯಗಳು ಸ್ತಬ್ಧಚಿತ್ರದಲ್ಲಿ ಅವುಗಳ ಪಡಿಯಚ್ಚಿನಂತೆ ಮೂಡಿಬಂದಿದ್ದು, ದೇವಾಲಯವೇ ಮರುಜೀವ ತಳೆದಂತಿದೆ. ರಾಜ್ಯವು ಪ್ರಸ್ತುತ ಪಡಿಸುತ್ತಿರುವ ಈ ಸ್ತಬ್ಧಚಿತ್ರವು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಸ್ತಬ್ಧಚಿತ್ರದಲ್ಲಿ ಲಕ್ಕುಂಡಿಯ ದೇವಾಲಯಗಳು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಿತು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರ ಉಸ್ತುವಾರಿಯಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಕಲಾ ನಿರ್ದೇಶಕ ಶಶಿಧರ ಅಡಪ ಅವರು ಕಲಾ ನಿರ್ದೇಶನ ಮಾಡಿದ್ದಾರೆ.

ಸಂಗೀತ ನಿರ್ದೇಶಕ ಪ್ರವೀಣ್ ಡಿ.ರಾವ್ ಅವರು ಕನ್ನಡ ಸಾಹಿತ್ಯ ಇರುವ ಸುಮಧುರವಾದ ಸಂಗೀತ ಕರ್ತವ್ಯಪಥದಲ್ಲಿ ನಿನಾದಿಸಿ ಕೇಳುಗರ ಮನಸೂರಗೊಂಡಿತು. ಮೈಸೂರು,ಬೆಂಗಳೂರು,ಗದಗ ಮತ್ತು ಧಾರವಾಡದಿಂದ ಆಗಮಿಸಿದ 18 ಜನ ಕಲಾವಿದರಿರುವ ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ತಲಾ ನಾಲ್ಕು ಮಂದಿ ಮಹಿಳೆಯರು ಮತ್ತು ಪುರುಷರು ಜಗ್ಗಲಿಗೆ ಬಾರಿಸುತ್ತಾ,ಸಾಂಪ್ರದಾಯಿಕ ಉಡುಪಿನಲ್ಲಿ

ಕರ್ತವ್ಯಪಥದಲ್ಲಿ ಕಂಗೊಳಿಸಿದರು. ಇನ್ನುಳಿದ 10 ಜನ ಕಲಾವಿದರು ಸ್ತಬ್ಧಚಿತ್ರದ ಮೇಲುಭಾಗದಲ್ಲಿ ಪ್ರವಾಸಿಗರಾಗಿ ಗಮನಸೆಳೆದರು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ‘ಶಿಲ್ಪಕಲೆಯ ತೊಟ್ಟಿಲು’ ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು,ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, 10 ರಿಂದ 12ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.
ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ / ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸಿತು.

2022ರ ಇಲಾಖೆಯು ಪ್ರದರ್ಶಿಸಿದ್ದ ʼಸಾಂಪ್ರದಾಯಿಕ ಕಸೂತಿ ತೊಟ್ಟಿಲುʼಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‍ನ ಪಾರಂಪರಿಕ ಕಲೆಯಾದ ‘ಬಿದರಿ’ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೋಯ್ಸಳ ವಾಸ್ತುಶಿಲ್ಪಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು. 2005ರಲ್ಲಿ ವೈರಾಗ್ಯ ಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು.

2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‍ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ್ಮ ರಾಜ್ಯವು ಮಾಡಿದೆ ಎನ್ನುವುದು ಹೆಮ್ಮೆಯ ಸಂಗತಿಯಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 hours ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

2 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 days ago